
ಬೆಂಗಳೂರು, ಜೂನ್ 30: ಕಾಂಗ್ರೆಸ್ನ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ (Aishwarya Mahadev) ಅವರನ್ನು ಕೆಪಿಸಿಸಿಯ (KPCC) ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷರನ್ನಾಗಿ ಭಾನುವಾರ ನೇಮಿಸಲಾಗಿದೆ.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಾಮಾಜಿಕ ಮಾಧ್ಯಮ ವಿಭಾಗದ ಅಧ್ಯಕ್ಷೆಯಾಗಿ ಶ್ರೀಮತಿ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ (KC Venugopal) ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಐಶ್ವರ್ಯಾ ಅವರು ದಿವಂಗತ ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿಯಾಗಿದ್ದಾರೆ. ಮೂಲತಃ ಮೈಸೂರು ಜಿಲ್ಲೆಯ ಕೆಆರ್ ನಗರದವರಾದ ಐಶ್ವರ್ಯಾ ಮಹಾದೇವ್, ಹಿಂದೆ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳ ಅತ್ಯಾಪ್ತರಾಗಿದ್ದ ಮಂಚನಹಳ್ಳಿ ಮಹಾದೇವ್ ಅವರ ಪುತ್ರಿ. ಮಂಚನಹಳ್ಳಿ ಮಹಾದೇವ್ 14 ವರ್ಷ ಹಿಂದೆ ಇಹಲೋಕ ತ್ಯಜಿಸಿದ್ದಾರೆ. ಅತಿ ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹುದ್ದೆಗೇರಿದ್ದ ಐಶ್ವರ್ಯಾ, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದೂ ಸೇರಿದಂತೆ ಪಕ್ಷದ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ.
ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಇಂದು ಬೆಂಗಳೂರಿಗೆ ಆಗಮಿಸಲಿದ್ದು, ಪಕ್ಷದ ಶಾಸಕರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಯಿದೆ. ಸರ್ಕಾರದಲ್ಲಿನ ಭ್ರಷ್ಟಾಚಾರ, ಕ್ಷೇತ್ರ ಅಭಿವೃದ್ಧಿಗೆ ಅನುದಾನದ ಕೊರತೆ ಮತ್ತು ‘‘ರಾಜಕೀಯ ಕ್ರಾಂತಿ’’ಯ ಕುರಿತ ಹೇಳಿಕಗಳಿಂದ ಹಲವಾರು ಹಿರಿಯ ಶಾಸಕರು ಪಕ್ಷವನ್ನು ಮುಜುಗರಕ್ಕೀಡು ಮಾಡಿರುವ ಸಮಯದಲ್ಲಿ ಸುರ್ಜೇವಾಲ ರಾಜ್ಯಕ್ಕೆ ಬರುತ್ತಿದ್ದಾರೆ.
ಆದಾಗ್ಯೂ, ಸುರ್ಜೆವಾಲಾ ಅವರ ಭೇಟಿಗೂ ಪಕ್ಷ ಅಥವಾ ಸರ್ಕಾರದಲ್ಲಿ ಅಧಿಕಾರ ಬದಲಾವಣೆಯ ಊಹಾಪೋಹಗಳಿಗೂ ಯಾವುದೇ ಸಂಬಂಧವಿಲ್ಲ ಎಂದು ಹಿರಿಯ ನಾಯಕರು ಹೇಳಿದ್ದಾರೆ.
ಕೆಲವು ಶಾಸಕರು ತಮ್ಮ ದೂರುಗಳನ್ನು ಹೇಳಿಕೊಂಡಿರುವುದರಿಂದ, ಸುರ್ಜೇವಾಲ ಅವರ ಜತೆ ಜೊತೆ ಮಾತನಾಡುತ್ತಾರೆ ಮತ್ತು ಅವರ ಸಮಸ್ಯೆಗಳನ್ನು ಆಲಿಸುತ್ತಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಜಿಸಿ ಚಂದ್ರಶೇಖರ್ ತಿಳಿಸಿದ್ದಾರೆ. ನಾಯಕತ್ವ ಬದಲಾವಣೆಯ ವರದಿಗಳು ಆಧಾರರಹಿತವಾಗಿವೆ. ಸುರ್ಜೆವಾಲ ಅವರು ಶಾಸಕರೊಂದಿಗಿನ ಸಭೆಯಲ್ಲಿ ಈ ಬಗ್ಗೆ ಚರ್ಚಿಸುವುದಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.
ಮೂರು ದಿನಗಳ ಬೆಂಗಳೂರು ಭೇಟಿಯ ಸಮಯದಲ್ಲಿ ಸುರ್ಜೇವಾಲ ಅವರು ಮೈಸೂರು ಮತ್ತು ಬೆಂಗಳೂರು ವ್ಯಾಪ್ತಿಯ ಶಾಸಕರನ್ನು ಭೇಟಿ ಮಾಡಲಿದ್ದಾರೆ. ಸರ್ಕಾರದ ಕಾರ್ಯವೈಖರಿಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದವರಲ್ಲಿ ಪ್ರಮುಖರಾದ ಬಿ.ಆರ್. ಪಾಟೀಲ್, ರಾಜು ಕಾಗೆ ಮತ್ತು ಬಸವರಾಜ ರಾಯರೆಡ್ಡಿ ಸೇರಿದಂತೆ ಹಿರಿಯ ಶಾಸಕರನ್ನು ಅವರು ಪ್ರತ್ಯೇಕವಾಗಿ ಭೇಟಿಯಾಗಲಿದ್ದಾರೆ.
ಇದನ್ನೂ ಓದಿ: ಈವರೆಗೆ ಯಾರೂ ಮಾಡದ ದಾಖಲೆ ಬರೆಯಲು ಸಿಎಂ ಸಿದ್ದರಾಮಯ್ಯ ಸಿದ್ಧ!
ಸುರ್ಜೇವಾಲ ಬೆಂಗಳೂರು ಭೇಟಿಯ ಕುರಿತು ಸುದ್ದಿಗಾರರ ಜತೆ ಪ್ರತಿಕ್ರಿಯೆ ನೀಡಿದ ಕೆಪಿಸಿಸಿ ಅಧ್ಯಕ್ಷ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಹೌದು, ಅವರು ಶಾಸಕರನ್ನು ವೈಯಕ್ತಿಕವಾಗಿ ಭೇಟಿಯಾಗಲಿದ್ದಾರೆ. ಅವರು ಈಗಾಗಲೇ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಅವರ ಭೇಟಿಯ ಕುರಿತು ನಾನು ಶಾಸಕರಿಗೆ ಸಂದೇಶಗಳನ್ನು ಕಳುಹಿಸುತ್ತೇನೆ ಎಂದು ಹೇಳಿದ್ದಾರೆ.
Published On - 6:51 am, Mon, 30 June 25