ಬೆಳಗಾವಿ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ

| Updated By: ಆಯೇಷಾ ಬಾನು

Updated on: Sep 18, 2024 | 8:00 AM

ಬೆಳಗಾವಿಯಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದೆ. ದುಷ್ಕರ್ಮಿಗಳು ಮೂವರು ವಿದ್ಯಾರ್ಥಿಗಳ ಮೇಲೆ ಅಟ್ಯಾಕ್ ಮಾಡಿದ್ದು ಚಾಕುವಿನಿಂದ ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಕಿದಕ್ಕೆ ಈ ಘಟನೆ ನಡೆದಿದೆ. ಸದ್ಯ ಪೊಲೀಸರು ಚೇಸ್ ಮಾಡಿ ಪರಾರಿಯಾಗುತ್ತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ಬೆಳಗಾವಿ: ಗಣಪತಿ ವಿಸರ್ಜನಾ ಮೆರವಣಿಗೆ ವೇಳೆ ಹಿಂಸಾಚಾರ, ಮೂವರು ವಿದ್ಯಾರ್ಥಿಗಳಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Follow us on

ಬೆಳಗಾವಿ, ಸೆ.18: ಮಂಡ್ಯದ ನಾಗಮಂಗಲ ಕೋಮು ಗಲಭೆ ಬಳಿಕ ಇದೀಗ ಕುಂದಾನಗರಿ ಬೆಳಗಾವಿಯಲ್ಲಿ (Belagavi) ಐತಿಹಾಸಿಕ ಗಣೇಶೋತ್ಸವ ವಿಸರ್ಜನೆ (Ganesha Visarjan) ಮೆರವಣಿಗೆ ವೇಳೆ ಭೀಕರ ದುರಂತವೊಂದು ಸಂಭವಿಸಿದೆ. ಬೆಳಗಾವಿ ನಗರದ ಚೆನ್ನಮ್ಮ ವೃತ್ತದ ಬಳಿ ಮೂವರು ಹಾಸ್ಟೆಲ್​ ವಿದ್ಯಾರ್ಥಿಗಳಿಗೆ (Students) ದುಷ್ಕರ್ಮಿಗಳು ಚಾಕು ಇರಿದಿದ್ದಾರೆ. ಮೆರವಣಿಗೆಯಲ್ಲಿ ಡ್ಯಾನ್ಸ್ ಮಾಡುವಾಗ ಕಾಲು ತಾಗಿದ್ದಕ್ಕೆ ಕಿರಿಕ್​ ಆಗಿದ್ದು ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಚಾಕುವಿನಿಂದ ದಾಳಿ ನಡೆಸಿದ್ದಾರೆ.

ಸಮಾಜ ಕಲ್ಯಾಣ ವಸತಿ ನಿಲಯದ ಮೂವರು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು ಹೊಟ್ಟೆ, ಕತ್ತು, ಬೆನ್ನಿನ ಭಾಗಕ್ಕೆ ಚಾಕುವಿನಿಂದ ಇರಿಯಲಾಗಿದೆ. ಬೆಳಗಾವಿಯ ಚರ್ಚ್​ ಗಲ್ಲಿಯ ಯುವಕರ ಗ್ಯಾಂಗ್​ನಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ. ಘಟನೆಯಲ್ಲಿ ಪ್ರವೀಣ್ ಗುಂಡ್ಯಾಗೋಳ್​ ಎಂಬಾತನಿಗೆ ಗಂಭೀರ ಗಾಯಗಳಾಗಿದ್ದು ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಹಾಗೂ ದರ್ಶನ್​​ ಪಾಟೀಲ್​, ಸತೀಶ್​​ ಪೂಜಾರಿಗೆ ಬಿಮ್ಸ್​​ನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಚೇಸ್ ಮಾಡಿ ಆರೋಪಿಗಳನ್ನು ಸೆರೆ ಹಿಡಿದ ಪೊಲೀಸರು

ಇನ್ನು ಮತ್ತೊಂದೆಡೆ ಚಾಕು ಇರಿದು ಪರಾರಿಯಾಗುತ್ತಿದ್ದ ಮೂವರು ಆರೋಪಿಗಳನ್ನು ಎಪಿಎಂಸಿ ಠಾಣೆ ಪೊಲೀಸರು ಬೆನ್ನತ್ತಿ ಚೇಸ್​ ಮಾಡಿ ಹಿಡಿದಿದ್ದಾರೆ. ಬೈಕ್​ನಲ್ಲಿ ಪರಾರಿಯಾಗುತ್ತಿದ್ದ ಮೂವರು ಆರೋಪಿಗಳು ವಿಶ್ವೇಶ್ವರಯ್ಯನಗರದಲ್ಲಿ ಸೆರೆಯಾಗಿದ್ದಾರೆ. ಸಿಪಿಐ ವಿಶ್ವನಾಥ್ ಕಬ್ಬೂರ ಮತ್ತು ಸಿಬ್ಬಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಗಾಂಜಾ ಮತ್ತಿನಲ್ಲಿ ಚಾಕು ಇರಿದಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ವಶಕ್ಕೆ ಪಡೆದ ಆರೋಪಿಗಳ ವಿಚಾರಣೆ ನಡೆಯುತ್ತಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಮಾಹಿತಿ ಸಂಗ್ರಹಿಸಿದ್ದಾರೆ. ಘಟನೆ ಸಂಬಂಧ ಬೆಳಗಾವಿಯ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ, ಹಲವೆಡೆ ಕೆಟ್ಟು ನಿಂತ ವಾಹನಗಳು: ಬೆಂಗಳೂರಿನ ಕೆಲವೆಡೆ ನಿಧಾನಗತಿಯ ಸಂಚಾರ

ಇನ್ನು ಘಟನೆ ಸಂಬಂಧ ಬೆಳಗಾವಿ ನಗರ ಪೊಲೀಸ್ ಕಮಿಷನರ್​​ ಯಡಾ ಮಾರ್ಟಿನ್ ಪ್ರತಿಕ್ರಿಯೆ ನೀಡಿದ್ದಾರೆ. ಗಣಪತಿ ಮೆರವಣಿಗೆಯಲ್ಲಿ ಡ್ಯಾನ್ಸ್​ ಮಾಡುತ್ತಿದ್ದಾಗ ಕಾಲು ತಾಗಿದೆ. ಇದಾದ ಬಳಿಕ ಹೊರಬಂದು ಗಲಾಟೆ ಮಾಡಿಕೊಂಡಿದ್ದಾರೆ. ಈ ವೇಳೆ ಮೂವರಿಗೆ ಚಾಕು ಇರಿತವಾಗಿದೆ. ಬಿಮ್ಸ್​​ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ವೈಯಕ್ತಿಕ ಕಾರಣಕ್ಕೆ ಚಾಕು ಇರಿದ ಮಾಹಿತಿ ಇದೆ. ಗಾಂಜಾ ಮತ್ತಿನಲ್ಲಿ ಕೃತ್ಯವೆಸಗಿದ ಆರೋಪ ಕೇಳಿ ಬಂದಿದ್ದು ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತೆ ಎಂದು ತಿಳಿಸಿದರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:24 am, Wed, 18 September 24