
ಬೆಳಗಾವಿ, ಜೂನ್ 22: ಬೆಳಗಾವಿಯಲ್ಲಿ (belagavi) ನಾಡದ್ರೋಹಿ ಎಂಇಎಸ್ (MES) ಮತ್ತೆ ಬಾಲ ಬಿಚ್ಚಿದೆ. ಕನ್ನಡ ಕಡ್ಡಾಯ ಆದೇಶ ವಿರೋಧಿಸಿ ಪೊಲೀಸರ ಸಮ್ಮುಖದಲ್ಲೇ ಎಂಇಎಸ್ ಕಾರ್ಯಕರ್ತರು ಪುಂಡಾಟ ಮಾಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿ ಸರ್ಕಾರದ ಆದೇಶವನ್ನು ಹರಿದು ಉದ್ಧಟತನ ಮೆರೆದಿದ್ದಾರೆ. ಮರಾಠಿ ಭಾಷೆಯಲ್ಲಿ ನಾಮಫಲಕ, ದಾಖಲೆಗಳನ್ನು ನೀಡುವಂತೆ ಪ್ರತಿಭಟಿಸಿದ್ದಾರೆ.
ಕನ್ನಡ ಕಡ್ಡಾಯ ವಿರೋಧಿಸಿ ಎಂಇಎಸ್ ಕಾರ್ಯಕರ್ತರು ಮತ್ತೆ ಕ್ಯಾತೆ ತೆಗೆದಿದ್ದಾರೆ. ಡಿಸಿ ಕಚೇರಿ ಆವರಣದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಪೊಲೀಸರ ಸಮ್ಮುಖದಲ್ಲೇ ಸರ್ಕಾರದ ಕನ್ನಡ ಕಡ್ಡಾಯ ಆದೇಶದ ಪ್ರತಿಯನ್ನು ಹರಿದು ಆಟಾಟೋಪ ಮೆರೆದಿದ್ದಾರೆ.
ಇದನ್ನೂ ಓದಿ: ಬೆಳಗಾವಿ ಪಾಲಿಕೆಯಲ್ಲಿ ಗಡಿ ಸಮರ; ‘ಕರ್ನಾಟಕ ಪರ ಗೊತ್ತುವಳಿ’ ಮಂಡನೆ ವೇಳೆ ಎಂಇಎಸ್ ಸದಸ್ಯರ ಕಿರಿಕ್!
ಅಷ್ಟೇ ಅಲ್ಲದೆ, ಕರ್ನಾಟಕ ಸರ್ಕಾರದ ದಾದಾಗಿರಿ ನಡೆಯುವುದಿಲ್ಲ. ಬೆಳಗಾವಿ, ಖಾನಾಪುರ, ನಿಪ್ಪಾಣಿ, ಕಾರವಾರ, ಬೀದರ್ ಹಾಗೂ ಭಾಲ್ಕಿ ಸಂಯುಕ್ತ ಮಹಾರಾಷ್ಟ್ರ ಅಂತಾ ಘೋಷಣೆ ಕೂಗಿದ್ದಾರೆ.
ಇನ್ನು ಎಂಇಎಸ್ ಪುಂಡಾಟಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟಿಸಿದರು. ಎಂಇಎಸ್ ಪುಂಡರನ್ನ ಬಂಧಿಸುವಂತೆ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡರಿಂದ ನಗರದ ಎಸ್ಪಿ ಕಚೇರಿಯಿಂದ ಡಿಸಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ಮಾಡಿದ್ದಾರೆ.
ಸಂಗೊಳ್ಳಿ ರಾಯಣ್ಣ ವೃತ್ತದಲ್ಲೇ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ತಡೆದಿದ್ದಾರೆ. ಡಿಸಿ ಕಚೇರಿ ಆವರಣದಲ್ಲೇ ಸರ್ಕಾರದ ಆದೇಶ ಹರಿದು ಹಾಕುತ್ತಾರೆ. ಇದು ಕನ್ನಡಿಗರಿಗೆ ಮಾಡಿದ ಅವಮಾನ ಎಂದು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಕನ್ನಡಿಗರ ಸ್ವಾಭಿಮಾನ ಹತ್ತಿಕ್ಕಲು ಶಿವಸೇನೆ ಮತ್ತು ಎಂಇಎಸ್ ಪುಂಡರಿಗೆ ಬಿಡೋದಿಲ್ಲ: ಪ್ರವೀಣ್ ಶೆಟ್ಟಿ, ಕರವೇ
ಪುಂಡರ ವಿರುದ್ಧ ಕೇಸ್ ದಾಖಲಿಸಿ ಕ್ರಮ ಕೈಗೊಳ್ಳಬೇಕು. ನಾಡದ್ರೋಹಿ ಎಂಇಎಸ್ ಮತ್ತು ಶಿವಸೇನೆಯನ್ನು ನಿಷೇಧಿಸಲು ಆಗ್ರಹಿಸಿದ್ದಾರೆ. ಜಿಲ್ಲಾಡಳಿತ ಪರವಾಗಿ ಬೆಳಗಾವಿ ಎಸಿಗೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.