ಬೆಳಗಾವಿಯಲ್ಲಿ ಮತ್ತೊಂದು ದುರಂತ: ಸವದತ್ತಿ ಹೊರವಲಯದಲ್ಲಿ ಬಸ್ ಡಿಕ್ಕಿಯಾಗಿ ಬೈಕ್ನಲ್ಲಿ ತೆರಳುತ್ತಿದ್ದ ಮೂವರ ಸಾವು
ಗಣೇಶ ಮೆರವಣಿಗೆ ನೋಡಿ ಬೈಕ್ನಲ್ಲಿ ಹಿಂದಿರುಗುತ್ತಿದ್ದ ಮೂವರು ಯುವಕರು ಬೆಳಗಾವಿಯ ಸವದತ್ತಿ ಹೊರವಲಯದಲ್ಲಿ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬಲಿಯಾಗಿದ್ದಾರೆ. ಇದರೊಂದಿಗೆ, ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದಂತಾಗಿದ್ದು, ಜಿಲ್ಲೆಯಲ್ಲಿ ಹಬ್ಬದ ಬೆನ್ನಲ್ಲೇ ಸೂತಕದ ಛಾಯೆ ಆವರಿಸಿದೆ.

ಬೆಳಗಾವಿ, ಸೆಪ್ಟೆಂಬರ್ 15: ಬೆಳಗಾವಿಯ ಚಾವ್ಹಾಣ್ ಗಲ್ಲಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಜೀವ ದಹನವಾದ ಬೆನ್ನಲ್ಲೇ ಜಿಲ್ಲೆಯಲ್ಲೇ ಮತ್ತೊಂದು ದುರಂತ ಸಂಭವಿಸಿದೆ. ಗಣೇಶ ಮೆರವಣಿಗೆ ನೋಡಿ ಬೈಕ್ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಮೂವರು ಯುವಕರು ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಅಸುನೀಗಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಸವದತ್ತಿಯಿಂದ ಧಾರವಾಡದತ್ತ ತೆರಳುತ್ತಿದ್ದ ಕೆಎಸ್ಆರ್ಟಿಸಿ ಬಸ್, ಧಾರವಾಡದಿಂದ ಸವದತ್ತಿ ಕಡೆಗೆ ಬರುತ್ತಿದ್ದ ಬೈಕ್ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರನ್ನು ಸವದತ್ತಿ ಪಟ್ಟಣದ ನಿವಾಸಿಗಳಾದ ವಿನೋದ್ ಹೊಗೆನ್ನವರ (22), ಆಕಾಶ್ ಜಾಧವ್ (20) ಹಾಗೂ ರವಿ ಕುರುಬರ (22) ಎಂದು ಗುರುತಿಸಲಾಗಿದೆ. ಗಣೇಶ ಮೆರವಣಿಗೆ ವೀಕ್ಷಿಸಿ ಹಿಂದಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಕಲೆಹಾಕಲಾಗುತ್ತಿದೆ.
ಗಣೇಶ ಹಬ್ಬದ ಸಂಭ್ರಮ ಆಚರಿಸಿ ಮಲಗಿದ್ದವರು ಸಜೀವ ದಹನ
ಚಾವ್ಹಾಣ್ ಗಲ್ಲಿಯಲ್ಲಿ ಗಣೇಶ ಹಬ್ಬ ಆಚರಿಸಿ ರಾತ್ರಿ ಮಲಗಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ನಡೆದಿದ್ದು, ಅದರ ಬೆನ್ನಲ್ಲೇ ಬೈಕ್ ಅಪಘಾತದ ಸುದ್ದಿಯೂ ಬರಸಿಡಿಲಿನಂತೆ ಬಂದೆರಗಿದೆ. ಚಾವ್ಹಾಣ್ ಗಲ್ಲಿ ಘಟನೆಯಲ್ಲಿ ನಾಲ್ವರು ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಬೆಳಗಾವಿ: ಗಣೇಶ ಚತುರ್ಥಿ ದಿನವೇ ಭೀಕರ ಅಗ್ನಿ ಅವಘಡ, ಒಂದೇ ಕುಟುಂಬದ ನಾಲ್ವರು ಸಜೀವ ದಹನ
ಮನೆಯೊಳಗಿನ ಅಡುಗೆಮನೆಯಲ್ಲಿ ಸಂಭವಿಸಿದ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದ್ದು, ನಂತರ ಫ್ರಿಡ್ಜ್ ಸ್ಫೋಟಗೊಂಡಿತ್ತು ಎಂಬುದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ. ಆದರೆ, ಪೊಲೀಸರು ಇನ್ನಷ್ಟೇ ಈ ಬಗ್ಗೆ ಅಧಿಕೃತ ಹೇಳಿಕೆ ನೀಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:45 am, Tue, 15 September 26




