ಸುಪ್ರೀಂ ಕೋರ್ಟ್​ನಲ್ಲಿ ದರ್ಶನ್ ಕೇಸ್; ಹಿರಿಯ ವಕೀಲ ಕಪಿಲ್ ಸಿಬಲ್ ಭೇಟಿ

ಹೈಕೋರ್ಟ್​ನಲ್ಲಿ ಜಾಮೀನು ಪಡೆದ ದರ್ಶನ್ ಅವರು ಸುಪ್ರೀಂ ಕೋರ್ಟ್​ನಲ್ಲಿ ವಿಚಾರಣೆ ಎದುರಿಸುವುದು ಬಾಕಿ ಇದೆ. ಖ್ಯಾತ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದರ್ಶನ್​ ಹಾಗೂ ಇನ್ನುಳಿದ ಆರೋಪಿಗಳ ಪರವಾಗಿ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್​ನಲ್ಲಿ ವಾದ ಮಾಡಲಿದ್ದಾರೆ.

ಸುಪ್ರೀಂ ಕೋರ್ಟ್​ನಲ್ಲಿ ದರ್ಶನ್ ಕೇಸ್; ಹಿರಿಯ ವಕೀಲ ಕಪಿಲ್ ಸಿಬಲ್ ಭೇಟಿ
Darshan, Kapil Sibal

Updated on: Feb 18, 2025 | 4:08 PM

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರಿಗೆ ಹೈಕೋರ್ಟ್​ನಲ್ಲಿ ಜಾಮೀನು ಸಿಕ್ಕಿದ್ದರೂ ಕೂಡ ಪೂರ್ಣ ಪ್ರಮಾಣದಲ್ಲಿ ರಿಲೀಫ್ ಸಿಕ್ಕಿಲ್ಲ. ಜಾಮೀನು ಪ್ರಶ್ನಿಸಿ ಬೆಂಗಳೂರು ಪೊಲೀಸರು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಹಾಗಾಗಿ ದರ್ಶನ್​ ಹಾಗೂ ಇನ್ನುಳಿದ ಆರೋಪಿಗಳಿಗೆ ಮತ್ತೆ ಕಾನೂನಿನ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಸುಪ್ರೀಂ ಕೋರ್ಟ್​ನಲ್ಲಿ ತಮ್ಮ ಪರ ವಾದ ಮಾಡಲು ಖ್ಯಾತ ವಕೀಲರನ್ನೇ ದರ್ಶನ್ ಸಂಪರ್ಕಿಸಿದ್ದಾರೆ. ಹೌದು, ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ಭೇಟಿ ಆಗಿದ್ದಾರೆ.

ಅನೇಕ ಹೈಪ್ರೊಫೈಲ್ ಕೇಸ್​ಗಳನ್ನು ನಿಭಾಯಿಸಿದ ಖ್ಯಾತಿ ಕಪಿಲ್ ಸಿಬಲ್ ಅವರಿಗೆ ಇದೆ. ಈಗ ದರ್ಶನ್ ಕುಟುಂಬದವರು ಕೂಡ ಅವರನ್ನೇ ಭೇಟಿಯಾಗಿ ಬಂದಿದ್ದಾರೆ. ಕಪಿಲ್ ಸಿಬಲ್ ಭೇಟಿಯಾಗಿ ಚರ್ಚೆ ನಡೆಸಲಾಗಿದೆ. ಹೈಕೋರ್ಟ್​ನಲ್ಲಿ ನಡೆದ ವಾದ-ಪ್ರತಿವಾದ ಹಾಗೂ ಕೇಸ್ ಹಿಸ್ಟರಿಯ ಮಾಹಿತಿಯನ್ನು ಅವರಿಗೆ ನೀಡಲಾಗಿದೆ. ದರ್ಶನ್, ಪವಿತ್ರಾ ಗೌಡ ಸೇರಿ 7 ಆರೋಪಿಗಳ ಪರವಾಗಿ ಕಪಿಲ್ ಸಿಬಲ್ ಅವರು ಸುಪ್ರೀಂ ಕೋರ್ಟ್​ನಲ್ಲಿ ವಾದ ಮಾಡಲಿದ್ದಾರೆ.

ಮಾರ್ಚ್ 18ರಂದು ಸುಪ್ರೀಂ ಕೋರ್ಟ್​ನಲ್ಲಿ ಮೇಲ್ಮನವಿ ವಿಚಾರಣೆ ನಡೆಯಲಿದೆ. ಈಗಾಗಲೇ ಹೈಕೋರ್ಟ್​ನಲ್ಲಿ ಗೆಲುವು ಪಡೆದ ರೀತಿಯೇ ಸುಪ್ರೀಂ ಕೋರ್ಟ್​ನಲ್ಲಿ ಕೂಡ ಗೆಲುವಿಗೆ ದರ್ಶನ್​ ಕಸರತ್ತು ನಡೆಸುತ್ತಿದ್ದಾರೆ. ಹೀಗಾಗಿ ಖ್ಯಾತ ಹಿರಿಯ ವಕೀಲ ಕಪಿಲ್ ಸಿಬಲ್ ಅವರನ್ನು ದರ್ಶನ್ ಕುಟುಂಬದವರು ನೇಮಿಸಿಕೊಂಡಿದ್ದಾರೆ. ಸುಪ್ರೀಂ ಕೋರ್ಟ್ ಯಾವ ರೀತಿ ತೀರ್ಪು ನೀಡಲಿದೆ ಎಂಬುದರ ಮೇಲೆ ದರ್ಶನ್, ಪವಿತ್ರಾ ಗೌಡ ಹಾಗೂ ಇನ್ನುಳಿದ ಆರೋಪಿಗಳ ಭವಿಷ್ಯ ನಿರ್ಧಾರ ಆಗಲಿದೆ.

ಇದನ್ನೂ ಓದಿ: ದರ್ಶನ್ ಸಿನಿಮಾದ ಹಾಡು ಹೇಳುತ್ತಾ ಮೈ ಮರೆತ ರಚಿತಾ ರಾಮ್

ಪ್ರಕರಣದ ಹಿನ್ನೆಲೆ:

ದರ್ಶನ್ ಸ್ನೇಹಿತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಆರೋಪ ಇತ್ತು. ಆತನನ್ನು ಬೆಂಗಳೂರಿಗೆ ಕರೆದುಕೊಂಡು ಬಂದು ಚಿತ್ರಹಿಂಸೆ ನೀಡಿ ಸಾಯಿಸಿದ ಆರೋಪದಲ್ಲಿ ಪವಿತ್ರಾ ಗೌಡ, ದರ್ಶನ್ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಬೆಂಗಳೂರಿನ ಪರಪ್ಪನ ಅಗ್ರಹಾರ ಹಾಗೂ ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿ ದರ್ಶನ್ ಅವರನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಲಾಗಿತ್ತು. ಬಳಿಕ ಅವರಿಗೆ ಕರ್ನಾಟಕ ಹೈಕೋರ್ಟ್​ನಲ್ಲಿ ಜಾಮೀನು ಸಿಕ್ಕಿತ್ತು. ಅದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us