ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಲೋಕಾಯುಕ್ತ ಬಲೆಗೆ; ಹೀಗಿತ್ತು ಕಾರ್ಯಾಚರಣೆ

|

Updated on: Mar 02, 2023 | 9:42 PM

ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ 1.62 ಕೋಟಿ ರೂ. ನಗದು ಪತ್ತೆಯಾಗಿದೆ. ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಬೇರೆಯವರ ಪಾತ್ರ ಇರುವ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಬೆಂಗಳೂರು: ದಾವಣಗೆರೆ ಜಿಲ್ಲೆಯ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಮಾಡಾಳ್ ಪ್ರಶಾಂತ್‌ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ (Lokayukta) ಬಲೆಗೆ ಬಿದ್ದಿದ್ದು, ಕಾರ್ಯಾಚರಣೆ ಕುರಿತು ಲೋಕಾಯುಕ್ತ ಐಜಿಪಿ (Lokayukta IGP) ಡಾ. ಎ. ಸುಬ್ರಹ್ಮಣ್ಯೇಶ್ವರ ರಾವ್​ ಮಾಹಿತಿ ನೀಡಿದ್ದಾರೆ. ಪ್ರಶಾಂತ್ ಅವರು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (BWSSB) ಮುಖ್ಯ ಲೆಕ್ಕಾಧಿಕಾರಿಯಾಗಿದ್ದಾರೆ. ಕೆಎಸ್​ಡಿಎಲ್​ ಕಚ್ಚಾ ವಸ್ತುಗಳ ಪೂರೈಕೆ ಟೆಂಡರ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಗ್ಗೆ ಖಾಸಗಿ ವ್ಯಕ್ತಿ ದೂರು ನೀಡಿದ್ದರು. ಇಂದು (ಗುರುವಾರ) ಬೆಳಗ್ಗೆ ಲೋಕಾಯುಕ್ತ ಕಚೇರಿಗೆ ಖಾಸಗಿ ವ್ಯಕ್ತಿ ದೂರು ನೀಡಿದ್ದರು. ಅದರ ಆಧಾರದಲ್ಲಿ ಎಫ್​ಐಆರ್​ ದಾಖಲಿಸಿ ದಾಳಿ ನಡೆಸಿದೆವು. ಕ್ರೆಸೆಂಟ್ ರಸ್ತೆ ಕಚೇರಿಯಲ್ಲಿ 40 ಲಕ್ಷ ರೂ. ಲಂಚ ಸ್ವೀಕರಿಸುವಾಗ ಬಲೆಗೆ ಬಿದ್ದರು ಎಂದು ಸುಬ್ರಹ್ಮಣ್ಯೇಶ್ವರ ರಾವ್​ ತಿಳಿಸಿದ್ದಾರೆ.

ಕಚೇರಿಯಲ್ಲಿ ಪರಿಶೀಲನೆ ನಡೆಸಿದಾಗ 1.62 ಕೋಟಿ ರೂ. ನಗದು ಪತ್ತೆಯಾಗಿದೆ. ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ಮಾಡುತ್ತಿದ್ದಾರೆ. ಪ್ರಕರಣದಲ್ಲಿ ಬೇರೆಯವರ ಪಾತ್ರ ಇರುವ ಬಗ್ಗೆಯೂ ತನಿಖೆ ಮುಂದುವರಿದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಪ್ರಶಾಂತ್ ವಿರುದ್ದವೇ ದೂರು ದಾಖಲಾಗಿತ್ತು. ಪಿಸಿ ಆ್ಯಕ್ಟ್ ಸೆಕ್ಷನ್ 8 ರ ಅಡಿ ಉಳಿದ ಇಬ್ಬರು ಕೂಡ ಟೆಂಡರ್​​ಗಾಗಿ ಹಣ ನೀಡಿದ್ದರು. ಬೇರೆ ಟೆಂಡರ್​​ಗೆ ಸಂಬಂಧಿಸಿ ಇತರೆ ಮೂವರು ಕಚೇರಿಯಲ್ಲಿದ್ದರು. ಅವರೂ ಸಹ ಪ್ರಶಾಂತ್​​ಗೆ ಹಣ ನೀಡಲುಬಂದಿದ್ದರು. ಅವರನ್ನೂ ಬಂಧಿಸಲಾಗಿದೆ. ಒಟ್ಟು ಐವರನ್ನು ಬಂಧಿಸಲಾಗಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ

ಬೆಂಗಳೂರಿನ ಕ್ರೆಸೆಂಟ್ ರಸ್ತೆಯಲ್ಲಿರುವ ವಿರೂಪಾಕ್ಷಪ್ಪ ಕಚೇರಿಯಲ್ಲಿ 3 ಬ್ಯಾಗ್​ಗಳಲ್ಲಿ 2 ಸಾವಿರ ರೂ. ಮತ್ತು 500 ರೂಪಾಯಿ ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ ಆಗಿವೆ.

ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೂ ಪ್ರಕರಣ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ವಿರುದ್ಧವೂ ಲೋಕಾಯುಕ್ತ ಕೋರಟ್​​ನಲ್ಲಿ ಪ್ರಕರಣವಿದೆ. ದಾವಣಗೆರೆ ನಗರಾಭಿವೃದ್ಧಿ ಪ್ರಾಧಿಕಾರದಿಂದ ತಪ್ಪು ಮಾಹಿತಿ‌ ನೀಡಿ ಸೈಟ್ ಪಡೆದ ಆರೋಪ ಅವರ ಮೇಲಿದೆ. ಈ ಬಗ್ಗೆ ಶ್ರೀರಾಮ ಸೇನೆ ಲೋಕಾಯಕ್ತಕ್ಕೆ ದೂರು ನೀಡಿತ್ತು. ಬೆಂಗಳೂರಿನ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ‌ಪ್ರಕರಣ ವಿಚಾರಣೆ ಹಂತದಲ್ಲಿದೆ. ಇದೀಗ ಮತ್ತೊಂದು ಪ್ರಕರಣ ಅವರ ವಿರುದ್ಧ ದಾಖಲಾದಂತಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