ಮತ ಎಣಿಕೆ ಮುನ್ನವೇ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮಹತ್ವದ ಬೇಡಿಕೆ ಇಟ್ಟ ಡಾ ಮಂಜುನಾಥ್

ಕರ್ನಾಟಕದ 28 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮತ ಎಣಿಕೆ ಜೂನ್ 4ರಂದು ನಡೆಯಲಿದ್ದು, ಇದಕ್ಕೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮಾಡಿಕೊಂಡಿದ್ದಾರೆ. ಇನ್ನು ಮತ ಎಣಿಕೆ ವೇಳೆ ಯಾವುದೇ ಅಹಿತಕ ಘಟನೆಗಳು ಸಂಭವಿಸದಂತೆ ಪೊಲೀಸ್ ಇಲಾಖೆಯೂ ಸಹ ಬಿಗಿ ಭದ್ರತೆ ಕೈಗೊಂಡಿದೆ. ಇನ್ನು ಮತ ಎಣಿಕೆ ಆರಂಭಕ್ಕೂ ಮುನ್ನ ರಾಮನಗರ ಬಿಜೆಪಿ ಅಭ್ಯರ್ಥಿ ಡಾ ಸಿಎನ್​ ಮಂಜುನಾಥ್ ಅವರು ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದಾರೆ.

ಮತ ಎಣಿಕೆ ಮುನ್ನವೇ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮಹತ್ವದ ಬೇಡಿಕೆ ಇಟ್ಟ ಡಾ ಮಂಜುನಾಥ್
ಡಾ ಮಂಜುನಾಥ್
Follow us
|

Updated on:Jun 02, 2024 | 3:15 PM

ಬೆಂಗಳೂರು, (ಜೂನ್ 02): ಲೋಕಸಭಾ ಚುನಾವಣೆಯ (Lok Sabha Elections 2024) ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ರಾಜ್ಯದ 28 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್​ ಮಂಜುನಾಥ್ (Dr CN Manjunath)​ ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದು, ಮತ‌ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಜಿದ್ದಾಜಿದ್ದಿನ ಕಣವಾಗಿರುವ ಬೆಂಗಳೂರು ಗ್ರಾಮಾಂತರ!

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಸಲ ಭಾರೀ ಸುದ್ದಿಯಾಗಿದೆ. ಹಾಲಿ ಸಂಸದ ಡಿಕೆ ಸುರೇಶ್‌ ಅವರನ್ನು ಸೋಲಿಸಲೇಬೇಕು ಎಂದು ಮೈತ್ರಿ ನಾಯಕರು ಖ್ಯಾಯ ಹೃದ್ರೋಗ ತಜ್ಞ ವೈದ್ಯ ಡಾ. ಸಿಎನ್​​ ಮಂಜುನಾಥ್​ ಅವರನ್ನು ಕಣಕ್ಕಿಳಿಸಿದ್ದಾರೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಈಗಾಗಲೇ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಇದೀಗ ಯಾರು ಗೆಲ್ಲಲಿದ್ದಾರೆ ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ. ಇದರ ಮಧ್ಯ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿ, ಮಂಜುನಾಥ್​ ಗೆಲುವಿಗೆ ಜೆಡಿಎಸ್​ ಕಾರ್ಯಕರ್ತರಿಂದ ಉರುಳುಸೇವೆ, ವಿಶೇಷ ಪೂಜೆ

ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ, ಜೆಡಿಎಸ್​ ನಾಯಕರಲ್ಲಿನ ಸಂತಸ ಮನೆ ಮಾಡಿದ್ದು, ಫಲಿತಾಂಶಕ್ಕಾಗಿ ಕಾತರರಿಂದ ಕಾಯುತ್ತಿದ್ದಾರೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ, ಗಲಾಟೆಗಳು ಆಗಬಾರದು ಎಂದು ಡಾ ಮಂಜುನಾಥ್​ ಅವರು ಮುಂಜಾಗ್ರತಾವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮತ‌ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.

  • ಹೆಚ್ಚುವರಿ ಭದ್ರತಾ ಪಡೆಗಳ ನಿಯೋಜನೆ ಮಾಡಬೇಕು.
  • ಎಣಿಕೆ ಕೇಂದ್ರದ ಸುತ್ತಲೂ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳ ನಿಯೋಜನೆ ಮಾಡಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಬೇಕು.
  • ಯಾವುದೇ ವ್ಯಕ್ತಿಯ ಅನಧಿಕೃತ ಪ್ರವೇಶ ಅಥವಾ ಉಲ್ಲಂಘನೆಯ ಪ್ರಯತ್ನಗಳನ್ನು ತಡೆಗಟ್ಟಲು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು.
  • ಪಕ್ಷದ ಏಜೆಂಟ್‌ಗಳು ಸೇರಿದಂತೆ ಮತ ಎಣಿಕೆ ಪ್ರದೇಶವನ್ನು ಪ್ರವೇಶಿಸುವ ಎಲ್ಲಾ ವ್ಯಕ್ತಿಗಳನ್ನು ಸಂಪೂರ್ಣವಾಗಿ ತಪಾಸಣೆ ಮಾಡಬೇಕು,
  • ಅಧಿಕಾರಿಗಳು ಮತ್ತು ಮಾಧ್ಯಮ ಸಿಬ್ಬಂದಿ ಅವರ ಉಪಸ್ಥಿತಿಯು ಅತ್ಯಗತ್ಯವಾಗಿದ್ದು, ಅವರ ಪೂರ್ವ ಅನುಮತಿ ಪಡೆದ ವ್ಯಕ್ತಿಗಳಿಗೆ ಮಾತ್ರ ಅವಕಾಶ ಮಾಡಿಕೊಡಬೇಕು.

ಇನ್ನು ಈ ಹಿಂದೆ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾನ ನಡೆಯುವ ಮೊದಲು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಸಿಆರ್​ಪಿಎಫ್​ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಕೂಡ ಆಗಿರುವ ಡಾ ಸಿಎನ್‌ ಮಂಜುನಾಥ್‌ ಡಿಕೆ ಸುರೇಶ್‌ಗೆ ಮೊದಲ ಸೋಲಿನ ರುಚಿ ತೋರಿಸ್ತಾರಾ ಎಂಬುದು ಸದ್ಯದ ಕುತೂಹಲ ಮನೆ ಮಾಡಿದ್ದು, ಅಂತಿಮವಾಗಿ ಯಾರು ಗೆಲ್ಲಲಿದ್ದಾರೆ ಎನ್ನುವುದು ಜೂನ್​ 4ರಂದು ತಿಳಿಯಲಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:06 pm, Sun, 2 June 24

ತಾಜಾ ಸುದ್ದಿ