ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು

ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಟಿಕೆಟ್​​​ ಗಾಗಿ ಶುರುವಾದ ಅಸಮಾಧಾನ ಇದೀಗ ಕೆಲ ಮುಸ್ಲಿಂ ನಾಯಕರ ತಲೆದಂಡದ ಹಂತಕ್ಕೆ ಬಂದು ನಿಂತಿದೆ. ತಮ್ಮ ಸಮುದಾಯಕ್ಕೆ ಟಿಕೆಟ್ ಸಿಗಲಿಲ್ಲ ಎಂದು ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್, ನಸೀರ್ ಅಹ್ಮದ್ ಹಾಗೂ ಸಚಿವ ಜಮೀರ್ ಅಹಮ್ಮದ್ ಖಾನ್ ಅಸಮಾಧಾನಗೊಂಡಿದ್ದು, ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಈ ಸಂಬಂಧ ಇಬ್ಬರು ನಾಯಕರ ಮೇಲೆ ಶಿಸ್ತು ಕ್ರಮಕೈಗೊಳ್ಳಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್​​ನಲ್ಲೂ ಸಹ ಪಕ್ಷ ವಿರೋಧಿ ಚಟುವಟಿಕೆ ನಡೆದಿರುವುದು ಬೆಳಕಿಗೆ ಬಂದಿದೆ.

ದಾವಣಗೆರೆ ಬೆನ್ನಲ್ಲೇ ಬಾಗಲಕೋಟೆ ಉಪಚುನಾವಣೆಯಲ್ಲೂ ಕಾಂಗ್ರೆಸ್​​ಗೆ​ ಒಳ ಏಟು
ಸಾಂದರ್ಭಿಕ ಚಿತ್ರ
Image Credit source: newsx.com
Edited By:

Updated on: Apr 17, 2026 | 6:55 PM

ಬಾಗಲಕೋಟೆ, (ಏಪ್ರಿಲ್ 17): ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ (Davanagere south By Election)  ಕೆಲ ಮುಸ್ಲಿಂ ನಾಯಕರು ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪಗಳು ಕೇಳಿಬಂದಿದ್ದು, ಈ ಸಂಬಂಧ ಅಬ್ದುಲ್ ಜಬ್ಬಾರ್ ಅವರನ್ನ ಕಾಂಗ್ರೆಸ್​​ನಿಂದ ಅಮಾನತು ಮಾಡಲಾಗಿದೆ. ಇನ್ನು ನಸೀರ್ ಅಹಮ್ಮದ್ ಅವರನ್ನ ಸಿಎಂ ರಾಜಕೀಯ ಕಾರ್ಯದರ್ಶಿಯಿಂದ ವಜಾ ಮಾಡಲಾಗಿದೆ. ಇದರ ಬೆನ್ನಲ್ಲೇ ಇದೀಗ ಬಾಗಲಕೋಟೆ ಬೈ ಎಲೆಕ್ಷನ್ ನಲ್ಲೂ (Bagalkot By Election) ಸಹ ಕಾಂಗ್ರೆಸ್ ಮುಖಂಡರು ಪಕ್ಷ ವಿರೋಧಿ ಚಟುವಟಿಕೆ ನಡೆಸಿರುವುದು ಕಂಡುಬಂದಿದ್ದು, ಈ ಸಂಬಂಧ ಕಾಂಗ್ರೆಸ್ ಪಕ್ಷದ ಇಬ್ಬರು ಪಟ್ಟಣ ಪಂಚಾಯತಿ ಸದಸ್ಯರು ಹಾಗೂ ಓರ್ವ ಹಿರಿಯ ಮುಖಂಡರನ್ನು 6 ವರ್ಷಗಳ ಕಾಲ ಉಚ್ಚಾಟನೆಗೆ ಶಿಫಾರಸ್ಸು ಮಾಡಲಾಗಿದೆ.

