
‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋ ಆರಂಭಕ್ಕೆ ದಿನಗಣನೆ ಶುರುವಾಗಿದೆ. ಈ ಬಾರಿ ಕೂಡ ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ನಡೆಯಬೇಕಿದೆ. ಕಿಚ್ಚ ಸುದೀಪ್ (Kichcha Sudeep) ಅವರು ಶೋ ನಿರೂಪಣೆ ಮಾಡಲು ಸಜ್ಜಾಗಿದ್ದಾರೆ. ಆದರೆ ಕಳೆದ ಸೀಸನ್ ವೇಳೆ ಉಂಟಾದ ವಿವಾದದಿಂದ ಈ ಬಾರಿ ಸರ್ಕಾರದ ಅನುಮತಿ ಇನ್ನೂ ಸಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಅವರು ಬಿಗ್ ಬಾಸ್ ಕುರಿತ ಪ್ರಶ್ನೆಗೆ ಉತ್ತರ ನೀಡಿದರು.
ಅರಣ್ಯ, ಪರಿಸರ ಹಾಗೂ ಜೀವಿಶಾಸ್ತ್ರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಸಚಿವ ರಾಮಲಿಂಗಾ ರೆಡ್ಡಿ ಅವರು ಮಾತನಾಡಿದರು. ‘ಬಿಗ್ ಬಾಸ್ ಶೋ ನಡೆಸಲು ಇನ್ನೂ ಅನುಮತಿ ಕೊಟ್ಟಿಲ್ಲ. ಅನುಮತಿ ಕೇಳಿದ್ದಾರಾ ಅಂತ ತಿಳಿದುಕೊಂಡು ಹೇಳುತ್ತೇನೆ’ ಎಂದಿದ್ದಾರೆ ರಾಮಲಿಂಗಾ ರೆಡ್ಡಿ. ‘ಬಿಗ್ ಬಾಸ್ ಆಯೋಜಕರು ಒಂದು ವೇಳೆ ನಿಯಮ ಮೀರಿದರೆ ದಂಡ ಹಾಕಿ’ ಎಂದು ಕೂಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನು ಸರಿಯಾಗಿ ಪಾಲಿಸಿಲ್ಲ ಎಂಬ ಕಾರಣಕ್ಕೆ ‘ಬಿಗ್ ಬಾಸ್ ಕನ್ನಡ ಸೀಸನ್ 12’ರಲ್ಲಿ ತೊಂದರೆ ಉಂಟಾಗಿತ್ತು. ನಂತರ ಅದನ್ನು ಸರಿಪಡಿಸಿಕೊಂಡು ಶೋ ಮುಂದುವರಿಸಲಾಗಿತ್ತು. ಈ ಬಾರಿ ಇನ್ನಷ್ಟು ಎಚ್ಚರಿಕೆ ವಹಿಸುವ ಅವಶ್ಯಕತೆ ಇದೆ. ಆದರೆ ಶೋ ಆರಂಭಕ್ಕೆ ಕೆಲವೇ ದಿನಗಳು ಉಳಿದಿರುವಾಗ ಇನ್ನೂ ಸರ್ಕಾರದ ಅನುಮತಿ ಪಡೆದಿಲ್ಲ ಎಂಬ ವಿಷಯ ತಿಳಿದು ಬಂದಿದೆ.
ಸೆಪ್ಟೆಂಬರ್ 6ರಂದು ‘ಬಿಗ್ ಬಾಸ್ ಕನ್ನಡ ಸೀಸನ್ 13’ ಆರಂಭಿಸಲು ದಿನಾಂಕ ನಿಗದಿ ಮಾಡಲಾಗಿದೆ. ಈಗಾಗಲೇ ಸುದೀಪ್ ಅವರ ಪ್ರೋಮೋಗಳು ಬಿಡುಗಡೆ ಆಗಿ ಗಮನ ಸೆಳೆದಿವೆ. ಯಾವೆಲ್ಲ ಸ್ಪರ್ಧಿಗಳು ಈ ಬಾರಿ ದೊಡ್ಮನೆಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕುತೂಹಲ ಮೂಡಿದೆ. ಇಂಥ ಸಂದರ್ಭದಲ್ಲಿ ಸರ್ಕಾರದ ಅನುಮತಿ ಪಡೆದಿಲ್ಲ ವಿಷಯ ತಿಳಿದು ಅಚ್ಚರಿ ಆಗಿದೆ.
ಇನ್ನೂ ಓದಿ: ಬಿಗ್ ಬಾಸ್ ಧಮಾಕಾ; ಒಂದೇ ವೇದಿಕೆಯಲ್ಲಿ ನಾಲ್ಕು ಭಾರತೀಯ ಚಿತ್ರರಂಗದ ದಿಗ್ಗಜರು
ಈ ಬಾರಿ ಬಿಗ್ ಬಾಸ್ ಮನೆಗೆ ಸೆಲೆಬ್ರಿಟಿಗಳು ಮಾತ್ರವಲ್ಲದೇ ಜನಸಾಮಾನ್ಯರು ಕೂಡ ಎಂಟ್ರಿ ನೀಡಲಿದ್ದಾರೆ. ಅದಕ್ಕಾಗಿ ಈಗಾಗಲೇ ಆಡಿಷನ್ ಮಾಡಲಾಗಿದೆ. ಅಂತಿಮ ಹಂತದ ಆಡಿಷನ್ ಪ್ರಕ್ರಿಯೆಯನ್ನು ‘ಅಗ್ನಿ ಪರೀಕ್ಷೆ’ ಸಂಚಿಕೆಗಳ ಮೂಲಕ ತೋರಿಸಲಾಗಿದೆ. ಅದು ಕೂಡ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.