ಬೆಂಗಳೂರಿನ ಇಬ್ಬರು ಸೇರಿದಂತೆ 8 ಬಿಜೆಪಿ ಶಾಸಕರು ಕಾಂಗ್ರೆಸ್​ ಸೇರುತ್ತಾರೆ: ಬಾಂಬ್ ಸಿಡಿಸಿದ ಬಿಜೆಪಿ ಎಂಎಲ್​ಎ

| Updated By: ರಮೇಶ್ ಬಿ. ಜವಳಗೇರಾ

Updated on: Oct 24, 2024 | 5:12 PM

ಕರ್ನಾಟಕದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಗದ್ದಲ ನಡೆಯುತ್ತಿದೆ. ಅದರಲ್ಲೂ ಚನ್ನಪಟ್ಟಣ ಕ್ಷೇತ್ರ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿದೆ. ಸಿಪಿ ಯೋಗೇಶ್ವರ್ ಅವರು ಬಿಜೆಪಿಗೆ ಗುಡ್​ಬೈ ಹೇಳಿ ಕಾಂಗ್ರೆಸ್​​ನಿಂದ ಕಣಕ್ಕಿಳಿದಿದ್ದಾರೆ. ಇದರ ಮಧ್ಯ​ ಬಿಜೆಪಿಯ 8 ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಖುದ್ದು ಬಿಜೆಪಿ ಶಾಸಕರೊಬ್ಬರು ಹೊಸ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನ ಇಬ್ಬರು ಸೇರಿದಂತೆ 8 ಬಿಜೆಪಿ ಶಾಸಕರು ಕಾಂಗ್ರೆಸ್​ ಸೇರುತ್ತಾರೆ: ಬಾಂಬ್ ಸಿಡಿಸಿದ ಬಿಜೆಪಿ ಎಂಎಲ್​ಎ
ಶಾಸಕ ಎಸ್.ಟಿ.ಸೋಮಶೇಖರ್
Follow us on

ಬೆಂಗಳೂರು, (ಅಕ್ಟೋಬರ್ 24): ಸಿಪಿ ಯೋಗೇಶ್ವರ್​​ ಅವರು ಬಿಜೆಪಿ ವಿಧಾನಪರಿಷತ್​ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಇದರ ನಡುವೆ ಬಿಜೆಪಿಯ ಇನ್ನೂ 8 ಶಾಸಕರು ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ ಎಂದು ಖುದ್ದು ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್​ ಹೊಸ ಬಾಂಬ್ ಸಿಡಿಸಿದ್ದಾರೆ. ಮುಡಾ ಹಗರಣ , ವಾಲ್ಮೀಕಿ ಹಗರಣದಲ್ಲಿ ಸಿಲುಕಿರುವ ಸಿದ್ದರಾಮಯ್ಯ ಸರ್ಕಾರ ಪತನವಾಗಲಿದ್ದು, ಕೆಲ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂದು ಕೇಸರಿ ಪಡೆ ನಾಯಕರು ಹೇಳಿದ್ದಾರೆ. ಆದ್ರೆ, ಇದೀಗ ಸ್ವತಃ ಬಿಜೆಪಿ ಶಾಸಕ ರೀತಿ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್​​ಟಿ ಸೋಮಶೇಖರ್ ಇಂದು(ಅಕ್ಟೋಬರ್ 24) ಬೆಂಗಳೂರಿನಲ್ಲಿ ಟಿವಿ9 ಜೊತೆಗೆ ಮಾತನಾಡಿ, ​ ಬಿಜೆಪಿಯಿಂದ ಕಾಂಗ್ರೆಸ್ ಗೆ 8 ಜನ ಶಾಸಕರು ಹೋಗುತ್ತಾರೆ. ಅದರಲ್ಲೂ ಬೆಂಗಳೂರಿನ ಇಬ್ಬರು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ. ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ಅಶೋಕ್ ಮಾತಿಗೆ ಬೆಲೆ ಕೊಡಬಾರದು. ಸದ್ಯದಲ್ಲಿ ನೋಡುತ್ತಿರಿ ಇನ್ನು ಎಂಟು ಮಂದಿ ಕಾಂಗ್ರೆಸ್ ಗೆ ಹೋಗುತ್ತಾರೆ ಎಂದು ಬಹಿರಂಗವಾಗಿಯೇ ಹೇಳಿದರು.

