ಎಚ್​​​ಎಂಟಿಗೆ ಅರಣ್ಯ ಭೂಮಿ ಅಕ್ರಮ ಪರಭಾರೆ ಆರೋಪ: ಹಿರಿಯ ಅಧಿಕಾರಿಗಳಿಗೂ ಸಚಿವ ಈಶ್ವರ ಖಂಡ್ರೆ ನೋಟಿಸ್

ಎಚ್​​​ಎಂಟಿಗೆ ಅರಣ್ಯ ಭೂಮಿ ಪರಭಾರೆ ಸಂಬಂಧ ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ ಹಾಗೂ ಕರ್ನಾಟಕ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಡುವೆ ವಾಕ್ಸಮರ ನಡೆದಿತ್ತು. ಎಚ್​ಎಂಟಿ ಪರ ವಹಿಸಿದ್ದ ಕುಮಾರಸ್ವಾಮಿ ರಾಜ್ಯ ಸರ್ಕಾರ ಹಾಗೂ ಖಂಡ್ರೆ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಪ್ರಕರಣ ಮತ್ತೊಂದು ಹಂತಕ್ಕೆ ಹೋಗಿದೆ. ವಿವರ ಇಲ್ಲಿದೆ.

ಎಚ್​​​ಎಂಟಿಗೆ ಅರಣ್ಯ ಭೂಮಿ ಅಕ್ರಮ ಪರಭಾರೆ ಆರೋಪ: ಹಿರಿಯ ಅಧಿಕಾರಿಗಳಿಗೂ ಸಚಿವ ಈಶ್ವರ ಖಂಡ್ರೆ ನೋಟಿಸ್
ಈಶ್ವರ ಖಂಡ್ರೆ
Edited By:

Updated on: Sep 25, 2024 | 2:12 PM

ಬೆಂಗಳೂರು, ಸೆಪ್ಟೆಂಬರ್ 25: ಎಚ್​ಎಂಟಿಗೆ ಅರಣ್ಯ ಭೂಮಿ ಅಕ್ರಮ ಪರಭಾರೆ ಆರೋಪ ಸಂಬಂಧ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ನೊಟೀಸ್ ನೀಡಲು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ ನೀಡಿದ್ದಾರೆ. ನಿಯಮಗಳನ್ನು ಗಾಳಿಗೆ ತೂರಿದ ಅಧಿಕಾರಿಗಳಿಗೆ ಕಾರಣ ಕೇಳಿ (ಶೋಕಾಸ್) ನೊಟೀಸ್ ನೀಡಲು ಸೂಚನೆ ನೀಡಿದ್ದಾರೆ.

ಪೀಣ್ಯ- ಜಾಲಹಳ್ಳಿ ಪ್ಲಾಂಟೇಷನ್​​ನಲ್ಲಿ ಎಚ್ಎಂಟಿ ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಸುಪ್ರೀಂಕೋರ್ಟ್​​ಗೆ ಅರ್ಜಿ ಸಲ್ಲಿಸಿದ್ದರು. ಈ ಬಗ್ಗೆ ಕಾರಣ ಕೇಳಿ ನೋಟಿಸ್ ನೀಡಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಈ ಸಂಬಂಧ ಖಂಡ್ರೆ ಸೂಚನೆ ನೀಡಿದ್ದಾರೆ.

