
ಬೆಂಗಳೂರು/ಚಾಮರಾಜನಗರ, (ಜುಲೈ 04): ಮಲೆಮಹದೇಶ್ವರ (Male Mahadeshwara Hills) ಬೆಟ್ಟದಲ್ಲಿ ಮರಿ ಹಾಗೂ ತಾಯಿ ಹುಲಿ ಸೇರಿ ಐದು ಹುಲಿ ಸಾವು ಪ್ರಕರಣದ((Five Tigers Death Case) ತನಿಖೆ ಚುರುಕುಗೊಂಡಿದೆ.ಈ 5 ಹುಲಿಗಳ ಸಾವು ಪ್ರಕರಣ ಸಂಬಂಧ ಉನ್ನತ ಮಟ್ಟದ ಸಮಿತಿ ಇಂದು (ಜುಲೈ 04) ಪ್ರಾಥಮಿಕ ವರದಿ ಸಲ್ಲಿಸಿದ್ದು, ದನದ ಮೇಲೆ ದಾಳಿ ಮಾಡಿದ್ದ ಸಿಟ್ಟಿಗೆ ಮೃತದದ ಮಾಂಸಕ್ಕೆ ವಿಷ ಬೆರೆಸಿದ ಪರಿಣಾಮ ಹುಲಿಗಳು ಮೃತಪಟ್ಟಿವೆ. ಅಲ್ಲದೇ ಹುಲಿಗಳ ಸಾವಿಗೆ ಅಧಿಕಾರಿಗಳ ಕರ್ತವ್ಯಲೋಪ ಸಹ ಇದೆ ಎನ್ನುವ ಮಾಹಿತಿ ಬಯಲಾಗಿದೆ. ಇನ್ನು ಉನ್ನತ ಮಟ್ಟದ ಸಮಿತಿ ವರದಿಯಲ್ಲಿ ಅಧಿಕಾರಿಗಳ ಕರ್ತವ್ಯಲೋಪ ಪತ್ತೆಯಾಗುತ್ತಿದ್ದಂತೆಯೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಶಿಫಾರಸು ಮಾಡಿದ್ದಾರೆ. ಕರ್ತವ್ಯ ಲೋಪ ಮತ್ತು ನಿರ್ಲಕ್ಷ್ಯ ತೋರಿದ ಡಿಸಿಎಫ್ ಚಕ್ರಪಾಣಿ ಮತ್ತು ಮೂವರು ಅಧಿಕಾರಿಗಳ ಅಮಾನತಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಸೂಚನೆ ನೀಡಿದ್ದಾರೆ.
ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಇಂದು (ಜುಲೈ 04) ಪ್ರಾಥಮಿಕ ವರದಿ ಸಲ್ಲಿಸಿದ್ದು, ಹಸುವಿನ ಮೇಲೆ ದಾಳಿ ಮಾಡಿದ್ದಕ್ಕೆ ಸೇಡಿಗೆ ತೀರಿಸಿಕೊಳ್ಳಲು ಸಿಂಪಡಿಸಲಾದ ರಾಸಾಯನಿಕ ಕಾರಣ ಎಂಬುದು ಪ್ರಾಥಮಿಕ ತನಿಖಾ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಗಸ್ತು ಸಿಬ್ಬಂದಿಯ ಕಾರ್ಯಕ್ಷಮತೆಯ ಮೇಲೆ ಸಂಬಂಧಿತ ವಲಯದ ಎ.ಸಿ.ಎಫ್, ಆರ್.ಎಫ್.ಓ. ಮತ್ತು ಡಿ.ಆರ್.ಎಫ್.ಓ. ನಿಗಾ ಇಡುವಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅರಣ್ಯ ರಕ್ಷಣೆಯ ತಮ್ಮ ಮೂಲಭೂತ ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ವರದಿ ತಿಳಿಸಿದೆ.