ಇದನ್ನೂ ಓದಿ: ಚನ್ನಪಟ್ಟಣ ಬೈ ಎಲೆಕ್ಷನ್: ಕೊನೆಗೂ ಬಿಜೆಪಿ-ಜೆಡಿಎಸ್​​ ಮೈತ್ರಿ ಅಭ್ಯರ್ಥಿ ಘೋಷಣೆ

ನನ್ನ ಮೇಲೆ ಯಾವುದೇ ಶಿಸ್ತು ಕ್ರಮ ಜರುಗಿಸಿದ್ರು ನನಗೆ ಭಯವಿಲ್ಲ. ನನಗೆ ನನ್ನ ಕ್ಷೇತ್ರದ ಅಭಿವೃದ್ಧಿಯಾಗಬೇಕು. ಅದಕ್ಕೆ ನಾನು ನಿರಂತರವಾಗಿ ಸಿಎಂ ಹಾಗೂ ಡಿಸಿಎಂ ಅವರನ್ನು ಭೇಟಿ ಮಾಡುತ್ತೇನೆ. ಸಿಪಿ ಯೋಗೇಶ್ವರ್ ರಿಂದ ಚೆನ್ನಾಗಿ ಕೆಲಸ ಮಾಡಿಸಿಕೊಂಡು ಈಗ ಕೈ ಬಿಟ್ಟರು ಎಂದು ಸ್ವಪಕ್ಷದ ವಿರುದ್ಧವೇ ಗುಡುಗಿದರು.

ಎಸ್​​ಟಿ ಸೋಮಶೇಖರ್ ಅವರು ಈ ಮೊದಲು ಜೆಡಿಎಸ್​ನಲ್ಲಿದ್ದರು. ಬಳಿಕ ಅವರು ಕಾಂಗ್ರೆಸ್ ಸೇರ್ಪಡೆಯಾದರು. ನಂತರ ನಡೆದ ರಾಜಕೀಯ ವಿದ್ಯಮಾನಗಳಿಂದ ಅವರು ಕಾಂಗ್ರೆಸ್​ ತೊರೆದು ಬಿಜೆಪಿ ಸೇರಿದ್ದು, ಇದೀಗ ಬಿಜೆಪಿಯಲ್ಲಿ ಕೆಲ ಬೆಳವಣಿಗೆಗಳಿಂದ ಅಸಮಾಧಾನಗೊಂಡಿದ್ದಾರೆ. ಬಿಜೆಪಿಯ ಕೆಲ ನಾಯಕರ ನಡೆಗೆ ಬೇಸರಗೊಂಡಿರುವ ಸೋಮಶೇಖರ್ ಪಕ್ಷದ ಕಾರ್ಯಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದಾರೆ.

ಇನ್ನು ಸೋಮಶೇಖರ್ ಅವರು ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ ಸೇರಿದಂತೆ ಕಾಂಗ್ರೆಸ್​​ ಶಾಸಕರ, ನಾಯಕರ ಜೊತೆ ಉತ್ತಮ ಸಂಬಂಧ ಹೊಂದಿದ್ದು, ಅವರ ಆಗಲೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ, ಕೆಲ ವಿಚಾರಗಳಿಂದ ಸದ್ಯಕ್ಕೆ ಕಾಂಗ್ರೆಸ್​ ಸೇರ್ಪಡೆ ನಿರ್ಧಾರವನ್ನ ಕೈಬಿಟ್ಟಿದ್ದಾರೆ. ಆದ್ರೆ, ಬಿಜೆಪಿ ನಾಯಕರ ವಿರುದ್ಧ ಬಹಿರಂಗ ಹೇಳಿಕೆ ಕೊಡುವುದನ್ನು ಮಾತ್ರ ಬಿಟ್ಟಿಲ್ಲ. ಆಗಾಗ ಬಿಜೆಪಿ ನಾಯಕರಿಗೆ ಛಾಟಿ ಬೀಸುತ್ತಲೇ ಇರುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