ಮೂವರ ಉಚ್ಛಾಟನೆಗೆ ಶಿಫಾರಸ್ಸು

ಕಮತಗಿ ಪಟ್ಟಣ ಪಂಚಾಯತ ಸದಸ್ಯರಾದ ರಮೇಶ ಜಮಖಂಡಿ, ಗುರುಲಿಂಗಪ್ಪ ಪಾಟೀಲ್ ಹಾಗೂ ಹಿರಿಯ ಮುಖಂಡ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ ಕಡ್ಲಿಮಟ್ಟಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪ ಕೇಳಿಬಂದಿದೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಉಮೇಶ ಮೇಟಿ ಪರವಾಗಿ ಮತ ಕೇಳಿವುದು ಬಿಟ್ಟು, ಬಿಜೆಪಿಗೆ ಮತ ಹಾಕುವಂತೆ ಒಳಗೊಳಗೆ ಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇವರನ್ನು ಪಕ್ಷದಿಂದ ಉಚ್ಚಾಟನೆ ಮಾಡಬೇಕೆಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್.ರಾಂಪೂರ ಅವರು ಜಿಲ್ಲಾ ಕಾಂಗ್ರೆಸ್ ಕಮಿಟಿಗೆ ಶಿಫಾರಸ್ಸು ಮಾಡಿದ್ದಾರೆ.

ಇದನ್ನೂ ಓದಿ: ಅಬ್ದುಲ್ ಜಬ್ಬಾರ್ ಬೆನ್ನಲ್ಲೇ ಜಮೀರ್ ಆಪ್ತೆಗೆ ಗೇಟ್‌ಪಾಸ್, ಉಪಾಧ್ಯಕ್ಷೆ ಸ್ಥಾನದಿಂದ ಉಚ್ಚಾಟನೆ!

ಇದರ ಬೆನ್ನಲ್ಲೇ ಮೂವರ ವಿರುದ್ಧ ಸೂಕ್ತ ಕ್ರಮಕ್ಕೆ ಬಾಗಲಕೋಟೆ ಜಿಲ್ಲಾ ಕಮಿಟಿ ಮುಂದಾಗಿದೆ. ಪಟ್ಟಣ ಪಂಚಾಯತಿ ಸದಸ್ಯರಾಗಿ ಆಯ್ಕೆಯಾಗಿರುವ ರಮೇಶ್ ಜಮಖಂಡಿ ಮತ್ತು ಗುರುಲಿಂಗಪ್ಪ ಪಾಟೀಲ್ ಅವರ ಸದಸ್ಯತ್ವವನ್ನು ರದ್ದುಗೊಳಿಸಬೇಕೆಂದು ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರು ಜಿಲ್ಲಾಧಿಕಾರಿಗೆ ದೂರು ನೀಡಲು ನಿರ್ಧರಿಸಿದ್ದಾರೆ.

ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೇಳಿದ್ದೇನು?

ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ,
ಬಾಗಲಕೋಟೆ ಮತಕ್ಷೇತ್ರದ ಕಮತಗಿ ಪಟ್ಟಣ ಪಂಚಾಯತಿ ಭಾಗದಲ್ಲಿ ಮಾತ್ರ ಪಕ್ಷ ವಿರೋಧಿ ಚಟುವಟಿಕೆ ಬಗ್ಗೆ ದೂರು ಬಂದಿದೆ. ಇಬ್ಬರು ಪಟ್ಟಣ ಪಂಚಾಯತಿ ಸದಸ್ಯರು ಸೇರಿ ಒಟ್ಟು ಮೂವರ ವಿರುದ್ಧ ದೂರು ಬಂದಿದೆ. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಸ್.ಎನ್.ರಾಂಪೂರ ದೂರು ನೀಡಿದ್ದಾರೆ. ಅದನ್ನ ಪರಿಶೀಲಿಸಿ ಅಮಾನತು ಮಾಡುವ ಕ್ರಮ ಕೈಗೊಳ್ಳಲಾಗುವುದು. ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಬಿಡುವುದಿಲ್ಲ. ಇಬ್ಬರು ಪಟ್ಟಣ ಪಂಚಾಯಿತಿ ಸದಸ್ಯರು ನಮ್ಮ ಕಾಂಗ್ರೆಸ್ ಪಕ್ಷದ ಬಿ ಫಾರ್ಮ ಮೇಲೆ ಆಯ್ಕೆಯಾದವರು. ರಮೇಶ ಜಮಖಂಡಿ ಮತ್ತು ಗುರುಲಿಂಗಪ್ಪ ಪಾಟೀಲ್ ವಿರುದ್ಧ ಅಮಾನತು ಕ್ರಮ ಕೈಗೊಳ್ಳುತ್ತೇವೆ. ಇನ್ನು ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಈಗ ಪಕ್ಷದಲ್ಲಿ ಯಾವುದೇ ಪದಾಧಿಕಾರಿ ಇಲ್ಲ. ಹೀಗಾಗಿ ಉಳಿದ ಇಬ್ಬರ ಮೇಲೆ ಕ್ರಮಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us