ಭಾಷಣ ವೇಳೆ ಸಿದ್ದರಾಮಯ್ಯಗೆ ಕಪ್ಪು ಬಟ್ಟೆ ಪ್ರದರ್ಶನ: ಪೊಲೀಸ್ ಅಧಿಕಾರಿಯನ್ನು ವೇದಿಕೆ ಮೇಲೆ ಕರೆದು ಸಿಎಂ ತರಾಟೆ
ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾಷಣದ ವೇಳೆ ಬಿಜೆಪಿ ಮಹಿಳಾ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದರು. ಈ ಘಟನೆಯಿಂದ ಆಕ್ರೋಶಗೊಂಡ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದರು.

ಬೆಳಗಾವಿ, ಏಪ್ರಿಲ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತೆಯರು (BJP Women Activist) ಕಪ್ಪು ಬಟ್ಟೆ (Balck Cloth) ಪ್ರದರ್ಶಿಸಿದ್ದಾರೆ. ಕೇಂದ್ರ ಸರ್ಕಾರದ ಬೆಲೆ ಏರಿಕೆಯನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ ಮುಖಂಡರು ಬೆಳಗಾವಿಯ (Belagavi) ಸಿಪಿಎಡ್ ಮೈದಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಸಿದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಹಲ್ಗಾಮ್ ಉಗ್ರರ ದಾಳಿ ಬಗ್ಗೆ ಮಾತನಾಡುತ್ತಿದ್ದಂತೆ ಓರ್ವ ಬಿಜೆಪಿ ಕಾರ್ಯಕರ್ತೆ ಗೋ ಗೋ ಪಾಕಿಸ್ತಾನ ಅಂತ ಘೋಷಣೆ ಕೂಗಿದರು. ಉಳಿದ ಬಿಜೆಪಿ ಕಾರ್ಯಕರ್ತೆಯರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು. ಕೂಡಲೆ ಸ್ಥಳದಲ್ಲಿದ್ದ ಪೊಲೀಸರು ಬಿಜೆಪಿ ಕಾರ್ಯಕರ್ತೆಯರನ್ನು ವಶಕ್ಕೆ ಪಡೆದರು.
ಇನ್ನು, ಇವರು ಮೊದಲೇ ಬಂದು ವೇದಿಕೆ ಪಕ್ಕದಲ್ಲಿದ್ದ ಸಾರ್ವಜನಿಕರ ಗ್ಯಾಲರಿಯಲ್ಲಿ ನಿಂತಿದ್ದರು. ಕೇಂದ್ರದ ಭದ್ರತಾ ವೈಫಲ್ಯ ಅಂತ ಸಿಎಂ ಹೇಳಿದ್ದಂತೆ ಕಪ್ಪು ಬಟ್ಟೆ ಪ್ರದರ್ಶನ ಮಾಡಿದರು.
ಪೊಲೀಸ್ ಅಧಿಕಾರಿ ವಿರುದ್ಧ ಸಿದ್ದರಾಮಯ್ಯ ಗರಂ
ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶನ ಮಾಡಿದ್ದಕ್ಕೆ ಗರಂ ಆದ ಸಿಎಂ ಸಿದ್ದರಾಮಯ್ಯ, ಅಲ್ಲೇ ಇದ್ದ ಪೊಲೀಸ್ ಅಧಿಕಾರಿಯನ್ನು ವೇದಿಕೆ ಮೇಲೆ ಕರೆದು ತರಾಟೆಗೆ ತೆಗೆದುಕೊಂಡರು. ಕಪ್ಪು ಬಟ್ಟೆ ಪ್ರದರ್ಶನ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಆಕ್ರೋಶದಲ್ಲೇ ಭಾಷಣ ಮಾಡಿದರು. ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಜೈ ಕಾಂಗ್ರೆಸ್, ಜೈ ಬಾಪು , ಜೈ ಭೀಮ್ ಘೋಷಣೆ ಕೂಗಿದರು. ನಾವು ಯಾರಿಗೂ ಹೆದರುವುದಿಲ್ಲ ಅಂತ ಗುಡುಗಿದರು.
ಕಪ್ಪು ಬಟ್ಟೆ ಪ್ರದರ್ಶಿಸಿದವರು ಪೊಲೀಸ್ ವಶಕ್ಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತೆಯರಾದ ಶಿಲ್ಪಾ ಕೇಕ್ರೆ ಮತ್ತು ಕಪ್ಪು ಬಟ್ಟೆ ಪ್ರದರ್ಶಿಸಿದ ಪವಿತ್ರಾ, ಸುಮಿತ್ರಾ ರೇಷ್ಮಾ ಹಾಗೂ ಅನ್ನಪೂರ್ಣ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು, ಘಟನೆ ಬಗ್ಗೆ ಬಾಗಲಕೋಟೆ ಎಎಸ್ಪಿ ಮಹಾಂತೇಶ್ ಜಿದ್ದಿ ಅವರಿಂದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮಾಹಿತಿ ಪಡೆದರು.
ಇದನ್ನೂ ಓದಿ: ಪಾಕ್ ಕುರಿತ ಸಿದ್ದರಾಮಯ್ಯ ಹೇಳಿಕೆ ಬೆನ್ನಲ್ಲೇ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ವಿರುದ್ಧವೂ ಬಿಜೆಪಿ ಆಕ್ರೋಶ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ಘಟನೆಯಿಂದ ಆಕ್ರೋಶಗೊಂಡ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೇದಿಕೆ ಮೇಲೆಯೇ ಪೊಲೀಸ್ ಅಧಿಕಾರಿ ಮೇಲೆ ಕೈ ಎತ್ತಿದರು. ಇದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೆಳಗಾವಿ ಕ್ಯಾಂಪ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಮನವೊಲಿಸಲು ಪೊಲೀಸರು ಮುಂದಾದರು. ಈ ವೇಳೆ ಬಿಜೆಪಿ ಕಾರ್ಯಕರ್ತರು-ಪೊಲೀಸರ ನಡುವೆ ವಾಗ್ವಾದ ನಡೆದಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:30 pm, Mon, 28 April 25







