
ಬಾಗಲಕೋಟೆ, ಫೆಬ್ರವರಿ 21: ಜಿಲ್ಲೆಯ ಜಮಖಂಡಿ (Jamakhandi) ತಾಲೂಕಿನ ಕಟ್ಟೆ ಕೆರೆ ಸಮೀಪ ಶನಿವಾರ ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ದುರ್ಮರಣ ಹೊಂದಿರುವ ಘಟನೆ ನಡೆದಿದೆ. ಕಬ್ಬಿನ ಕಟಾವು ಕೆಲಸಕ್ಕೆ ತೆರಳುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಏಕಾಏಕಿ ಕಟ್ ಆಗಿ ಪಲ್ಟಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ರಾತ್ರಿ ಸುಮಾರು 2 ಗಂಟೆಯ ವೇಳೆಗೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಮೃತರನ್ನು ಮನೀಷ್ ಪಾಂಡೆ (23), ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ ಎಂದು ಗುರುತಿಸಲಾಗಿದೆ. ಮೃತರು ಮಹಾರಾಷ್ಟ್ರ ರಾಜ್ಯದ ಯುವತ್ಮಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿ ನಿವಾಸಿಗಳಾಗಿದ್ದು, ಕಬ್ಬಿನ ಕಟಾವು ಕೆಲಸಕ್ಕಾಗಿ ಜಮಖಂಡಿ ಭಾಗಕ್ಕೆ ಆಗಮಿಸಿದ್ದರು ಎನ್ನಲಾಗಿದೆ.
ಘಟನೆ ಕುರಿತು ಪ್ರತಿಕ್ರಿಯಿಸಿರುವ ಎಸ್ಪಿ , ಇಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಅಪಘಾತವಾಗಿದೆ. ಮಹಾರಾಷ್ಟ್ರದಿಂದ ಕಬ್ಬು ಕಾಟವು ಮಾಡಲು ಬಂದಿದ್ದ ಕೂಲಿ ಕಾರ್ಮಿಕರು ಪ್ರಯಾಣ ಮಾಡುತ್ತಿದ್ದ ಜೋಡಿ ಟ್ರಾಲಿಗಳು ಟ್ರ್ಯಾಕ್ಟರ್ ಪಲ್ಟಿಯಾಗಿದ್ದವು. ಒಂದು ಟ್ರಾಲಿ ಮೇಲೆ ಮತ್ತೊಂದು ಟ್ರಾಲಿ ಮುಗುಚಿ ಬಿದ್ದ ಕಾರಣ ಅವಘಡ ನಡೆದಿದೆ. ಘಟನೆಯಲ್ಲಿ ನಾಲ್ಕು ಜನರು ಮೃತಪಟ್ಟಿದ್ದಾರೆ. ಇಬ್ಬರಿಗೆ ಗಂಭೀರ ಗಾಯಗಳಾಗಿವೆ ಎಂದಿದ್ದಾರೆ.
ಮಹಾರಾಷ್ಟ್ರದಿಂದ ಕಬ್ಬು ಕಟಾವು ಕೆಲಸಕ್ಕೆ ಬೆಳಗಾವಿ ಜಿಲ್ಲೆಯ ಯರಗಟ್ಟಿಗೆ ಬಂದಿದ್ದ ಇವರು ಇಂದು (ಫೆ.21) ನಸುಕಿನ ಜಾವ ವಾಪಸ್ ತಮ್ಮೂರಿಗೆ ಹೊರಟಿದ್ದರು. ಈ ಹಿನ್ನೆಲೆ ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣದ ದಾಖಲಾಗಿದ್ದು ಮುಂದಿನ ತನಿಖೆ ನಡೆಯುತ್ತಿದೆ ಎಂದು ಘಟನಾ ಸ್ಥಳಕ್ಕೆ ಭೇಟಿ ನೀಡಿದ ಎಸ್ಪಿ ಸಿದ್ಧಾರ್ಥ್ ಗೋಯಲ್ ಮಾಹಿತಿ ನೀಡಿದ್ದಾರೆ. ಜಮಖಂಡಿ ಪೊಲೀಸರು ಅಪಘಾತ ನಡೆದ ಸ್ಥಳದ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:47 am, Sat, 21 February 26