
ಬೆಳಗಾವಿ, ಸೆಪ್ಟೆಂಬರ್ 15: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಚಾವ್ಹಾಟ್ ಗಲ್ಲಿಯಲ್ಲಿ ತಡರಾತ್ರಿ ಶಾರ್ಟ್ ಸರ್ಕ್ಯೂಟ್ನಿಂದ ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತರನ್ನು ಗಜಾನನ ರಾಜಾರಾಮ ದಮೋನೆ (65), ರೋಷನ ಗಜಾನನ ದಮೋನೆ (21), ಶಾರದಾ ದಮೋನೆ (45) ಹಾಗೂ ಭಾರತಿ ರಾಜಾರಾಮ ದಮೋನೆ (50) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಪ್ರಿಯಾ ಗಜಾನನ ದಮೋನೆ (28) ಮತ್ತು ಗಂಗಾ ಗಜಾನನ ದಮೋನೆ (25) ಎಂದು ತಿಳಿದುಬಂದಿದೆ.
ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ ಕುಟುಂಬದಲ್ಲಿ ಈ ದಾರುಣ ಘಟನೆ ನಡೆದಿದೆ. ಘಟನೆ ಮಾರ್ಕೆಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಕುಟುಂಬದವರೆಲ್ಲ ರಾತ್ರಿ ಊಟ ಮಾಡಿ ಮಲಗಿದ್ದ ವೇಳೆ ಮನೆಯಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ. ಈ ವೇಳೆ ಫ್ರಿಡ್ಜ್ ಬ್ಲಾಸ್ಟ್ ಆಗಿ ಬೆಂಕಿ ಮತ್ತಷ್ಟು ವ್ಯಾಪಿಸಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಫ್ರಿಡ್ಜ್ ಮುಂಭಾಗದಲ್ಲೇ ಮಲಗಿದ್ದ ನಾಲ್ವರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಬೆಂಕಿಯ ತೀವ್ರತೆಗೆ ಫ್ರಿಡ್ಜ್ ಸಂಪೂರ್ಣ ಸುಟ್ಟು ಡಬ್ಬಿಯಂತೆ ಕಾಣುತ್ತಿದೆ. ತಗಡಿನ ಶೆಡ್ನಿಂದ ನಿರ್ಮಿಸಿದ್ದ ಮನೆಯಲ್ಲಿ ಆರು ಮಂದಿ ಕುಟುಂಬಸ್ಥರು ವಾಸಿಸುತ್ತಿದ್ದರು. ಮನೆಯ ಪಕ್ಕದಲ್ಲಿದ್ದ ಗಣಪತಿ ಮಂಟಪಕ್ಕೂ ಅಲ್ಪ ಪ್ರಮಾಣದ ಹಾನಿಯಾಗಿದೆ. ದುರಂತದ ಬಳಿಕ ಪಕ್ಕದ ಮನೆಯವರು ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:09 am, Tue, 15 September 26