
ಬೆಳಗಾವಿ, ಫೆಬ್ರುವರಿ 01: ಕರ್ನಾಟಕ-ಮಹಾರಾಷ್ಟ್ರ ಗಡಿಯ ಚೋರ್ಲಾ ಘಾಟ್ನಲ್ಲಿ ನಡೆದ 400 ಕೋಟಿ ದರೋಡೆ ಪ್ರಕರಣದ ಬೆನ್ನಲ್ಲೇ ಅದೇ ಮಾರ್ಗದಲ್ಲಿ ಇನ್ನೊಂದು ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪುಷ್ಪ ಸಿನೆಮಾವನ್ನು ನೆನಪಿಸುವಂತೆ ಕಸದ ಮಧ್ಯೆ ಮದ್ಯದ ಬಾಕ್ಸ್ಗಳನ್ನು ಮರೆಮಾಡಿ ಅಕ್ರಮವಾಗಿ ಸಾಗಿಸುತ್ತಿದ್ದ ಗ್ಯಾಂಗ್ ಅನ್ನು ಬೆಳಗಾವಿ (Belagavi) ನಗರದ ಮಾಳಮಾರುತಿ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಮದ್ಯ ಸಾಗಿಸಲಾಗುತ್ತಿತ್ತು ಎಂಬ ಖಚಿತ ಮಾಹಿತಿಯ ಮೇರೆಗೆ, ಸಿಪಿಐ ಬಿ.ಆರ್. ಗಡ್ಡೇಕರ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರ ತಲುಪಬೇಕಿದ್ದ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅದರೊಳಗೆ ಕಸ ತುಂಬಿರುವಂತೆ ಬಿಂಬಿಸಿ, ಕಸದ ರಾಶಿಯ ಒಳಭಾಗದಲ್ಲಿ 800 ಬಾಕ್ಸ್ ಅಕ್ರಮ ಗೋವಾ ಮದ್ಯವನ್ನು ಇಟ್ಟು ಸಾಗಿಸಲಾಗುಯತ್ತಿತ್ತು ಎಂಬುದನ್ನು ಪತ್ತೆಹಚ್ಚಿದ್ದಾರೆ.
ಹೆಚ್ಚಿನ ಮಾಹಿತಿಗೆ ಈ ವೀಡಿಯೋ ನೋಡಿ
ವಶಪಡಿಸಿಕೊಂಡ ಮದ್ಯದ ಅಂದಾಜು ಮೌಲ್ಯ 25 ಲಕ್ಷ ರೂ.ಗಿಂತ ಹೆಚ್ಚು ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಕಣ್ಣಿಗೆ ಮಣ್ಣೆರಚುವ ಉದ್ದೇಶದಿಂದ ವಾಹನದ ಹೊರಭಾಗದಲ್ಲಿ ವೆಸ್ಟೇಜ್ ವಸ್ತುಗಳನ್ನು ತುಂಬಿ, ಒಳಭಾಗದಲ್ಲಿ ಮದ್ಯ ಸಾಗಿಸಲಾಗುತ್ತಿತ್ತು ಎಂದು ಹೇಳಲಾಗಿದೆ. ಗೋವಾದಿಂದ ಹೊರಡುವಾಗ ಎರಡು ಕಡೆ ಚೆಕ್ ಪೋಸ್ಟ್ಗಳಿದ್ದರೂ, ಅಕ್ರಮ ಮದ್ಯ ಕರ್ನಾಟಕ ರಾಜ್ಯಕ್ಕೆ ಪ್ರವೇಶಿಸಿದ್ದು ಹೇಗೆ ಎಂಬ ಗಂಭೀರ ಪ್ರಶ್ನೆ ಎದುರಾಗಿದೆ.
ಇದನ್ನೂ ಓದಿ 400 ಕೋಟಿ ರೂ. ದರೋಡೆ ಪ್ರಕರಣದ ಪ್ರಮುಖ ಆರೋಪಿ ಕಿಶೋರ್ ಸಾಳ್ವೆ ಬಂಧನ
ಕಣಕುಂಬಿ ಬಳಿ ಚೆಕ್ ಪೋಸ್ಟ್ ಇದ್ದರೂ ರಾಜಾರೋಷವಾಗಿ ಮದ್ಯ ಸಾಗಾಟ ನಡೆದಿರುವುದು ಅಬಕಾರಿ ಇಲಾಖೆ ಮತ್ತು ಜಿಲ್ಲಾ ಪೊಲೀಸರ ಕಾರ್ಯವೈಖರಿಯ ಮೇಲೆ ಅನುಮಾನ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ಜಿಲ್ಲಾ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಮದ್ಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.