ಕರ್ನಾಟಕ ಅರಣ್ಯ ಕಾಯಿದೆ 1963ರ ಸೆಕ್ಷನ್ 17ರಡಿಯಲ್ಲಿ ಮೀಸಲು ಅರಣ್ಯ ಎಂದು ಅಧಿಸೂಚನೆಯಾದ ಬಳಿಕ ಆ ಅರಣ್ಯವನ್ನು ‘ಯಾವತ್ತೂ ಅರಣ್ಯವಲ್ಲ’ ಎಂದು ಘೋಷಿಸಬೇಕಾದರೆ ವಿಧಾನಮಂಡಲದ ಉಭಯ ಸದನಗಳಲ್ಲಿ ನಿರ್ಣಯ ಆಗಬೇಕು. ಕರ್ನಾಟಕ ಸರ್ಕಾರದ ಕಾರ್ಯ ಕಲಾಪಗಳ ನಿರ್ವಹಣಾ ನಿಯಮಾವಳಿ 1977ರ ಪ್ರಥಮ ಪರಿಶಿಷ್ಟದಲ್ಲಿ ಕೂಡ ಯಾವುದೇ ಇತರ ಸರ್ಕಾರಿ ಇಲಾಖೆಗೆ ಸರ್ಕಾರಿ ಭೂಮಿ ವರ್ಗಾವಣೆ ಮಾಡಬೇಕಾದ ಸಂದರ್ಭದಲ್ಲಿ ಅದರ ಮೌಲ್ಯ 5ಕೋಟಿ ರೂ.ಗಿಂತ ಹೆಚ್ಚಾಗಿದ್ದಲ್ಲಿ, ಸಚಿವ ಸಂಪುಟದ ಪೂರ್ವಾನುಮತಿ ಪಡೆಯಬೇಕು. ಆದರೆ ಕೆಲವು ಅಧಿಕಾರಿಗಳು ಸಚಿವರ ಗಮನಕ್ಕೂ ತಾರದೆ, ಸಚಿವ ಸಂಪುಟದ ಅನುಮತಿಯೂ ಇಲ್ಲದೆ ತಮ್ಮ ಮಟ್ಟದಲ್ಲೇ ಸರ್ಕಾರದ ಆದೇಶ ಮಾಡಿ ಸುಪ್ರೀಂಕೋರ್ಟ್​​​ಗೆ ಅರ್ಜಿ ಸಲ್ಲಿಸಿರುತ್ತಾರೆ. ಇದು ಶಂಕಾಸ್ಪದ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆಯಲ್ಲಿ ಉಲ್ಲೇಖಿಸಿದ್ದಾರೆ.

ಎಚ್ಎಂಟಿ ಅರಣ್ಯ ಭೂಮಿಯನ್ನು ಸರ್ಕಾರಿ ಮತ್ತು ಖಾಸಗಿಯವರಿಗೆ ಪರಭಾರೆ ಮಾಡಲು ನಿರಾಕ್ಷೇಪಣಾ ಪತ್ರವನ್ನೂ ನೀಡಿದೆ. ಇದರಿಂದಾಗಿ ಎಚ್ಎಂಟಿ ಈವರೆಗೆ 165 ಎಕರೆ ಜಮೀನನ್ನು, 313 ಕೋಟಿ ರೂ.ಗೆ ಖಾಸಗಿ ಮತ್ತು ಸರ್ಕಾರಿ ಸಂಸ್ಥೆಗಳಿಗೆ ಮಾರಾಟ ಮಾಡಿರುತ್ತದೆ. ಎಚ್ಎಂಟಿ ಪ್ರದೇಶದ ಅರಣ್ಯ ಭೂಮಿಯನ್ನು ಡಿನೋಟಿಫೈ ಮಾಡಲು ಅಧಿಕಾರಿಗಳು ತರಾತುರಿಯಿಂದ ವರ್ತಿಸಿದ್ದರು. ತರಾತುರಿಯಲ್ಲಿ ಸರ್ಕಾರಿ ಆದೇಶ ಮಾಡಿಸಿ, ಸುಪ್ರೀಂಕೋರ್ಟ್​​ಗೆ ಮಧ್ಯಂತರ ಅರ್ಜಿ (ಐ.ಎ.)ಸಲ್ಲಿಸಿರುವುದೂ ಅನುಮಾನಕ್ಕೆ ಕಾರಣವಾಗಿದೆ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಲೂಟಿ ಮಾಡಿದ್ದು ಸಾಕು, ಹೆಚ್​ಎಂಟಿ ಪುನಶ್ಚೇತನಕ್ಕೆ ಸಹಕಾರ ಕೊಡಿ: ಡಿಕೆ ಶಿವಕುಮಾರ್​ಗೆ ಕುಮಾರಸ್ವಾಮಿ ಟಾಂಗ್

ಸದ್ಯ ಎಲ್ಲ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ನೀಡುವಂತೆ ಖಂಡ್ರೆ ಸೂಚನೆ ನೀಡಿದ್ದಾರೆ. 7 ದಿನಗಳ ಒಳಗಾಗಿ ಉತ್ತರ ಪಡೆದು, ಮುಂದಿನ ಕ್ರಮ ಜರುಗಿಸಲು ಖಂಡ್ರೆ ಸೂಚನೆ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us