ವಯನಾಡು ಭೂಕುಸಿತ: ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ಅಲ್ಲು ಅರ್ಜುನ್​

‘ವಯನಾಡು ಭೂಕುಸಿತದ ವಿಷಯ ತಿಳಿದು ಬಹಳ ನೋವಾಯಿತು. ಕೇರಳ ನನಗೆ ಬಹಳ ಪ್ರೀತಿ ನೀಡಿದೆ. ಭೂಕುಸಿತದ ಸಂತ್ರಸ್ತರ ಪುನರ್ ವಸತಿಗಾಗಿ ಕೇರಳ ಸಿಎಂ ಪರಿಹಾರ ನಿಧಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡುವ ಮೂಲಕ ನನ್ನ ಕೈಲಾದ ಸಹಾಯ ಮಾಡುತ್ತಿದ್ದೇನೆ. ನಿಮ್ಮೆಲ್ಲರ ಸುರಕ್ಷತೆಗಾಗಿ ಪ್ರಾರ್ಥಿಸುತ್ತೇನೆ’ ಎಂದು ಅಲ್ಲು ಅರ್ಜುನ್​ ಹೇಳಿದ್ದಾರೆ.

ವಯನಾಡು ಭೂಕುಸಿತ: ಸಂತ್ರಸ್ತರಿಗೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ ಅಲ್ಲು ಅರ್ಜುನ್​
ಅಲ್ಲು ಅರ್ಜುನ್​

Updated on: Aug 04, 2024 | 3:31 PM

300ಕ್ಕೂ ಅಧಿಕ ಜನರ ಸಾವಿಗೆ ಕಾರಣವಾದ ವಯನಾಡ್ ಭೂಕುಸಿತಕ್ಕೆ ಇಡೀ ದೇಶವೇ ಮರುಗಿದೆ. ಅನೇಕ ಸೆಲೆಬ್ರಿಟಿಗಳು ತಮ್ಮ ಕೈಲಾದ ಸಹಾಯವನ್ನು ಮಾಡುವ ಮೂಲಕ ಸಂತ್ರಸ್ತರ ನೆರವಿಗೆ ಧಾವಿಸಿದ್ದಾರೆ. ರಶ್ಮಿಕಾ ಮಂದಣ್ಣ, ಮೋಹನ್​ ಲಾಲ್​, ಸೂರ್ಯ, ಜ್ಯೋತಿಕಾ, ಕಾರ್ತಿ, ವಿಕ್ರಮ್​ ಸೇರಿದಂತೆ ಅನೇಕ ಕಲಾವಿದರು ದೇಣಿಗೆ ನೀಡಿದ್ದಾರೆ. ಈ ಸಾಲಿಗೆ ಹೊಸ ಸೇರ್ಪಡೆ ಆಗಿರುವುದು ನಟ ಅಲ್ಲು ಅರ್ಜುನ್. ಟಾಲಿವುಡ್​ ಮಾತ್ರವಲ್ಲದೇ ಪ್ಯಾನ್​ ಇಂಡಿಯಾ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಅಲ್ಲು ಅರ್ಜುನ್​ ಅವರು ವಯನಾಡು ಭೂಕುಸಿತದ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.

ಕೇರಳ ಮುಖ್ಯಮಂತ್ರಿ ಪರಿಹಾರ ನಿಧಿಗೆ ಅಲ್ಲು ಅರ್ಜುನ್​ ಅವರು ಹಣವನ್ನು ನೀಡಿದ್ದಾರೆ. ಅವರು ನೀಡಿರುವ 25 ಲಕ್ಷ ರೂಪಾಯಿಯಿಂದ ಸಂತ್ರಸ್ತರಿಗೆ ವಿವಿಧ ರೀತಿಯ ಸೌಕರ್ಯಗಳನ್ನು ನೀಡಲು ಸಹಾಯ ಆಗುತ್ತದೆ. ಔಷಧಿ, ಆಹಾರ, ಬಟ್ಟೆ ಮುಂತಾದ ವಸ್ತುಗಳನ್ನು ನೀಡಲಾಗುವುದು. ಅಲ್ಲದೇ, ರಕ್ಷಣಾ ಕಾರ್ಯಾಚರಣೆಗೂ ಈ ದೇಣಿಗೆಯಿಂದ ಅನುಕೂಲ ಆಗಲಿದೆ.

ಈ ಬಾರಿ ಸುರಿಯುತ್ತಿರುವ ಭೀಕರ ಮಳೆಗೆ ಹಲವು ಕಡೆಗಳಲ್ಲಿ ದುರಂತ ಸಂಭವಿಸಿದೆ. ಪ್ರವಾಹ ಮತ್ತು ಭೂಕುಸಿತಕ್ಕೆ ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಆ ಪೈಕಿ ಹೆಚ್ಚು ಆಘಾತ ಸೃಷ್ಟಿಸಿದ್ದು ವಯನಾಡು ಭೂಕುಸಿತ. ಕೇರಳದ ವಯನಾಡಿನಲ್ಲಿ ಜುಲೈ 30ರಂದು ಭೂಕುಸಿತ ಉಂಟಾಯಿತು. ಇದರಿಂದ ನೂರಾರು ಕುಟುಂಬಗಳು ನಾಶವಾಗಿವೆ. 200ಕ್ಕೂ ಅಧಿಕ ಜನರು ನಾಪತ್ತೆ ಆಗಿದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುತ್ತಲೇ ಇದೆ.

ಇದನ್ನೂ ಓದಿ: ಸತತ ಸೋಲು; ಬಾಲಿವುಡ್​ನ ಖ್ಯಾತ ನಿರ್ದೇಶಕನಿಗೆ ಕಿವಿಮಾತು ಹೇಳಿದ ಅಲ್ಲು ಅರ್ಜುನ್

ಅಲ್ಲು ಅರ್ಜುನ್​ ಮಾತ್ರವಲ್ಲದೇ, ‘ಪುಷ್ಪ 2’ ಸಿನಿಮಾದ ನಟಿ ರಶ್ಮಿಕಾ ಮಂದಣ್ಣ ಅವರು ಇತ್ತೀಚೆಗೆ 10 ಲಕ್ಷ ರೂಪಾಯಿ ರೂಪಾಯಿ ದೇಣಿಗೆ ನೀಡಿದ್ದರು. ಸಂತ್ರಸ್ತರಿಗೆ ಆಶ್ರಯ ಕಲ್ಪಿಸಲು ಮೋಹಲ್​ಲಾಲ್ ಅವರು 3 ಕೋಟಿ ರೂಪಾಯಿ ನೀಡುವುದಾಗಿ ತಿಳಿಸಿದ್ದಾರೆ. ಅಲ್ಲದೇ ಮಿಲಿಟರಿ ಸಮವಸ್ತ್ರ ಧರಿಸಿ ಅವರು ಭೂಕುಸಿತದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:48 pm, Sun, 4 August 24

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us