34,115 ಕೋಟಿ ರೂ. ಹೂಡಿಕೆಗೆ ಉನ್ನತ ಮಟ್ಟದ ಸಭೆಯಲ್ಲಿ ಅನುಮೋದನೆ, 3,308 ಜನರಿಗೆ ಉದ್ಯೋಗ ನಿರೀಕ್ಷೆ
ಇಂದು (ಡಿಸೆಂಬರ್ 12) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆ ನಡೆದಿದ್ದು, ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಡಕ್ ಸೂಚನೆ ನೀಡಿದ್ದಾರೆ.

ಬೆಳಗಾವಿ, (ಡಿಸೆಂಬರ್ 12): ಸಿಎಂ ಸಿದ್ದರಾಮಯ್ಯನವರ(Siddaramaiah) ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿ ಸಭೆಯಲ್ಲಿ 34,115 ಕೋಟಿ ರೂ. ಹೂಡಿಕೆಗೆ ಅನುಮೋದನೆ ನೀಡಲಾಗಿದೆ. ಇದರಿಂದ 13,308 ಉದ್ಯೋಗ ಸೃಷ್ಟಿ ನಿರೀಕ್ಷಿಸಲಾಗಿದೆ. ಅದರಲ್ಲೂಅನುಮೋದನೆ ನೀಡಲಾಗಿದೆ. ಅಲ್ಲದೇ ಇಲ್ಲಿ ಒಪ್ಪಿಗೆ ಕೊಟ್ಟ ಬಳಿಕ ಕಡತಗಳು ಪುನಃ ವಿವಿಧ ಇಲಾಖೆಗಳಿಗೆ ಅಲೆಯುವಂತಾಗಬಾರದು ಎಂದು ಸಿಎಂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು.
ಇಂದು (ಡಿಸೆಂಬರ್ 12) ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಮಾತನಾಡಿದ ಸಿಎಂ, ಹೂಡಿಕೆದಾರರು ಉದ್ಯಮ ಸ್ಥಾಪನೆಗೆ ಸಲ್ಲಿಸಿದ ಅರ್ಜಿಗಳ ಕುರಿತು ಎಲ್ಲ ಇಲಾಖೆಗಳು ನಿಗದಿತ ಕಾಲಮಿತಿಯಲ್ಲಿ ತಮ್ಮ ಅಭಿಪ್ರಾಯ ನೀಡಬೇಕು. ಎಲ್ಲ ಷರತ್ತುಗಳನ್ನು ಪೂರೈಸುವ ಸಂದರ್ಭದಲ್ಲಿ ಏಕಗವಾಕ್ಷಿ ವ್ಯವಸ್ಥೆಯಲ್ಲಿ 30 ದಿನಗಳೊಳಗೆ ಅನುಮೋದನೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಪ್ರಸ್ತಾವನೆಗಳ ಪರಿಶೀಲನೆಯಲ್ಲಿ ವಿಳಂಬವಾಗುತ್ತಿರುವುದನ್ನು ಗಮನಿಸಿದ ಮುಖ್ಯಮಂತ್ರಿಗಳು, ನಿಗದಿತ ಕಾಲಮಿತಿಯಲ್ಲಿ ಕ್ರಮ ಕೈಗೊಳ್ಳುವಂತೆ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಿದರು. ಅಲ್ಲದೇ ಪ್ರಸ್ತಾವನೆಗಳ ಕಡತ ಇಲಾಖೆಗಳ ಅಭಿಪ್ರಾಯಕ್ಕಾಗಿ ಬಂದಾಗ, ಇಲಾಖಾ ಸಚಿವರ ಗಮನಕ್ಕೆ ಈ ವಿಷಯವನ್ನು ಕಡ್ಡಾಯವಾಗಿ ತರಬೇಕು ಎಂದು ತಿಳಿಸಿದರು.
13,308 ಜನರಿಗೆ ಉದ್ಯೋಗ ನಿರೀಕ್ಷೆ
ಒಟ್ಟು 34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದ್ದು, ಇದರಿಂದ 13,308 ಜನರಿಗೆ ಉದ್ಯೋಗ ದೊರೆಯುವ ನಿರೀಕ್ಷೆ ಇದೆ. ಹೆಚ್ಚುವರಿ ರೂ 13,911 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಮಾಡುವ ಫಾಕ್ಸ್ಕಾನ್ನ ಪ್ರಸ್ತಾವನೆಯನ್ನು ಸಮಿತಿಯು ಅನುಮೋದಿಸಿದೆ. ಫಾಕ್ಸ್ಕಾನ್, ಈಗಾಗಲೇ ರಾಜ್ಯದಲ್ಲಿ ರೂ 8,000 ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಅನುಮೋದನೆ ಪಡೆದಿದೆ.
ಜೆಎಸ್ಡಬ್ಲ್ಯು ರಿನ್ಯೂ ಎನರ್ಜಿ ಫೋರ್ ಲಿಮಿಟೆಡ್ ( 4,960 ಕೋಟಿ ರೂ. ), ಜೆಎಸ್ಡಬ್ಲ್ಯು ಸ್ಟೀಲ್ ಲಿಮಿಟೆಡ್ (ರೂ 3,804 ಕೋಟಿ ), ಟೊಯೊಟಾ ಕಿರ್ಲೋಸ್ಕರ್ ಮೋಟರ್ ಪ್ರೈವೇಟ್ ಲಿಮಿಟೆಡ್ (3237.30 ಕೋಟಿ ರೂ. ), ಟಿಆರ್ಐಎಲ್ ಬೆಂಗಳೂರು ರಿಯಲ್ ಎಸ್ಟೇಟ್ ಸಿಕ್ಸ್ ಲಿಮಿಟೆಡ್ (ರೂ 3273 ಕೋಟಿ ಹೂಡಿಕೆ), ಜಾನಕಿ ಕಾರ್ಪ್ ಲಿಮಿಟೆಡ್ (ರೂ 607 ಕೋಟಿ ಮೊತ್ತದ ಹೆಚ್ಚುವರಿ ಹೂಡಿಕೆ) ಪ್ರಸ್ತಾವನೆಗಳು ’ಎಸ್ಎಚ್ಎಲ್ಸಿಸಿ’ ಅನುಮೋದನೆ ಪಡೆದಿರುವ ದೊಡ್ಡ ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಲ್ಲಿ ಸೇರಿವೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 4 ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ. ಈ ಯೋಜನೆಗಳಿಂದ ಒಟ್ಟು ರೂ 9,461 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ. ಇವುಗಳಿಂದ ಈ ಪ್ರದೇಶದಲ್ಲಿ 3538 ಜನರಿಗೆ ಉದ್ಯೋಗ ಅವಕಾಶಗಳು ದೊರೆಯಲಿವೆ.
ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ಸಚಿವರಾದ ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ನಾಗೇಂದ್ರ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ರಜನೀಶ್ ಗೋಯೆಲ್, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ಡಾ ಶಾಲಿನಿ ರಜನೀಶ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:11 pm, Tue, 12 December 23