ಹೊರಗುತ್ತಿಗೆ ಸಿಬ್ಬಂದಿಗೆ ವೇತನ ಪಾವತಿಸದಿರುವುದೂ ಕರ್ತವ್ಯಲೋಪ ಆಗಿದೆ. ವೇತನ ಪಾವತಿ ಮಾಡಲು ಏಪ್ರಿಲ್ ತಿಂಗಳಾಂತ್ಯಕ್ಕೇ ಹಣ ಬಿಡುಗಡೆಯಾಗಿತ್ತು. ಜೂನ್ ತಿಂಗಳಾದರೂ ವೇತನ ಪಾವತಿಸದೆ ಡಿಸಿಎಫ್ನಿಂದ ಕರ್ತವ್ಯಲೋಪವಾಗಿದೆ. ಸಿಬ್ಬಂದಿಗೆ ವೇತನ ಪಾವತಿಸದಿರುವುದರಿಂದ ಗಸ್ತು ಕಾರ್ಯಕ್ಕೆ ಹಿನ್ನಡೆ ಆಗಿದೆ. 3 ತಿಂಗಳ ವೇತನ ಪಾವತಿ ಆಗಿಲ್ಲವೆಂದು ಜೂನ್ 23ರಂದು ಧರಣಿ ನಡೆಸಿದ್ದರು. ಸಕಾಲದಲ್ಲಿ ವೇತನ ಸಿಗದೆ ಮುಂಚೂಣಿಯ ಸಿಬ್ಬಂದಿ ಕರ್ತವ್ಯ ವಿಮುಖರಾಗಲು ಕಾರಣವಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ವರದಿಯಲ್ಲಿ ಉಲ್ಲೇಖವಾಗಿದೆ.
ಸದ್ಯ ಪ್ರಾಥಮಿಕ ವರದಿ ಆಧರಿಸಿ ಮೂವರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡುವಂತೆ ಈಶ್ವರ್ ಖಂಡ್ರೆ ಅವರು ಶಿಫಾರಸ್ಸು ಮಾಡಿದ್ದು, ಜೊತೆಗೆ ಇಲಾಖಾ ವಿಚಾರಣೆ ನಡೆಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಗೆ ಮನವಿ ಮಾಡಿದ್ದಾರೆ.
ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಶ್ಕರ್ ನೇತೃತ್ವದಲ್ಲಿ ವನ್ಯಜೀವಿ ವಿಭಾಗದ ಎಪಿಸಿಸಿಎಫ್ ಶ್ರೀನಿವಾಸುಲು, ಚಾಮರಾಜನಗರ ಸಿಸಿಎಫ್ ಹೀರಾಲಾಲ್, ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಎ.ಐ.ಜಿ ಹರಿಣಿ ವೇಣುಗೋಪಾಲ್, ವನ್ಯಜೀವಿ ತಜ್ಞ ಡಾ. ಸಂಜಯ್ ಗುಬ್ಬಿ ಮತ್ತು ಮೈಸೂರು ಮೃಗಾಲಯದ ಸಹಾಯಕ ನಿರ್ದೇಶಕ ಡಾ. ಶಶಿಧರ್ ಅವರನ್ನೊಳಗೊಂಡ ಉನ್ನತ ಮಟ್ಟದ ಸಮಿತಿ ರಚಿಸಲಾಗಿತ್ತು.
ದನದ ಮೇಲೆ ದಾಳಿ ಮಾಡಿದ್ದ ಸಿಟ್ಟಿಗೆ ಮೃತದದ ಮಾಂಸಕ್ಕೆ ವಿಷ ಬೆರೆಸಿದ ಪರಿಣಾಮ ಹುಲಿ ಮೃತಪಟ್ಟಿದೆ ಎನ್ನುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದುಬಂದಿತ್ತು. ಈ ಹಿನ್ನಲೆಯಲ್ಲಿ ಮೂವರು ಆರೋಪಿಗಳನ್ನು ಬಂಧಿಸಲಾಗಿತ್ತು. ಇನ್ನು ಇದೇ ಜೂನ್ 10ರಂದು ಅಂತಿಮ ವರದಿ ನೀಡುವಂತೆ ಉನ್ನತ ಮಟ್ಟದ ಸಮಿತಿಗೆ ಈಶ್ವರ್ ಖಂಡ್ರೆ ಅವರು ಸೂಚನೆ ನೀಡಿದ್ದು, ಅಂತಿಮ ವರದಿಯಲ್ಲಿ ಇರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
Published On - 4:44 pm, Fri, 4 July 25