Madal Virupakshappa: ಮಾಡಾಳ್ ವಿರೂಪಾಕ್ಷಪ್ಪ ಐದು ದಿನ ಲೋಕಾಯುಕ್ತ ವಶಕ್ಕೆ; ನ್ಯಾಯಾಲಯ ಆದೇಶ

ಲಂಚ ಪ್ರಕರಣದ ಪ್ರಮುಖ ಆರೋಪಿ, ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಮಂಗಳವಾರ ಆದೇಶ ನೀಡಿದೆ.

Madal Virupakshappa: ಮಾಡಾಳ್ ವಿರೂಪಾಕ್ಷಪ್ಪ ಐದು ದಿನ ಲೋಕಾಯುಕ್ತ ವಶಕ್ಕೆ; ನ್ಯಾಯಾಲಯ ಆದೇಶ
ಮಾಡಾಳ್ ವಿರೂಪಾಕ್ಷಪ್ಪ

Updated on: Mar 28, 2023 | 4:26 PM

ಬೆಂಗಳೂರು: ಲಂಚ ಪ್ರಕರಣದ ಪ್ರಮುಖ ಆರೋಪಿ, ಸೋಮವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ನೀಡಿ ಮಂಗಳವಾರ ಆದೇಶ ನೀಡಿದೆ. ವಿರೂಪಾಕ್ಷಪ್ಪರನ್ನು 10 ದಿನಗಳ ಕಾಲ ಕಸ್ಟಡಿಗೆ ನೀಡಬೇಕು ಎಂದು ಲೋಕಾಯುಕ್ತ ಪರ ವಕೀಲರು ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ನ್ಯಾಯಾಧೀಶರಿಗೆ ಮನವಿ ಮಾಡಿದರು. ಇದಕ್ಕೆ ಮಾಡಾಳ್ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರು. ಈಗಾಗಲೇ ಸಾಕಷ್ಟು ಬಾರಿ ವಿಚಾರಣೆಗೆ ಹಾಜರಾಗಿದ್ದಾರೆ. ಜತೆಗೆ ಮಾಡಾಳ್ ವಿರೂಪಾಕ್ಷಪ್ಪ ಅನಾರೋಗ್ಯ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿ ಜಾಮೀನು ನೀಡಬೇಕು ಎಂದು ಅರ್ಜಿ ಸಲ್ಲಿಸಿದರು. ಅಂತಿಮವಾಗಿ ಜಡ್ಜ್​ ಬಿ.ಜಯಂತ್ ಕುಮಾರ್ ಐದು ದಿನಗಳ ಕಾಲ ಲೋಕಾಯುಕ್ತ ವಶಕ್ಕೆ ಒಪ್ಪಿಸಿ ಆದೇಶ ನೀಡಿದರು.

ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಸಂಜೆ ತುಮಕೂರಿನ ಕ್ಯಾತ್ಸಂದ್ರ ಟೋಲ್ ಬಳಿ ಬಂಧಿಸಿದ್ದರು. ಮಾಡಾಳ್ ವಿರೂಪಾಕ್ಷಪ್ಪ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದ ಬೆನ್ನಲ್ಲೇ ಲೋಕಾಯುಕ್ತ ಪೊಲೀಸರು ಮಾಡಾಳ್ ಬಂಧನಕ್ಕೆ ಬಲೆ ಬೀಸಿದ್ದರು.

ಇದನ್ನೂ ಓದಿ: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಬಲೆಗೆ ಬಿದ್ದಿದ್ದು ಹೇಗೆ? ಹೀಗಿತ್ತು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ದಾವಣಗೆರೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದಲ್ಲಿ‌ರುವ ಮಾಡಾಳ್ ಅವರ ನಿವಾಸಕ್ಕೆ ಲೋಕಾಯುಕ್ತ ಅಧಿಕಾರಿಗಳು ಧಾವಿಸಿದ್ದರು. ಆರು ಜನ ಲೋಕಾಯುಕ್ತ ಡಿವೈಎಸ್ಪಿ ಹಾಗೂ ಇನ್ಸ್​ಪೆಕ್ಟರ್ ಹುದ್ದೆಯ ಅಧಿಕಾರಿಗಳು ಮನೆಗೆ ತೆರಳಿದ್ದರು. ಅಷ್ಟರಲ್ಲಿ ಬಿಳಿ ಇನ್ನೋವಾ ಕಾರಿನಲ್ಲಿ ಮಾಡಾಳ್ ಬೆಂಗಳೂರು ಕಡೆ ತೆರಳಿದ್ದಾರೆ ಎಂಬ ಮಾಹಿತಿ ದೊರೆತಿತ್ತು. ಅದರಂತೆಯೇ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಲೋಕಾಯುಕ್ತ ಪೊಲೀಸರು ಅರೆಸ್ಟ್​ ಮಾಡಿ ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದರು, ನಂತರ ಅವರ ವೈದ್ಯಕೀಯ ತಪಾಸಣೆ ನಡೆಸಲಾಗಿತ್ತು. ಆ ಸಂದರ್ಭದಲ್ಲಿ ತಮಗೆ ಎದೆ ನೋವಿದೆ ಎಂದು ಮಾಡಾಳ್ ಹೇಳಿಕೊಂಡಿದ್ದರು. ಆದರೆ ಆರೋಗ್ಯ ತಪಾಸಣೆ ಮಾಡಿದ್ದ ವೈದ್ಯರು ಮಾಡಾಳ್ ಆರೋಗ್ಯ ಸ್ಥಿರವಾಗಿದೆ ಎಂದು ವರದಿ ನೀಡಿದ್ದರು. ನಂತರ ಅವರನ್ನು ಲೋಕಾಯುಕ್ತ ಕಚೇರಿಗೆ ಕರೆದೊಯ್ಯಲಾಗಿತ್ತು. ಸೋಮವಾರ ರಾತ್ರಿಯನ್ನು ಲೋಕಾಯುಕ್ತ ಕಚೇರಿಯಲ್ಲೇ ಕಳೆದಿದ್ದ ಮಾಡಾಳ್ ಅವರನ್ನು ಇಂದು (ಮಂಗಳವಾರ) ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Tue, 28 March 23

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us