DK Shivakumar: ಕಾಂಗ್ರೆಸ್ ಮೊದಲ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಯಾವಾಗ? ನಾಳೆ ಸಿಗಲಿದೆ ಉತ್ತರ

ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ​​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಶುಕ್ರವಾರ ಮಾಹಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೆಳಗಾವಿಯಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದರು.

ಬೆಳಗಾವಿ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷದ​​ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಶುಕ್ರವಾರ ಮಾಹಿತಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಬೆಳಗಾವಿಯಲ್ಲಿ ‘ಟಿವಿ9’ಗೆ ಮಾಹಿತಿ ನೀಡಿದರು. ಮೊದಲ ಪಟ್ಟಿ ಬಿಡುಗಡೆ ವಿಚಾರವಾಗಿ ಚರ್ಚಿಸಲು ಇಂದು (ಮಾರ್ಚ್ 16) ಸಂಜೆಯೇ ದೆಹಲಿಗೆ ಹೋಗಬೇಕಿತ್ತು. ಆದರೆ ಕಾರ್ಯಕ್ರಮಗಳಿರುವ ಕಾರಣ ಶುಕ್ರವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದೇನೆ. ನಾಳೆ ಕಾಂಗ್ರೆಸ್​ ಕೇಂದ್ರ ಚುನಾವಣಾ ಸಮಿತಿ ಸಭೆ (CEC) ಸಭೆ ಇದೆ. ಅದು ಮುಗಿದ ಬಳಿಕ ಮೊದಲ ಪಟ್ಟಿ ಬಿಡುಗಡೆ ಬಗ್ಗೆ ಮಾಹಿತಿ ನೀಡುತ್ತೇನೆ ಎಂದು ಅವರು ತಿಳಿಸಿದರು. ಮಾರ್ಚ್​​ 21ರಂದು ರಾಹುಲ್ ಗಾಂಧಿ ಬೆಳಗಾವಿಗೆ ಭೇಟಿ ನೀಡಲಿದ್ದಾರೆ ಎಂದೂ ಅವರು ಹೇಳಿದರು. ನಾಳೆ (ಮಾರ್ಚ್ 17) ಕಾಂಗ್ರೆಸ್​ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ಟಿಕೆಟ್​ ಆಕಾಂಕ್ಷಿಗಳ ಚಿತ್ತ ಇದೀಗ ದೆಹಲಿಯತ್ತ ನೆಟ್ಟಿದೆ.

ಕಾಂಗ್ರೆಸ್‌ನ 135 ಅಭ್ಯರ್ಥಿಗಳ ಮೊದಲ ಪಟ್ಟಿ ನಾಳೆಯೇ (ಮಾ.17) ಹೊರಬೀಳುವ ಸಾಧ್ಯತೆ ಇದೆ ಎಂದು ಮೂಲಗಳು ಈಗಾಗಲೇ ತಿಳಿಸಿದ್ದವು. ಇದಕ್ಕೆ ಪೂರಕವೆಂಬತೆ ಎಂಬಂತೆ ಸ್ಕ್ರೀನಿಂಗ್ ಕಮಿಟಿಯಿಂದ ಹೈಕಮಾಂಡ್‌ಗೆ ಕಳುಹಿಸಲಾಗಿರುವ ಅಭ್ಯರ್ಥಿಗಳ ಪಟ್ಟಿ ಟಿವಿ9ಗೆ ಲಭ್ಯವಾಗಿದ್ದು, ಈಗಾಗಲೇ ಪ್ರಕಟಿಸಲಾಗಿದೆ (ಪಟ್ಟಿ ನೋಡಲು ಇಲ್ಲಿ ಕ್ಲಿಕ್ ಮಾಡಿ).

ಭಾರತ್ ಜೋಡೋ ಬಳಿಕ ಮೊದಲ ಬಾರಿಗೆ ರಾಹುಲ್ ಗಾಂಧಿ ಮಾರ್ಚ್ 21ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಬೆಳಗಾವಿಯಿಂದಲೇ ಚುನಾವಣೆಗೆ ಕಹಳೆ ಊದಲಿದ್ದಾರೆ. ರಾಹುಲ್ ಗಾಂಧಿ ಯುವಕರಿಗಾಗಿ ಪ್ರತ್ಯೇಕ ಪ್ರಣಾಳಿಕೆ ಘೋಷಣೆ ಮಾಡಲಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಹಲವು ಜಿಲ್ಲೆಗಳ ನಾಯಕರ ಜತೆ ಸಭೆ ನಡೆಸಲಿದ್ದಾರೆ.

ಇದನ್ನೂ ಓದಿ: Karnataka Polls: ಅಧಿಕಾರಿಗಳ ವರ್ಗಾವಣೆಗೆ ಚುನಾವಣಾ ಆಯೋಗ ಅಸಮಾಧಾನ; ರಾಜ್ಯ ಸರ್ಕಾರದ ವಿರುದ್ಧ ಗರಂ

ಅದೇ ದಿನ ಇತ್ತೀಚಿಗೆ ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಮನೆಗೆ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಲಿದ್ದಾರೆ.

ಜೆಡಿಎಸ್ – ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ

ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗುರುವಾರ ಮಂಡ್ಯದಲ್ಲಿ ಘರ್ಷಣೆ ನಡೆದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ಮುಂದಾದ ಪೊಲೀಸರ ಜತೆಗೂ ಕಾಂಗ್ರೆಸ್ ಕಾರ್ಯಕರ್ತರು ಮಾತಿನ ಚಕಮಕಿ ನಡೆಸಿದ್ದಾರೆ. ಪ್ರತಿಭಟನಾನಿರತ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೇ ವೇಳೆ ಮಧ್ಯ ಪ್ರವೇಶಿಸಿದ ಮಳವಳ್ಳಿ ಕ್ಷೇತ್ರದ ಮಾಜಿ ಶಾಸಕ ನರೇಂದ್ರಸ್ವಾಮಿ, ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ ಎಂದು ಪೊಲೀಸರಿಗೆ ತಾಕೀತು ಮಾಡಿದ್ದಾರೆ.

ಇನ್ನಷ್ಟು ಚುನಾವಣೆ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 6:51 pm, Thu, 16 March 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us