NPS ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ, ಸರ್ಕಾರಿ ಕಚೇರಿಗಳು ಸ್ತಬ್ಧ

ಬೆಂಗಳೂರಿನಲ್ಲಿ ರಾಜ್ಯ ಸರ್ಕಾರಿ ನೌಕರರು ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ. ಎನ್​ಪಿಎಸ್​ ರದ್ದುಗೊಳಿಸುವಂತೆ ಸರ್ಕಾರಿ ನೌಕರರು ಪಟ್ಟು ಹಿಡಿದಿರುವುದು ಏಕೆ? ಇಲ್ಲಿದೆ ಕಾರಣ

NPS ರದ್ದುಗೊಳಿಸುವಂತೆ ಸರ್ಕಾರಿ ನೌಕರರ ಪ್ರತಿಭಟನೆ, ಸರ್ಕಾರಿ ಕಚೇರಿಗಳು ಸ್ತಬ್ಧ
ವಿಧಾನಸೌಧ
Edited By: ವಿವೇಕ ಬಿರಾದಾರ

Updated on: Feb 07, 2025 | 12:37 PM

ಬೆಂಗಳೂರು, ಫೆಬ್ರವರಿ 07: ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ, ಹಳೆಯ ಪಿಂಚಣಿ ಯೋಜನೆ (OPS) ಜಾರಿಗೆ ತರುವಂತೆ ರಾಜ್ಯದಲ್ಲಿ ರಾಜ್ಯ ಸರ್ಕಾರಿ ನೌಕರರು ಬಿಗಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ, ಎನ್​ಪಿಎಸ್​ ನೌಕರರು ಇಂದು (ಫೆ.07) ಬೆಂಗಳೂರಿನ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ಮಾಡುತ್ತಿದ್ದಾರೆ. ಇದರಿಂದ ರಾಜ್ಯದ ಬಹುತೇಕ ಸರ್ಕಾರಿ ಕಚೇರಿಗಳು ಸ್ತಬ್ಧವಾಗಿವೆ.

2006 ರಿಂದ ಇತ್ತೀಚಿನವರೆಗೂ 2 ಲಕ್ಷದ 83 ಸಾವಿರ ಮಂದಿ ಸರ್ಕಾರಿ ಕೆಲಸಕ್ಕೆ ಸೇರಿದ್ದಾರೆ. ಇವರಿಗೆ ಎನ್​ಪಿಎಸ್​ಪಿಂಚಣಿ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಇದನ್ನು ವಿರೋಧಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

NPS​ ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದ ಸಿಎಂ

ರಾಷ್ಟ್ರೀಯ ಪಿಂಚಣಿ ಯೋಜನೆ ರದ್ದತಿ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. NPS ನೌಕರರ ಸಂಘದ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ್ದ ಅವರು, ಎನ್​ಪಿಎಸ್​ ರದ್ದುಪಡಿಸಿದ ಇತರೆ ರಾಜ್ಯಗಳಲ್ಲಿ ಅನುಸರಿಸಲಾದ ಕ್ರಮಗಳ ಕುರಿತು ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಲಿದೆ ಎಂದು ಹೇಳಿದ್ದರು.

ರಾಜಸ್ಥಾನ, ಛತ್ತೀಸ್​ಗಡ, ಜಾರ್ಖಂಡ್​ ಸೇರಿದಂತೆ ಕೆಲವು ರಾಜ್ಯಗಳು ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸುವುದಾಗಿ ಹೇಳಿದ್ದವು. ಪಂಜಾಬ್ ಸರ್ಕಾರ ಕೂಡ ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸುತ್ತಿರುವುದಾಗಿ ಇತ್ತೀಚೆಗೆ ಹೇಳಿತ್ತು. ಕರ್ನಾಟಕದಲ್ಲಿಯೂ ಹಳೆಯ ಪಿಂಚಣಿ ಯೋಜನೆಯನ್ನು ಮರಳಿ ಜಾರಿಗೊಳಿಸಬೇಕು ಎಂಬ ಆಗ್ರಹ ಸರ್ಕಾರಿ ನೌಕರ ವೃಂದದಿಂದ ಕೇಳಿಬಂದಿತ್ತು.

ಇದನ್ನೂ ಓದಿ:  ಎನ್​ಪಿಎಸ್​ ರದ್ದತಿ ಬಗ್ಗೆ ಕ್ಯಾಬಿನೆಟ್​ನಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ: ಸಿಎಂ ಸಿದ್ದರಾಮಯ್ಯ

ಎನ್​ಪಿಎಸ್​ ಎಂದರೇನು?

ಎನ್​ಪಿಎಸ್ ಎಂಬುದು ರಾಷ್ಟ್ರೀಯ ಅಥವಾ ಹೊಸ ಪಿಂಚಣಿ ಯೋಜನೆಯಾಗಿದ್ದು, ಪಿಂಚಣಿ ಮತ್ತು ಹೂಡಿಕೆಗಳ ಸಂಯೋಜನೆಯಾಗಿದೆ. ಈ ಯೋಜನೆಯಲ್ಲಿ ಸರ್ಕಾರಿ ಉದ್ಯೋಗಿ ಕೂಡ ಮೂಲ ವೇತನದ ಶೇಕಡಾ 10ರಷ್ಟನ್ನು ನಿವೃತ್ತಿ ನಿಧಿಗೆ ಕೊಡುಗೆಯಾಗಿ ನೀಡಬೇಕು. ಉದ್ಯೋಗದಾತರು ಮೂಲ ವೇತನದ ಶೇಕಡಾ 14ರಷ್ಟನ್ನು ಕೊಡುಗೆಯಾಗಿ ನೀಡಬೇಕಾಗುತ್ತದೆ. ಈ ಯೋಜನೆಯ ದೊಡ್ಡ ಪ್ರಯೋಜನವೆಂದರೆ, ಖಾಸಗಿ ಕ್ಷೇತ್ರದ ಉದ್ಯೋಗಿಗೂ ಸೇರಿಕೊಳ್ಳಲು ಅವಕಾಶವಿದೆ. ನಿವೃತ್ತಿಯ ನಂತರ ನಾಗರಿಕರಿಗೆ ಹಣಕಾಸು ಭದ್ರತೆಯನ್ನು ಒದಗಿಸುವುದಕ್ಕಾಗಿ ಸರ್ಕಾರ ಈ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿರ್ವಹಿಸುತ್ತಿದೆ. ಪಿಎಫ್​ಆರ್​ಡಿಎ ಸ್ಥಾಪಿಸಿರುವ ರಾಷ್ಟ್ರೀಯ ಪಿಂಚಣಿ ವ್ಯವಸ್ಥೆ ಟ್ರಸ್ಟ್ (NPST) ಎನ್​​ಪಿಎಸ್​ನ ಅಧಿಕೃತ ಮಾಲೀಕತ್ವ ಹೊಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
Follow Us