Belagavi Session: ಇಂದಿನಿಂದ ಚಳಿಗಾಲದ ಅಧಿವೇಶನ, ಬೆಳಗಾವಿಯಲ್ಲಿ ಬೀಡುಬಿಟ್ಟ ಇಡೀ ಸರ್ಕಾರ, ವಿಪಕ್ಷಗಳು

ಬೆಳಗಾವಿಯಲ್ಲಿ ಕರ್ನಾಟಕದ ಚಳಿಗಾಲದ ಅಧಿವೇಶನ ಇಂದು ಆರಂಭವಾಗುತ್ತಿದೆ. ರೈತರ ಸಮಸ್ಯೆಗಳು, ಉತ್ತರ ಕರ್ನಾಟಕ ಅಭಿವೃದ್ಧಿ ನಿರ್ಲಕ್ಷ್ಯದ ಆರೋಪಗಳೊಂದಿಗೆ ವಿಪಕ್ಷಗಳು ಸರ್ಕಾರವನ್ನು ಕಟ್ಟಿಹಾಕಲು ಸಜ್ಜಾಗಿವೆ. ಬಿಜೆಪಿ 20,000 ರೈತರೊಂದಿಗೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಕಾಂಗ್ರೆಸ್ ಕೇಂದ್ರದ ಮೇಲೆ ಆರೋಪ ಹೊರಿಸಿ, ಗ್ಯಾರಂಟಿ ಯೋಜನೆಗಳನ್ನು ಸಮರ್ಥಿಸಿಕೊಳ್ಳಲು ಸಿದ್ಧವಾಗಿದೆ.

Belagavi Session: ಇಂದಿನಿಂದ ಚಳಿಗಾಲದ ಅಧಿವೇಶನ, ಬೆಳಗಾವಿಯಲ್ಲಿ ಬೀಡುಬಿಟ್ಟ ಇಡೀ ಸರ್ಕಾರ, ವಿಪಕ್ಷಗಳು
ಸುವರ್ಣ ವಿಧಾನಸೌಧ
Edited By:

Updated on: Dec 08, 2025 | 6:49 AM

ಬೆಳಗಾವಿ, ಡಿಸೆಂಬರ್ 8: ಕುರ್ಚಿ ಕದನದಿಂದ ಸದ್ದುಮಾಡುತ್ತಿದ್ದ ಕರ್ನಾಟಕ ರಾಜಕೀಯ ಇದೀಗ ಬೆಳಗಾವಿಗೆ (Belagavi) ಶಿಫ್ಟ್ ಆಗಿದೆ. ಇಂದಿನಿಂದ ಚಳಿಗಾಲದ ಅಧಿವೇಶನ (Karnataka Winter Session) ಆರಂಭವಾಗುತ್ತಿದೆ. ಸರಣಿ ಸಮಸ್ಯೆಗಳನ್ನು ಮುಂದಿಟ್ಟು ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷಗಳು ಸಜ್ಜುಗೊಂಡಿವೆ. ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್‌ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ.

ಮೊದಲ ದಿನವಾದ ಇವತ್ತು ಅಗಲಿದ ಗಣ್ಯರಿಗೆ ಸಂತಾಪ ಸೂಚಕ ಸಭೆ ನಡೆಯಲಿದೆ. ಆದರೆ, ಮೊದಲ ದಿನವೇ ಉತ್ತರ ಕರ್ನಾಟಕ ಬಗ್ಗೆ ಚರ್ಚೆಗೆ ನಿಲುವಳಿ ಮಂಡಿಸಲು ಬಿಜೆಪಿ ಸಿದ್ಧತೆ ನಡೆಸಿದೆ. ಅಧಿವೇಶನದಲ್ಲಿ ಭಾರೀ ಹಂಗಾಮ ನಡೆಯುವ ಸಾಧ್ಯತೆ ದಟ್ಟವಾಗಿದೆ. ಅನ್ನದಾತರ ಸಮಸ್ಯೆಗಳನ್ನು ಇಟ್ಟುಕೊಂಡೇ ಮೊದಲ ಹಂತದ ಹೋರಾಟಕ್ಕಿಳಿಯಲು ಬಿಜೆಪಿ ಸರ್ವ ಸನ್ನದ್ಧವಾಗಿದೆ.

ಬಿಜೆಪಿ, ಜೆಡಿಎಸ್ ದೋಸ್ತಿಗಳ ರೈತಾಸ್ತ್ರವೇನು?

ಉತ್ತರ ಕರ್ನಾಟಕ ಅಭಿವೃದ್ಧಿಯಲ್ಲಿ ಸರ್ಕಾರ ನಿರ್ಲಕ್ಷ್ಯವಹಿಸಿದೆ, ಅನುದಾನ ಬಿಡುಗಡೆಯಾಗದೆ ಅಭಿವೃದ್ಧಿ ಕುಂಠಿತವಾಗಿದೆ. ಮೆಕ್ಕೆಜೋಳ, ಕಬ್ಬಿಗೆ ಬೆಂಬಲ ಬೆಲೆ, ಖರೀದಿ ಕೇಂದ್ರ ಸ್ಥಾಪನೆ, ತುಂಗಭದ್ರಾ ಅಣೆಕಟ್ಟು ಕ್ರೆಸ್ಟ್ ಗೇಟ್ ವಿಚಾರವನ್ನೇ ಅಧಿವೇಶನದಲ್ಲಿ ಮುಂದಿಟ್ಟು ಪ್ರತಿಭಟನೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಬೆಳಗಾವಿಯಲ್ಲಿ 20 ಸಾವಿರ ರೈತರನ್ನು ಸೇರಿಸಿ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧಾರ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆಳಗಾವಿಗೆ ತೆರಳುವ ಮಾರ್ಗಮಧ್ಯೆ ಭಾನುವಾರ ಹುಬ್ಬಳ್ಳಿಗೆ ಬಂದಿಳಿದ್ದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ, ಉತ್ತರಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಒತ್ತು ನೀಡಬೇಕು. ಇದಕ್ಕಾಗಿ ಎಚ್ಚರಿಸುವ ಕೆಲಸ ಮಾಡ್ತೇವೆ. ಸುವರ್ಣಸೌಧ ಮುತ್ತಿಗೆ ಹಾಕುವ ರೈತರಿಗೆ ಬೆಂಬಲ ನೀಡುತ್ತೇವೆ ಎಂದಿದ್ದಾರೆ.

