‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾಗೆ ಸುಮಾರು 52 ದಿನಗಳ ಕಾಲ ಮಂಡ್ಯದಲ್ಲಿ ಶೂಟಿಂಗ್ ಮಾಡಲಾಗಿದೆ. ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿವೆ. ಇನ್ನು ಕೆಲವೇ ತಿಂಗಳಲ್ಲಿ ರಿಲೀಸ್ ಮಾಡುವ ಗುರಿ ಇದೆ. ಕನ್ನಡ ಮಾತ್ರವಲ್ಲದೇ ಬೇರೆ ಭಾಷೆಗಳಲ್ಲೂ ಸಿನಿಮಾ ತೆರೆಕಾಣಿಸುವ ಆಲೋಚನೆ ಈ ಚಿತ್ರತಂಡಕ್ಕಿದೆ.

‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ ಸಚಿವ ವಿ. ಸೋಮಣ್ಣ
Sarkari Nyaya Bele Angadi Movie Team

Updated on: Mar 03, 2026 | 8:15 PM

ಕುಮಾರ್ ಬಂಗಾರಪ್ಪ, ದೊಡ್ಡಣ್ಣ, ರಾಗಿಣಿ ದ್ವಿವೇದಿ (Ragini Dwivedi) ಮುಂತಾದವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸುತ್ತಿದ್ದಾರೆ. ಈ ಚಿತ್ರಕ್ಕೆ ಈಗಾಗಲೇ ಶೂಟಿಂಗ್ ಪೂರ್ಣಗೊಂಡಿದೆ. ಚಿತ್ರದ ಶೀರ್ಷಿಕೆಯೇ ತಿಳಿಸುತ್ತಿರುವಂತೆ ಸರ್ಕಾರಿ ನ್ಯಾಯಬೆಲೆ ಅಂಗಡಿ (Sarkari Nyaya Bele Angadi) ಮತ್ತು ಪಡಿತರ ವ್ಯವಸ್ಥೆಯ ಸುತ್ತ ನಡೆಯುವಂತಹ ಕಥಾಹಂದರವನ್ನು ಈ ಸಿನಿಮಾ ತೆರೆದಿಡಲಿದೆ. ಗ್ರಾಮೀಣ ಸೊಗಡಿನ ಕಥೆಯಿರುವ ಈ ಸಿನಿಮಾದ ಸಂಪೂರ್ಣ ಚಿತ್ರೀಕರಣವನ್ನು ಮಂಡ್ಯ ಜಿಲ್ಲೆಯಲ್ಲಿ ಮಾಡಲಾಗಿದೆ. ಕೇಂದ್ರ ಜಲ ಶಕ್ತಿ ಮತ್ತು ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ (V Somanna) ಅವರು ಈ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಭಾ.ಮ. ಹರೀಶ್‌, ಭಾ.ಮ. ಗಿರೀಶ್‌, ಚೆಲುವ ಮೂರ್ತಿ ಸೇರಿದಂತೆ ಚಿತ್ರರಂಗ ಮತ್ತು ರಾಜಕೀಯದ ಅನೇಕ ಗಣ್ಯರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ ವೇಳೆ ಹಾಜರಿದ್ದರು. ಪೋಸ್ಟರ್ ಬಿಡುಗಡೆ ಬಳಿಕ ಸಿನಿಮಾ ಬಗ್ಗೆ ವಿ. ಸೋಮಣ್ಣ ಅವರು ಮಾತನಾಡಿದರು. ಚಿತ್ರತಂಡ ಪ್ರಯತ್ನವನ್ನು ಮೆಚ್ಚಿ ಅವರು ಶುಭ ಹಾರೈಸಿದರು.

