ಕಾಂಗ್ರೆಸ್​ ಸರ್ಕಾರಕ್ಕೆ 100 ದಿನ ಸಂಭ್ರಮ: ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ, ಜನತೆಗೆ ಧನ್ಯವಾದ ತಿಳಿಸಿದ ಸಿಎಂ

| Updated By: ವಿವೇಕ ಬಿರಾದಾರ

Updated on: Aug 27, 2023 | 3:12 PM

Karnataka Congress Government 100 Days: ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​ ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ನಡೆಸಲು ಸಿದ್ಧತೆ ನಡೆಸಿದೆ. ಈ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಭಾಗಿಯಾಗುವ ಸಾಧ್ಯತೆ ಇದೆ.

ಕಾಂಗ್ರೆಸ್​ ಸರ್ಕಾರಕ್ಕೆ 100 ದಿನ ಸಂಭ್ರಮ: ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ, ಜನತೆಗೆ ಧನ್ಯವಾದ ತಿಳಿಸಿದ ಸಿಎಂ
ಕಾಂಗ್ರೆಸ್​ ಸರ್ಕಾರಕ್ಕೆ 100 ದಿನ ಸಂಭ್ರಮ
Follow us on

ಬೆಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ನೇತೃತ್ವದ ಕಾಂಗ್ರೆಸ್​ (Congress) ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ವೀಟ್​ ಮಾಡಿ ಧನ್ಯವಾದ ತಿಳಿಸಿದ್ದಾರೆ. “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ” 100 ದಿನಗಳು” ಪೂರೈಸಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾಡಿನ ಮತದಾರರು ನಮ್ಮ ಮೇಲೆ ನಂಬಿಕೆ ಮತ್ತು ಭರವಸೆಯನ್ನಿಟ್ಟು 135 ಸ್ಥಾನಗಳಲ್ಲಿ ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿ ಪೂರ್ಣ ಬಹುಮತದ ಸುಭದ್ರ ಸರ್ಕಾರ ರಚನೆಗೆ ಅವಕಾಶ ಮಾಡಿಕೊಟ್ಟಿದ್ದಾರೆ. ಜನರು ನೀಡಿರುವ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು, ಅವರ ನಿರೀಕ್ಷೆಗಳನ್ನು ಈಡೇರಿಸುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತಿದ್ದೇವೆ” ಎಂದರು.

“ಗ್ಯಾರಂಟಿ ಮತ್ತು ಅಭಿವೃದ್ಧಿ ಯೋಜನೆಗಳ ಅನುಷ್ಠಾನದ ಜೊತೆಜೊತೆಗೆ ಬುದ್ಧ, ಬಸವ, ಅಂಬೇಡ್ಕರ್, ಕುವೆಂಪು, ಕನಕದಾಸರು, ನಾರಾಯಣ ಗುರು ಮುಂತಾದ ದಾರ್ಶನಿಕರು ತೋರಿದ ಸಮಾನತೆಯ ಹಾದಿಯಲ್ಲಿ ನಾಡನ್ನು ಮುನ್ನಡಿಸಿಕೊಂಡು ಹೋಗುತ್ತಿದ್ದೇವೆ. ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಸರ್ಕಾರದ ಕಾರ್ಯಕ್ರಮಗಳ ಮೂಲಕ ತಲುಪಬೇಕೆಂಬ ಆಶಯದೊಂದಿಗೆ ಆರಂಭಿಸಿರುವ ನಮ್ಮ ಪಯಣಕ್ಕಿಂದು ಶತಕ ಸಂಭ್ರಮ” ಎಂದು ಹೇಳಿದರು.

ಇದನ್ನೂ ಓದಿ: ತವರು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಪ್ರವಾಸ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ, ಆಗಸ್ಟ್ 30ರಂದು ಗೃಹಲಕ್ಷ್ಮಿ ಯೋಜನೆಗೆ ಚಾಲನೆ

“ಈ ವಿಶೇಷ ಸಂದರ್ಭದಲ್ಲಿ ನಮ್ಮೊಂದಿಗೆ ಕೈಜೋಡಿಸಿ, ಬೆಂಬಲವಾಗಿ ನಿಂತಿರುವ ನಾಡಿನ ಪ್ರತಿಯೊಬ್ಬರಿಗೂ ಧನ್ಯವಾದಗಳು. ನಿಮ್ಮೆಲ್ಲರ ಸಹಕಾರ ನಿರಂತರವಾಗಿರಲಿ” ಎಂದು ಧನ್ಯವಾದ ಹೇಳಿದ್ದಾರೆ.

ಇನ್ನು ರಾಜ್ಯ ಸರ್ಕಾರ 100 ದಿನ ಪೂರೈಸಿದೆ. ಮತ್ತು ಗೃಹಲಕ್ಷ್ಮಿ ಯೋಜನೆಗೆ ಚಾಲನೆ. ಈ ಎರಡೂ ಕಾರ್ಯಕ್ರಮಗಳನ್ನು ಕಾಂಗ್ರೆಸ್​ ಒಟ್ಟಿಗೆ ನಡೆಸಲು ಸಿದ್ಧತೆ ನಡೆಸಿದ್ದು, ಆ.30 ರಂದು ಮೈಸೂರಿನಲ್ಲಿ ನಡೆಯುವ ಈ ಸಮಾರಂಭದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಭಾಗಿಯಾಗಲಿದ್ದಾರೆ. ಕಾರ್ಯಕ್ರಮದ ಪೂರ್ವ ತಯಾರಿ ಸಂಬಂಧ ಈಗಾಗಲೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಮತ್ತು ಸಚಿವ ಹೆಚ್​.ಸಿ ಮಹದೇವಪ್ಪ ಮೈಸೂರಿನಲ್ಲಿ ನೆಲೆವೂರಿದ್ದು, ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಹಾಗೇ ಸಿಎಂ ಸಿದ್ದರಾಮಯ್ಯ ಅವರು ಕೂಡ ಇಂದಿನಿಂದ ಮೂರು ದಿನಗಳ ಕಾಲ ಮೈಸೂರು ಜಿಲ್ಲಾ ಪ್ರವಾಸ ಮಾಡಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