
ಬೆಂಗಳೂರು, ಆಗಸ್ಟ್ 19: ಕರ್ನಾಟಕದಲ್ಲಿ ಮುಂಗಾರು ಮಳೆ (Monsoon Rain) ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದೆ ರೈತರ ಆತಂಕ ಮತ್ತಷ್ಟು ಹೆಚ್ಚಾಗಿದೆ. ಆಗಸ್ಟ್ 18ರ ವೇಳೆಗೆ ರಾಜ್ಯಕ್ಕೆ ಒಟ್ಟು 609 ಮಿ.ಮೀ. ಮಳೆಯಾಗಬೇಕಿದ್ದರೆ, ಇದುವರೆಗೆ ಕೇವಲ 423 ಮಿ.ಮೀ. ಮಳೆ ದಾಖಲಾಗಿದೆ. ಇದರ ಪರಿಣಾಮ ರಾಜ್ಯದ ಒಟ್ಟಾರೆ ಮಳೆ ಕೊರತೆ ಶೇ 31ಕ್ಕೆ ತಲುಪಿದೆ. ಜುಲೈ ಅಂತ್ಯದ ವೇಳೆಗೆ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ವಾಡಿಕೆ ಮಳೆ ದಾಖಲಾಗಿತ್ತು. ಆದರೆ ಆಗಸ್ಟ್ ಮಧ್ಯಭಾಗಕ್ಕೆ ಈ ಸಂಖ್ಯೆ ಎರಡಕ್ಕೆ ಇಳಿಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ 9ರಷ್ಟು ಹಾಗೂ ಬಾಗಲಕೋಟೆಯಲ್ಲಿ ಶೇ 14ರಷ್ಟು ಕೊರತೆ ದಾಖಲಾಗಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಕೊರತೆ ತೀವ್ರವಾಗಿದ್ದು, ಕೆಲವು ಜಿಲ್ಲೆಗಳಲ್ಲಿ ವಾಡಿಕೆಯ ಅರ್ಧದಷ್ಟೂ ಮಳೆಯಾಗಿಲ್ಲ. ಮೈಸೂರು ಜಿಲ್ಲೆಯಲ್ಲಿ ಶೇ 57, ವಿಜಯನಗರದಲ್ಲಿ ಶೇ 56 ಹಾಗೂ ಚಾಮರಾಜನಗರದಲ್ಲಿ ಶೇ 51ರಷ್ಟು ಮಳೆ ಕೊರತೆ ದಾಖಲಾಗಿದೆ. ಈ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಗಣನೀಯವಾಗಿ ಕಡಿಮೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ (KSNDMC) ತಾಲೂಕುವಾರು ಅಂಕಿ-ಅಂಶಗಳ ಪ್ರಕಾರ, ರಾಜ್ಯದ 230 ತಾಲೂಕುಗಳ ಪೈಕಿ 187 ತಾಲೂಕುಗಳಲ್ಲಿ ಮಳೆ ಕೊರತೆ ಇದೆ. ಇವುಗಳಲ್ಲಿ 14 ತಾಲೂಕುಗಳು ತೀವ್ರ ಮಳೆ ಕೊರತೆ ಎದುರಿಸುತ್ತಿವೆ. ವಾಡಿಕೆ ಮಳೆಯ ಪ್ರಮಾಣಕ್ಕೆ ಹೋಲಿಸಿದರೆ ಶೇ 60ಕ್ಕಿಂತ ಹೆಚ್ಚು ಕೊರತೆ ಇರುವ ತಾಲೂಕುಗಳನ್ನು ತೀವ್ರ ಕೊರತೆ ಇರುವ ತಾಲೂಕಿಗಳು ಎಂದು ಪರಿಗಣಿಸಲಾಗಿದೆ. ಮತ್ತೊಂದೆಡೆ, 50 ತಾಲೂಕುಗಳಲ್ಲಿ ಮಾತ್ರ ವಾಡಿಕೆಯ ಮಳೆ ದಾಖಲಾಗಿದೆ.
ಪ್ರದೇಶವಾರು ನೋಡುವುದಾದರೆ ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆ ಕೊರತೆ ಅತ್ಯಧಿಕವಾಗಿದೆ. ಇಲ್ಲಿ ಶೇ 38ರಷ್ಟು ಮಳೆ ಕೊರತೆ ದಾಖಲಾಗಿದೆ. ಮಲೆನಾಡು ಭಾಗದಲ್ಲಿ ಶೇ 34, ಉತ್ತರ ಒಳನಾಡು ಕರ್ನಾಟಕದಲ್ಲಿ ಶೇ 29 ಹಾಗೂ ಕರಾವಳಿ ಕರ್ನಾಟಕದಲ್ಲಿ ಶೇ 24ರಷ್ಟು ಮಳೆ ಕೊರತೆ ಇದೆ.
ಆಗಸ್ಟ್ನ ಮೊದಲ ನಾಲ್ಕು ದಿನಗಳಲ್ಲಿ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಉತ್ತಮ ಪ್ರಮಾಣದ ಮಳೆ ಸುರಿದಿದ್ದರಿಂದ, ಈ ಪ್ರದೇಶಗಳ ಒಟ್ಟಾರೆ ಕೊರತೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಕರಾವಳಿಯಲ್ಲಿ ವಾಡಿಕೆಗಿಂತ ಶೇ 4 ಹಾಗೂ ಮಲೆನಾಡಿನಲ್ಲಿ ಶೇ 11ರಷ್ಟು ಮಾತ್ರ ಕೊರತೆ ಇದೆ.
ಆಗಸ್ಟ್ 18ರಂದು ರಾಜ್ಯದ ಕೇವಲ ಶೇ 19ರಷ್ಟು ಭೌಗೋಳಿಕ ಪ್ರದೇಶದಲ್ಲಿ 2.5 ಮಿ.ಮೀ. ಅಥವಾ ಅದಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ. ಮಂಗಳವಾರ ಸಂಜೆಗೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ರಾಜ್ಯದ ಶೇ 73ರಷ್ಟು ಭೂಭಾಗದಲ್ಲಿ ಯಾವುದೇ ಮಳೆಯಾಗಿಲ್ಲ.
ಮಳೆ ಕೊರತೆಯ ಪರಿಣಾಮ ರಾಜ್ಯದ ಬಹುತೇಕ ಜಲಾಶಯಗಳಿಗೆ ಒಳಹರಿವು ಕೂಡ ಕಡಿಮೆಯಾಗಿದೆ. ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿ ಒಟ್ಟು 673.92 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಜಲಾಶಯಗಳಲ್ಲಿ 785.32 ಟಿಎಂಸಿ ಅಡಿ ನೀರು ಇತ್ತು. ಅಂದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಜಲಾಶಯಗಳ ಒಟ್ಟು ನೀರಿನ ಸಂಗ್ರಹ ಗಣನೀಯವಾಗಿ ಕಡಿಮೆಯಾಗಿದೆ.
ಇದನ್ನೂ ಓದಿ: ಕರಾವಳಿ, ಮಲೆನಾಡಿನಲ್ಲಿ ಭಾರಿ ಮಳೆ; 5 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಮಳೆ ಕೊರತೆ ಇದೇ ರೀತಿ ಮುಂದುವರಿದರೆ ಕೃಷಿ ಚಟುವಟಿಕೆ, ಕುಡಿಯುವ ನೀರಿನ ಲಭ್ಯತೆ ಹಾಗೂ ಜಲಾಶಯಗಳ ನೀರಿನ ಮಟ್ಟದ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