AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್​ ಸೇವೆ ಸ್ಥಗಿತ

ಬೆಳಗಾವಿ, ಇದು ಕನ್ನಡ ನೆಲ.. ಇಲ್ಲಿ ಮರಾಠಿ ಭಾಷಿಗರು ನಡೆಸುವ ಪುಂಡಾಟಕ್ಕೆ ಅಂಕುಶವೇ ಇಲ್ಲದಂತಾಗಿದೆ. ಮರಾಠಿ ಮಾತನಾಡದ ಬಸ್ ಕಂಡಕ್ಟರ್ ಮೇಲೆ ಪುಂಡರು ಹಲ್ಲೆ ನಡೆಸಿದ್ದಾರೆ. ಇದನ್ನು ಖಂಡಿಸಿ ಮರಾಠಿಗರು ಬೆಳಗಾವಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ಪರಿಸ್ಥಿತಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸಂಚಾರ ಸ್ಥಗಿತವಾಗಿದೆ.

ಬೆಳಗಾವಿ ಗಡಿಯಲ್ಲಿ ಪರಿಸ್ಥಿತಿ ಉದ್ವಿಗ್ನ: ಮಹಾರಾಷ್ಟ್ರ-ಕರ್ನಾಟಕ ನಡುವೆ ಬಸ್​ ಸೇವೆ ಸ್ಥಗಿತ
Ksrtc Bus
Sahadev Mane
| Edited By: |

Updated on: Feb 23, 2025 | 11:56 AM

Share

ಬೆಳಗಾವಿ, (ಫೆಬ್ರವರಿ 23): ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಸಹ ಕೆಲ ಆರೋಪಗಳನ್ನು ಮಾಡಿದ್ದು, ಈ ಸಂಬಂಧ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಕನ್ನಡಿಗರು ಸಿಡಿದೆದಿದ್ದಾರೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಮುಂಜಾಗ್ರತಾವಾಗಿ ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸಂಚಾರ ಸ್ಥಗಿತ ಮಾಡಲಾಗಿದೆ.  ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕದಿಂದ ಹೊರಡುವ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ.

ನಿಪ್ಪಾಣಿ, ಚಿಕ್ಕೋಡಿ, ಬೆಳಗಾವಿ ಮಾರ್ಗವಾಗಿ ಕೊಲ್ಲಾಪುರಕ್ಕೆ ತೆರಳುವ ಎಲ್ಲಾ KSRTC ಬಸ್​ಗಳ ಸಂಚಾರ ಬಂದ್ ಮಾಡಲಾಗಿದೆ. ಪ್ರತಿದಿನ 120 ಬಸ್​ಗಳ ಸಂಚಾರ ನಡೆಸುತ್ತಿದ್ದು, ಮಧ್ಯಾಹ್ನದ ಬಳಿಕ ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಇದನ್ನೂ ಓದಿ: ಕನ್ನಡಿಗ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣ: ಬೆಳಗಾವಿ ಗಡಿಯಲ್ಲಿ ನಿಜಕ್ಕೂ ನಡೆದಿದ್ದೇನು? ಇಲ್ಲಿದೆ ಸಂಪೂರ್ಣ ವಿವರ

ಇನ್ನೊಂದೆಡೆ ಮಹಾರಾಷ್ಟ್ರದಿಂದ ಕರ್ನಾಟಕಕ್ಕೆ ಸಂಚರಿಸುವ ಎಲ್ಲಾ ಬಸ್ ಸಹ ಸ್ಥಗಿತಗೊಳಿಸಲಾಗಿದೆ. ಬೆಂಗಳೂರಿನಿಂದ ಮುಂಬೈಗೆ ಹೊರಟಿದ್ದ MSRTC ಬಸ್ ಮೇಲೆ ಶುಕ್ರವಾರ ರಾತ್ರಿ 9.10ರ ಸುಮಾರಿಗೆ ಚಿತ್ರದುರ್ಗದಲ್ಲಿ ಕನ್ನಡಪರ ಕಾರ್ಯಕರ್ತರು ದಾಳಿ ಮಾಡಿದ್ದರು. ಕಾರ್ಯಕರ್ತರು ಚಾಲಕ ಭಾಸ್ಕರ್ ಜಾಧವ್ ಅವರ ಮುಖಕ್ಕೂ ಕಪ್ಪು ಬಣ್ಣ ಬಳಿದು ಹಲ್ಲೆ ನಡೆಸಿದ್ದರು ಎಂದು ಆರೋಪಿಸಲಾಗಿದ್ದು, ಈ ಸಂಬಂಧ ಕರ್ನಾಟಕ ಸರ್ಕಾರ ಈ ವಿಷಯದ ಬಗ್ಗೆ ತನ್ನ ನಿಲುವನ್ನು ಸ್ಪಷ್ಟಪಡಿಸದ ಹೊರತು ಕರ್ನಾಟಕಕ್ಕೆ ಬಸ್ ಸೇವೆಗಳನ್ನು ಪುನರಾರಂಭಿಸಲಾಗುವುದಿಲ್ಲ ಎಂದು ಮಹಾರಾಷ್ಟ್ರ ಸಾರಿಗೆ ಸಚಿವ ಪ್ರತಾಪ್ ಸರ್ನಾಯಕ್ ಆದೇಶಿಸಿದ್ದಾರೆ.

ಏನಿದು ಘಟನೆ?

‘ಕಳೆದ ಶುಕ್ರವಾರ ಮಧ್ಯಾಹ್ನ 12.30ರ ವೇಳೆಗೆ ಬೆಳಗಾವಿ ಸಿಬಿಟಿಯಿಂದ ಸುಳೇಬಾವಿಗೆ ಹೊರಟಿದ್ದ ಬಸ್‌ನಲ್ಲಿ ಓರ್ವ ಯುವಕ, ಯುವತಿ ಪ್ರಯಾಣಿಸುತ್ತಿದ್ದರು. ಟಿಕೆಟ್‌ ಪಡೆಯಲು ನಿರ್ವಾಹಕ ಹೇಳಿದಾಗ, ಮರಾಠಿ ಭಾಷೆಯಲ್ಲಿ ಯುವಕ ಉತ್ತರಿಸಿದ್ದಾನೆ. ಮರಾಠಿ ಭಾಷೆ ಅರ್ಥವಾಗುತ್ತಿಲ್ಲ. ಕನ್ನಡದಲ್ಲಿ ಮಾತನಾಡಿ ಎಂದು ಕಂಡಕ್ಟರ್‌ ಹೇಳಿದ್ದಾರೆ. ಈ ಕಾರಣಕ್ಕೆ ಯುವಕ-ಯುವತಿ ಇಬ್ಬರೂ ನಿರ್ವಾಹಕ ಮಹಾದೇವ ಅವರ ಮೇಲೆ ಮುಗಿಬಿದ್ದಿದ್ದಾರೆ. ಬಸ್‌ ಸುಳೇಬಾವಿ ಗ್ರಾಮ ಪ್ರವೇಶಿಸುತ್ತಿದ್ದಂತೆ ತಮ್ಮೂರಿನ ನಾಲ್ವರು ಯುವಕರನ್ನು ಕರೆಯಿಸಿಕೊಂಡು ನಿರ್ವಾಹಕನ ಮೇಲೆ ಹಲ್ಲೆ ಮಾಡಿದ್ದಾರೆ,’ ಎಂದು ಡಿಸಿಪಿ ರೋಹನ್‌ ಜಗದೀಶ ಘಟನೆಯ ವಿವರ ನೀಡಿದ್ದಾರೆ.