ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ ಮಗು ಸಾವು: ಸಾವು ಬದುಕಿನ ನಡುವೆ ಗರ್ಭಿಣಿ ಹೋರಾಟ

ಕರ್ನಾಟಕದಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ, ಸಕಾಲದಲ್ಲಿ ಚಿಕಿತ್ಸೆ ದೊರೆಯದ ಕಾರಣ ಬೆಳಗಾವಿಯಲ್ಲಿ ಮಹಿಳೆಯೊಬ್ಬರ ಗರ್ಭದಲ್ಲಿಯೇ ಶಿಶು ಮೃತಪಟ್ಟಿದೆ. ಈಗ ಗರ್ಭಿಣಿಯ ಸ್ಥಿತಿ ಗಂಭೀರವಾಗಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಸಾವು ಬದುಕಿನ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಚಿಕಿತ್ಸೆ ಮುಂದುವರಿದಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಬೆಳಗಾವಿಯಲ್ಲಿ ಸಕಾಲಕ್ಕೆ ಚಿಕಿತ್ಸೆ ಸಿಗದೇ ಗರ್ಭದಲ್ಲೇ ಮಗು ಸಾವು: ಸಾವು ಬದುಕಿನ ನಡುವೆ ಗರ್ಭಿಣಿ ಹೋರಾಟ
ಸಾಂದರ್ಭಿಕ ಚಿತ್ರ
Edited By:

Updated on: Dec 30, 2024 | 12:50 PM

ಬೆಳಗಾವಿ, ಡಿಸೆಂಬರ್ 30: ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮೇಲ್ಮಟ್ಟಿ ಗ್ರಾಮದ ರಾಧಿಕಾ ಗಡ್ಡಹೊಳಿ ಎಂಬ ಗರ್ಭಿಣಿ, ಸಕಾಲದಲ್ಲಿ ಗರ್ಭದಲ್ಲಿರುವ ಶಿಶುವನ್ನು ಕಳೆದುಕೊಂಡಿದ್ದಾರೆ. ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ, ಎಂಟೂವರೆ ತಿಂಗಳ ಗರ್ಭಿಣಿಗೆ ಮನೆಯಲ್ಲಿ ಫಿಟ್ಸ್ ಬಂದಿತ್ತು. ತಕ್ಷಣ ಕುಟುಂಬಸ್ಥರು ಅವರನ್ನು ತಕ್ಷಣ ಯಮಕನಮರಡಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಪ್ರಾಥಮಿಕ ಚಿಕಿತ್ಸೆ ನೀಡಿದ ನಂತರ, ಬೆಳಗಾವಿಯ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು.

ಖಾಸಗಿ ಆಸ್ಪತ್ರೆಗೆ ಸೇರುವ ಹೊತ್ತಿಗೆ ಗರ್ಭಿಣಿಯ ಸ್ಥಿತಿ ಗಂಭೀರವಾಗಿತ್ತು. ಆಸ್ಪತ್ರೆ ಸಿಬ್ಬಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಬೇಕಿದ್ದರೆ ಮೊದಲು ಹಣ ಪಾವತಿಸಬೇಕೆಂದು ಹೇಳಿದ್ದರು. ಹಣ ಪಾವತಿಸಲು ಆಗದ ಹಿನ್ನಲೆಯಲ್ಲಿ, ರಾತ್ರಿ 12 ಗಂಟೆ ಸುಮಾರಿಗೆ ಕುಟುಂಬಸ್ಥರು ಗರ್ಭಿಣಿಯನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಕೊಂಡು, ನಂತರ ಅವರನ್ನು ಬಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಆಸ್ಪತ್ರೆಗಳಿಗೆ ಅಲೆಯುವ ವೇಳೆ ಗರ್ಭದಲ್ಲೇ ಮಗು ಸಾವನ್ನಪ್ಪಿದೆ. ಮಗು ಮೃತಪಟ್ಟು 6 ಗಂಟೆ ಕಳೆದರೂ ಗರ್ಭದಲ್ಲೇ ಇದ್ದು, ಮಗು ಹೊರ ತೆಗೆದು ಗರ್ಭಿಣಿ ಜೀವ ಉಳಿಸಿಕೊಳ್ಳಲು ವೈದ್ಯರು ಹರಸಾಹಸ ಪಡುತ್ತಿದ್ದಾರೆ. ಬೆಳಗಾವಿಯ ಬಿಮ್ಸ್​ ಆಸ್ಪತ್ರೆಯ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ.

