
ದಕ್ಷಿಣ ಭಾರತೀಯ ಚಿತ್ರರಂಗದ ಹಿರಿಯ ನಟಿ ಸಾಹುಕಾರ್ ಜಾನಕಿ ಅವರು ಅನಾರೋಗ್ಯದ ಕಾರಣದಿಂದ ಚೆನ್ನೈನ ಅಲ್ವಾರ್ಪೇಟೆಯಲ್ಲಿರುವ ಕಾವೇರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮಿಳು, ತೆಲುಗು, ಕನ್ನಡ ಹಾಗೂ ಮಲಯಾಳಂ ಭಾಷೆಗಳಲ್ಲಿ 400ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿರುವ ಇವರು ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಅವರಿಗೆ ಈಗ ಚಿಕಿತ್ಸೆ ನೀಡಲಾಗುತ್ತಿದೆ.
ಸಾಹುಕಾರ್ ಜಾನಕಿ ಅವರು ಕನ್ನಡ ಚಿತ್ರರಂಗದಲ್ಲೂ ಸಕ್ರಿಯರಾಗಿ ನಟಿಸಿ ಸೈ ಎನಿಸಿಕೊಂಡಿದ್ದಾರೆ. ಜಾನಕಿ ಚಿತ್ರರಂಗಕ್ಕೆ ಬಂದಿದ್ದು 1950ರಲ್ಲಿ. ‘ಸಾಹುಕಾರ್’ ಅವರ ಮೊದಲ ಸಿನಿಮಾ. ಈ ಚಿತ್ರದ ಕಾರಣದಿಂದಲೇ ಅವರಿಗೆ ಸಾಹುಕಾರ್ ಎಂಬ ಬಿರುದು ಸಿಕ್ಕಿತು. 1954ರಲ್ಲಿ ಮೂಡಿಬಂದ ‘ದೇವಕನ್ನಿಕಾ’ ಚಿತ್ರದ ಮೂಲಕ ಕನ್ನಡ ಬೆಳ್ಳಿಪರದೆಗೆ ಪಾದಾರ್ಪಣೆ ಮಾಡಿದರು. ನಂತರ ಹಲವು ಪ್ರಸಿದ್ಧ ಕನ್ನಡ ಚಿತ್ರಗಳಲ್ಲಿ ಅಭಿನಯಿಸಿ ಕನ್ನಡಿಗರ ಮನ ಗೆದ್ದರು. ಗೌರಿ, ಭಾಗ್ಯ ಚಕ್ರ, ಕನ್ಯಾರತ್ನ, ರತ್ನಗಿರಿ ರಹಸ್ಯ, ಸ್ಕೂಲ್ ಮಾಸ್ಟರ್, ಶಬ್ದವೇಧಿ ಚಿತ್ರಗಳಲ್ಲಿ ಅಭಿನಯಿಸಿದರು. ಇವರ ನಟನೆ ಕೌಟುಂಬಿಕ ಪಾತ್ರಗಳು ಇಂದಿಗೂ ಪ್ರೇಕ್ಷಕರ ಮನಸ್ಸಿನಲ್ಲಿ ಹಸಿರಾಗಿವೆ.
ಸಾಹುಕಾರ್ ಜಾನಕಿ ಆಸ್ಪತ್ರೆಗೆ ದಾಖಲಾಗಿರುವ ವಿಷಯ ತಿಳಿಯುತ್ತಿದ್ದಂತೆ ದಕ್ಷಿಣ ಭಾರತೀಯ ಕಲಾವಿದರ ಸಂಘದ ಸದಸ್ಯರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ನಟರಾದ ನಾಸರ್, ಸೌಂದರ್ಯರಾಜ ಮತ್ತು ಹೇಮಚಂದ್ರನ್ ಅವರು ನಟಿಯನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ.
ಇದನ್ನೂ ಓದಿ: ಪುನೀತ್ ಒಡನಾಟ ನೆನೆದ ಮಲಯಾಳಂ ಹಿರಿಯ ನಟಿ
ಇವರು ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ ಕಿರುತೆರೆಯಲ್ಲೂ ನಟಿಸಿ ಮೆಚ್ಚುಗೆ ಪಡೆದಿದ್ದರು. 1991ರಲ್ಲಿ ಕಿರುತೆರೆ ಪ್ರವೇಶಿಸಿದ್ದರು. ನಂತರ ಸುಹಾಸಿನಿ ಮಣಿರತ್ನಂ ನಿರ್ದೇಶನದ ‘ಪೆನ್’ ಸರಣಿಯಲ್ಲೂ ಅಭಿನಯಿಸಿದ್ದರು. ಇವರ ಸುದೀರ್ಘ ಕಲಾ ಸೇವೆಯನ್ನು ಗುರುತಿಸಿ ಭಾರತ ಸರ್ಕಾರ 2022ರಲ್ಲಿ ‘ಪದ್ಮಶ್ರೀ’ ಪ್ರಶಸ್ತಿ ನೀಡಿ ಗೌರವಿಸಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.