‘ಬಡವರು ಹಸಿವಿನಿಂದ ಬಳಲಬಾರದು ಎಂಬ ಉದ್ದೇಶದಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸರ್ಕಾರಿ ನ್ಯಾಯಬೆಲೆ ಅಂಗಡಿ ಮೂಲಕ ದಿನಸಿ ಮತ್ತು ಆಹಾರವನ್ನು ಜನರಿಗೆ ತಲುಪಿಸುವ ಕೆಲಸ ಮಾಡುತ್ತಿದೆ. ಆದರೆ ಈ ವ್ಯವಸ್ಥೆಯಲ್ಲಿರುವ ಕೆಲವು ಲೋಪಗಳಿಂದ ಇದರ ಉದ್ದೇಶ ಪರಿಣಾಮಕಾರಿಯಾಗಿ ಈಡೇರುತ್ತಿಲ್ಲ. ಇದೇ ವಿಷಯವನ್ನು ಇಟ್ಟುಕೊಂಡು ಸಿನಿಮಾ ಮಾಡಿರುವುದು ನಿಜಕ್ಕೂ ಶ್ಲಾಘನೀಯ. ಸಾಮಾಜಿಕ ಕಳಕಳಿಯ ವಿಷಯಗಳನ್ನು ಸಿನಿಮಾ ಮೂಲಕ ಹೇಳಿದಾಗ ಪರಿಣಾಮಕಾರಿಯಾಗಿ ಪ್ರೇಕ್ಷಕರನ್ನು ತಲುಪುತ್ತದೆ’ ಎಂದು ವಿ. ಸೋಮಣ್ಣ ಹೇಳಿದರು.

ನಟ ಕುಮಾರ್ ಬಂಗಾರಪ್ಪ ಅವರು ಮಾತನಾಡಿ, ‘ಪಡಿತರ ವ್ಯವಸ್ಥೆಯ ಮೇಲೆ ಮೂಡಿಬರುತ್ತಿರುವ ಮೊಟ್ಟ ಮೊದಲ ಸಿನಿಮಾ ಇದು. ಮನರಂಜನೆ ಜೊತೆಗೆ ಒಂದು ಒಳ್ಳೆಯ ಸಂದೇಶ ಸಹ ಈ ಸಿನಿಮಾದಲ್ಲಿದೆ. ನ್ಯಾಯಬೆಲೆ ಅಂಗಡಿಯಲ್ಲಿ ಏನೇನು ಅವ್ಯವಹಾರಗಳು ನಡೆಯುತ್ತದೆ ಎಂಬುದನ್ನು ಸಮಾಜಕ್ಕೆ ತೋರಿಸುವಂಥ ಕಥೆ ಈ ಸಿನಿಮಾದಲ್ಲಿದೆ’ ಎಂದು ಹೇಳಿದರು.

ಇದನ್ನೂ ಓದಿ: ‘ಡೆವಿಲ್​​ನಲ್ಲಿ ನಾನು ನಟಿಸಬೇಕಿತ್ತು, ಆದರೆ..’; ವಿವರಿಸಿದ ರಾಗಿಣಿ ದ್ವಿವೇದಿ

ನಟಿ ರಾಗಿಣಿ ದ್ವಿವೇದಿ ಅವರು ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಸಿನಿಮಾದಲ್ಲಿ ಪಾರ್ವತಿ ಎಂಬ ಗ್ರಾಮೀಣ ಮಹಿಳೆಯ ಪಾತ್ರವನ್ನು ಮಾಡಿದ್ದಾರೆ. ‘ಜಯಶಂಕರ ಟಾಕೀಸ್‌’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ತೇಜು ಮೂರ್ತಿ ಹಾಗೂ ಪದ್ಮಾವತಿ ಚಂದ್ರಶೇಖರ್‌ ಅವರು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಅನಂತ್‌ ಆರ್ಯನ್‌ ಸಂಗೀತ ನೀಡಿದ್ದಾರೆ. ಬಿ. ರಾಮಮೂರ್ತಿ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. ಸಾತ್ವಿಕ್‌ ಪವನ್‌ ಕುಮಾರ್‌ ಅವರು ಛಾಯಾಗ್ರಹಣ ಹಾಗೂ ನಿರ್ದೇಶನ ಮಾಡುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us