ಬಿಜೆಪಿ ಬತ್ತಳಿಕೆಯ ಅಸ್ತ್ರಗಳೇನು?

  • ಕಾನೂನು ಸುವ್ಯವಸ್ಥೆ ವಿಷಯ ಚಿಂತನೆ, ಚರ್ಚೆ
  • ನಾಯಕತ್ವ ಬದಲಾವಣೆ ವಿಚಾರ ಪ್ರಸ್ತಾಪಕ್ಕೆ ಸಜ್ಜು
  • ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಪ್ರಸ್ತಾಪ
  • ಪೊಲೀಸರ ಮೇಲೆ ಜೈಲಿನಲ್ಲಿನ ಕೈದಿಗಳ ಹಲ್ಲೆ
  • ವಿಪಕ್ಷಗಳ ಶಾಸಕರ ಅನುದಾನದ ಚರ್ಚೆ

ಪ್ರತಿಪಕ್ಷಗಳಿಗೆ ಕೌಂಟರ್ ಕೊಡಲು ಕಾಂಗ್ರೆಸ್ ಸಿದ್ಧತೆ ಏನು?

ಮೆಕ್ಕೆಜೋಳ ಬೆಲೆ ವಿಚಾರದಲ್ಲಿ ಕೇಂದ್ರದ ವೈಫಲ್ಯ ಬಗ್ಗೆ ಪ್ರತ್ಯಾರೋಪ, ಕಬ್ಬು ಬೆಳೆ ವಿಚಾರದಲ್ಲೂ ಕೇಂದ್ರದ ವಿರುದ್ಧ ಆರೋಪಿಸಲು ಕಾಂಗ್ರೆಸ್ ಸಿದ್ಧತೆ ಮಾಡಿಕೊಂಡಿದೆ. ಅಲ್ಲದೆ, ಕಬ್ಬು, ಮೆಕ್ಕೆಜೋಳ ಬೆಳೆಗಾರರ ಬೆನ್ನಿಗೆ ಸರ್ಕಾರ ನಿಂತಿದೆ ಎಂದು ಸಮರ್ಥನೆ ಮಾಡಿಕೊಳ್ಳಲು ಯೋಜಿಸಿದೆ. 1 ಲಕ್ಷ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವಿನಿಯೋಗಿಸಿ ಜನರ ಕಲ್ಯಾಣ ಕಾರ್ಯಗಳನ್ನು ಹಮ್ಮಿಕೊಂಡಿರುವ ಬಗ್ಗೆ ಸಮರ್ಥಿಸಿಕೊಳ್ಳಲು ಕಾಂಗ್ರೆಸ್ ಸಿದ್ಧತೆ ಮಾಡಿದೆ.

ಮತ್ತೊಂದೆಡೆ, ಅಧಿವೇಶನ ಹಿನ್ನೆಲೆ ಸುವರ್ಣಸೌಧಕ್ಕೆ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಭಾನುವಾರ ರಾತ್ರಿ ಸುವರ್ಣಸೌಧ ಜಗಮಗಿಸುತ್ತಿತ್ತು.

ಇದನ್ನೂ ಓದಿ: ಬೆಳಗಾವಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ಪೂರ್ಣ: ಏಳುಸುತ್ತಿನ ಕೋಟೆಯಾದ ಕುಂದಾನಗರಿ

ಒಟ್ಟಾರೆ ಇಡೀ ಸರ್ಕಾರ, ವಿಪಕ್ಷಗಳು ಬೆಳಗಾವಿಯಲ್ಲಿ ಬೀಡುಬಿಟ್ಟಿವೆ. ಇಂದಿನಿಂದ ಡಿಸೆಂಬರ್ 19ರವರೆಗೂ ಚಳಿಗಾಲದ ಅಧಿವೇಶನ ನಡೆಯಲಿದ್ದು ರಾಜಕೀಯ ಜಿದ್ದಾಜಿದ್ದಿ ಕಾವೇರುವುದು ಖಚಿತವಾಗಿದೆ. ಸದನ ಒಳಗೆ ಮತ್ತು ಹೊರಗೂ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ರೂಪುರೇಷೆ ಸಜ್ಜಾಗಿದೆ. ವಿವಿಧ ಸಂಘಟನಗಳು ಭಾರಿ ಹೋರಾಟಕ್ಕೆ ಮುಂದಾಗಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ, 6 ಸಾವಿರಕ್ಕೂ ಅಧಿಕ ಪೊಲೀಸರ ಭದ್ರತೆ ಹಾಕಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us