
ಬಳ್ಳಾರಿ, ಸೆಪ್ಟೆಂಬರ್ 13: ರಾಜ್ಯ ಸರ್ಕಾರದ ವಿರುದ್ಧ ಹಮ್ಮಿಕೊಳ್ಳಲಾಗಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆ ವೇಳೆ ನಿಯಮ ಮೀರಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಮಾಜಿ ಶಾಸಕರಾದ ಜಿ. ಸೋಮಶೇಖರ ರೆಡ್ಡಿ, ಎಂ.ಪಿ. ರೇಣುಕಾಚಾರ್ಯ ಸೇರಿದಂತೆ 22 ಬಿಜೆಪಿ ನಾಯಕರ ವಿರುದ್ಧ ಪ್ರಕರಣ ದಾಖಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಸೆಪ್ಟೆಂಬರ್ 9ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ರಸ್ತೆ ಸಂಚಾರ ತಡೆದು ಸಾರ್ವಜನಿಕರಿಗೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಕಮ್ಮರಚೇಡು ಗ್ರಾಮದಿಂದ ಬಳ್ಳಾರಿ ನಗರದವರೆಗೆ ಹಮ್ಮಿಕೊಂಡಿದ್ದ ‘ಬಳ್ಳಾರಿ ಚಲೋ’ ಪಾದಯಾತ್ರೆಯು ಸೆಪ್ಟೆಂಬರ್ 9 ರಂದು ಬಳ್ಳಾರಿ ನಗರವನ್ನು ತಲುಪಿ ಸಮಾರೋಪ ಗೊಂಡಿತ್ತು. ಪಾದಯಾತ್ರೆಯ ಮಾರ್ಗದುದ್ದಕ್ಕೂ ಪೂರ್ವಾನುಮತಿಯಿಲ್ಲದೆ ಬಿಜೆಪಿ ಬಾವುಟ ಮತ್ತು ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಬಿಐಟಿಎಂ ಕಾಲೇಜುವರೆಗೆ ಮಾತ್ರ ಬಾವುಟ ಅಳವಡಿಕೆಗೆ ಅವಕಾಶ ನೀಡಿದ್ದ ಜಿಲ್ಲಾಧಿಕಾರಿಗಳು, ಪಾಲಿಕೆ ವ್ಯಾಪ್ತಿಯಲ್ಲಿ ಬ್ಯಾನರ್ ಅಳವಡಿಸದಂತೆ ನಿಷೇಧಾಜ್ಞೆ ಹೊರಡಿಸಿದ್ದರು.
ಸಮಾರೋಪ ಕಾರ್ಯಕ್ರಮದ ಒಂದು ದಿನ ಮುಂಚಿತವಾಗಿಯೇ ನಿಯಮ ಮೀರಿ ಅಳವಡಿಸಲಾಗಿದ್ದ ಬ್ಯಾನರ್ ಮತ್ತು ಬಾವುಟಗಳನ್ನು ಬಳ್ಳಾರಿ ಮಹಾನಗರ ಪಾಲಿಕೆ ಸಿಬ್ಬಂದಿ ತೆರವುಗೊಳಿಸಿದ್ದರು. ಇದು ಬಿಜೆಪಿ ನಾಯಕರ ಮತ್ತು ಆಡಳಿತ ಯಂತ್ರದ ನಡುವೆ ತೀವ್ರ ಜಟಾಪಟಿಗೆ ಕಾರಣವಾಗಿತ್ತು.
ಇದನ್ನೂ ಓದಿ ಬಿಜೆಪಿ ಬಳ್ಳಾರಿ ಚಲೋ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಪಾಲಿಕೆ ಸಿಬ್ಬಂದಿ ಬ್ಯಾನರ್ ತೆರವುಗೊಳಿಸಿದ್ದನ್ನು ಖಂಡಿಸಿ ಆಕ್ರೋಶಗೊಂಡ ಬಿಜೆಪಿ ನಾಯಕರು, ಸೆಪ್ಟೆಂಬರ್ 9 ರಂದು ಬಳ್ಳಾರಿ-ಹೊಸಪೇಟೆ ರಾಷ್ಟ್ರೀಯ ಹೆದ್ದಾರಿ 67 ರಲ್ಲಿ ರಸ್ತೆ ಸಂಚಾರ ತಡೆದು ಧರಣಿ ನಡೆಸಿದ್ದರು. ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸಿ, ಪೂರ್ವಾನುಮತಿ ಇಲ್ಲದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು 22 ನಾಯಕರ ವಿರುದ್ಧ ಕಾನೂನು ಕ್ರಮ ಜರುಗಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