ಕರ್ನಾಟಕದಲ್ಲಿ 4 ತಿಂಗಳಲ್ಲಿ 217 ಬಾಂತಿಯರ ಸಾವು

ಕರ್ನಾಟಕದಲ್ಲಿ ಈ ವರ್ಷದ ನವೆಂಬರ್‌ವರೆಗೆ 348 ಬಾಣಂತಿರಯ ಸಾವುಗಳು ದಾಖಲಾಗಿದ್ದು, ಆಗಸ್ಟ್‌ನಿಂದ ನವೆಂಬರ್‌ವರೆಗೆ ಕೇವಲ ನಾಲ್ಕು ತಿಂಗಳಲ್ಲಿ 217 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 179 ಸರ್ಕಾರಿ ಆಸ್ಪತ್ರೆಗಳಲ್ಲಿ ಮತ್ತು 38 ಖಾಸಗಿ ಆಸ್ಪತ್ರೆಗಳಲ್ಲಿ ಸಂಭವಿಸಿವೆ.

ಆಗಸ್ಟ್ ಮತ್ತು ನವೆಂಬರ್ ನಡುವೆ, ರಾಜ್ಯದಲ್ಲಿ ಪ್ರತಿ ತಿಂಗಳು 50 ಕ್ಕೂ ಹೆಚ್ಚು ಬಾಣಂತಿಯರ ಸಾವುಗಳಾಗಿರುವುದು ಅಂಕಿಅಂಶಗಳಿಂದ ತಿಳಿದುಬಂದಿದೆ. ಬಳ್ಳಾರಿಯಲ್ಲಿನ ಬಾಣಂತಿಯರ ಮರಣದ ನಂತರ ಐವಿ ದ್ರಾವಣ ಪರಿಶೀಲನೆಗೆ ಒಳಪಡಿಸಲಾಗಿದ್ದು, ಕಳಪೆ ಐವಿ ದ್ರಾವಣದಿಂದ ಸಾವುಗಳು ಸಂಭವಿಸಿರುವುದು ತಿಳಿದುಬಂದಿತ್ತು.

ಇದನ್ನೂ ಓದಿ: ಗರ್ಭಕೋಶ ಇಲ್ಲದ ಯುವತಿಗೆ ಯೋನಿ ಪುನರ್​​ ರಚನೆ ಚಿಕಿತ್ಸೆ ಯಶಸ್ವಿ

ಏತನ್ಮಧ್ಯೆ, ಪ್ರಸವಪೂರ್ವ ಅಥವಾ ಗರ್ಭಧಾರಣೆಯ ಸಂಬಂಧಿತ ಆರೈಕೆಗಾಗಿ ಮಹಿಳೆಯರಿಗೆ ವಾರಕ್ಕೆ ಮೂರು ಬಾರಿ ಭೇಟಿ ನೀಡುವಂತೆ ಸೂಚಿಸಲಾಗಿದೆ. ಆದರೆ ಅನೇಕರು ಹಾಜರಾಗುವುದಿಲ್ಲ. ಇದಲ್ಲದೆ, ಹೆಚ್ಚಿನ ಬಾಣಂತಿ ಮರಣಗಳು ರಕ್ತಹೀನತೆಯಿಂದ ಸಂಭವಿಸುತ್ತವೆ. ಮಹಿಳೆಯರು ಕಬ್ಬಿಣದ ಅಂಶದ ಗುಳಿಗೆಗಳು ಅಥವಾ ಚುಚ್ಚುಮದ್ದುಗಳಿಗಾಗಿ ವೈದ್ಯಕೀಯ ಆರೈಕೆಯನ್ನು ಪಡೆಯುವುದಿಲ್ಲ ಎಂದು ಸರ್ಕರಿ ಆಸ್ಪತ್ರೆಯ ವೈದ್ಯರೊಬ್ಬರು ತಿಳಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us