ಬೆಳಗಾವಿಯಲ್ಲಿ ಹೆಚ್ಚಾದ ಮಳೆ ಅಬ್ಬರ: 6 ಸಂಪರ್ಕ ಸೇತುವೆಗಳು ಮುಳುಗಡೆ
ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಧಾರಾಕಾರ ಮಳೆ ಮುಂದುವರೆದಿದೆ. ಇತ್ತ ಬೆಳಗಾವಿ ಜಿಲ್ಲೆಯಲ್ಲೂ ಯಲ್ಲೋ ಅಲರ್ಟ್ ಇದ್ದು ಮಳೆ ಅಬ್ಬರ ನಿಲ್ಲುತ್ತಿಲ್ಲ. ಹೀಗಾಗಿ ಚಿಕ್ಕೋಡಿ ಉಪ ವಿಭಾಗದಲ್ಲಿ ಮತ್ತೊಮ್ಮೆ ಆರು ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿದ್ದು, ಕೃಷ್ಣಾ ನದಿಯ ಒಳ ಹರಿವು ದಿನೇ ದಿನೇ ಹೆಚ್ಚಾಗುತ್ತಲೇ ಇದೆ. ಇದು ನದಿ ಪಾತ್ರದ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ.

ಬೆಳಗಾವಿ, ಜೂನ್ 18: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಮತ್ತೆ ಮಳೆ (Monsoon Rain) ಆರ್ಭಟ ಜೋರಾಗಿದೆ. ಕಳೆದ ಮೂರು ದಿನಗಳಿಂದ ಉತ್ತಮ ಮಳೆ ಆಗುತ್ತಿದ್ದು, ಇದರಿಂದ ಬೆಳಗಾವಿ ಜಿಲ್ಲೆಯ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಿಂದ ಕೃಷ್ಣಾ, ವೇದಗಂಗಾ, ದೂದಗಂಗಾ ನದಿಯ ಒಳ ಹರಿವು ಹೆಚ್ಚಾಗಿದೆ. ಈ ಮೂರು ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಆರು ಕೆಳ ಹಂತದ ಸೇತುವೆಗಳು ಜಲಾವೃತಗೊಂಡಿವೆ. ಈ ಆರು ಸೇತುವೆಗಳು ಹನ್ನೆರಡು ಗ್ರಾಮಗಳಿಗೆ ನೇರ ಸಂಪರ್ಕ ಕಲ್ಪಿಸುತ್ತಿವೆ.
12 ಗ್ರಾಮಗಳ ಸಂಪರ್ಕ ಕಡಿತ
ಬಾರವಾಡ-ಕುನ್ನೂರು, ಬೋಜ-ಕಾರದಗಾ, ಭೋಜವಾಡಿ -ಕುನ್ನೂರು ಮತ್ತು ಯಡೂರು- ಕಲ್ಲೋಳ, ಭಾವನಸೌಂದತ್ತಿ- ಮಾಂಜರಿ ಸೇತುವೆಗಳ ಸಂಪರ್ಕ ಕಡಿತ ಆಗಿದೆ. ಇದರಿಂದಾಗಿ 12 ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಈ ಗ್ರಾಮಗಳ ಜನರು ಪರ್ಯಾಯ ಮಾರ್ಗವಾಗಿ ಸಂಚರಿಸಬೇಕಾಗಿದೆ.
ಅತ್ತ ಕೃಷ್ಣಾ ನದಿಯ ಒಳ ಹರಿವು ಕೂಡ ದಿನೇ ದಿನೇ ಹೆಚ್ಚಾಗುತ್ತಿದೆ. ಸದ್ಯ ಮಹಾರಾಷ್ಟ್ರದಿಂದ ಕೃಷ್ಣಾ ನದಿಗೆ 55 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಒಂದೇ ತಿಂಗಳಲ್ಲಿ ಎರಡನೇ ಬಾರಿಗೆ 6 ಸೇತುವೆಗಳು ಜಲಾವೃತಗೊಂಡಿವೆ. ಅತ್ತ ಘಟಪ್ರಭಾ ನದಿಯ ಒಳ ಹರಿವು ಹೆಚ್ಚಾಗಿದೆ. ಮತ್ತೊಂದೆಡೆ, ಖಾನಾಪುರದ ಕಾಡಂಚಿನಲ್ಲಿ ಭಾರಿ ಮಳೆ ಆಗುತ್ತಿದ್ದುದ್ದರಿಂದ ಮಲಪ್ರಭಾ ನದಿ ಉಕ್ಕಿ ಹರಿಯುತ್ತಿದೆ. ಇದರಿಂದ ಖಾನಾಪುರ ತಾಲೂಕಿನ ಹಬ್ಬಾನಟ್ಟಿ ಗ್ರಾಮದಲ್ಲಿ ಆಂಜನೇಯ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.
ಬೆಳಗಾವಿ – ಗೋವಾ ರಸ್ತೆ ಬಂದ್
ಖಾನಾಪುರ ತಾಲೂಕಿನ ಕುಸುಮಳ್ಳಿ ಗ್ರಾಮದಲ್ಲಿ ಮಲಪ್ರಭಾ ನದಿ ನೀರಿನ ರಭಕ್ಕೆ ರಸ್ತೆ ಕಿತ್ತುಕೊಂಡು ಹೋಗಿದೆ. ಇದರಿಂದ ಒಂದೆಡೆಗೆ ನೂತನ ಸೇತುವೆ ನಿರ್ಮಾಣ ಕಾರ್ಯಕ್ಕೆ ಅಡ್ಡಿಯಾಗಿದೆ. ಬೆಳಗಾವಿ ಟು ಕಣಕುಂಬಿ ಮಾರ್ಗವಾಗಿ ಗೋವಾ ಹೋಗುವ ರಸ್ತೆ ಬಂದ್ ಆಗಿದೆ. ಕಳೆದ ಮೂರು ದಿನಗಳಿಂದ ಗೋವಾ ರಾಜ್ಯಕ್ಕೆ ಪರ್ಯಾಯ ಮಾರ್ಗವಾಗಿ ಜನರು ಸಂಚರಿಸುವಂತಾಗಿದೆ.
ಇದನ್ನೂ ಓದಿ: ದಕ್ಷಿಣ ಕರ್ನಾಟಕದಲ್ಲಿ ಮಳೆ ಅಬ್ಬರ ಜೋರು; ಮಂಗಳೂರು, ಚಿಕ್ಕಮಗಳೂರಿನ ಹಲವೆಡೆ ಅನಾಹುತ
ಒಟ್ಟಿನಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಮತ್ತು ಗಡಿ ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರೆದಿರುವುದು ಜನರನ್ನು ಸಕಷ್ಟಕ್ಕೀಡುಮಾಡಿದೆ. ನದಿ ಪಾತ್ರದ ಜನರಿಗೆ ಮತ್ತೆ ಪ್ರವಾಹದ ಭೀತಿ ಕೂಡ ಶುರುವಾಗಿದ್ದು, ಜಮೀನು ಮುಳುಗಡೆಯಾಗುವ ಭಯ ಜನರನ್ನು ಆವರಿಸಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:33 am, Wed, 18 June 25