ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಸಿದ ಎನ್​ಐಎ: ಆಘಾತಕಾರಿ ಮಾಹಿತಿ ಬೆಳಕಿಗೆ

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ್ದ ಬಾಂಬ್ ಸ್ಫೋಟ ಪ್ರಕರಣ ವಿಚಾರವಾಗಿ ಎನ್​ಐಎ ಮೂರನೇ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಆಘಾತಕಾರಿ ಅಂಶಗಳನ್ನು ಬಯಲು ಮಾಡಿದೆ. ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿರುವ ಪೂರಕ ಚಾರ್ಜ್​ಶೀಟ್​​ನಲ್ಲೇನಿದೆ? ಆರೋಪಿಗಳ ಬಗ್ಗೆ ಎನ್​ಐಎ ಹೇಳಿದ್ದೇನು ಎಂಬ ವಿಚಾರಗಳು ಇಲ್ಲಿವೆ.

ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಸಿದ ಎನ್​ಐಎ: ಆಘಾತಕಾರಿ ಮಾಹಿತಿ ಬೆಳಕಿಗೆ
ರಾಮೇಶ್ವರಂ ಕೆಫೆ ಸ್ಫೋಟ ಆರೋಪಿಗಳ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಸಿದ ಎನ್​ಐಎ

Updated on: Sep 25, 2024 | 8:09 AM

ಬೆಂಗಳೂರು, ಸೆಪ್ಟೆಂಬರ್ 25: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಮಂಗಳವಾರ ಆರೋಪಿಗಳಿಬ್ಬರ ವಿರುದ್ಧ ಮತ್ತೊಂದು ಚಾರ್ಜ್​ಶೀಟ್ (ಪೂರಕ ಚಾರ್ಜ್​ಶೀಟ್) ಸಲ್ಲಿಕೆ ಮಾಡಿದೆ. ಇದರಲ್ಲಿ ಗಂಭೀರ ಆರೋಪಗಳನ್ನು ಹೊರಿಸಲಾಗಿದೆ. ಆರೋಪಿಗಳಾದ (ಐಸಿಸ್ ಉಗ್ರರು) ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಶಾಜಿಬ್ ವಿರುದ್ಧ ಈ ಹಿಂದೆಯೂ ಎನ್​ಐಎ ಚಾರ್ಜ್​ಶೀಟ್ ಸಲ್ಲಿಸಿತ್ತು. ಇದೀಗ ಮತ್ತೊಂದು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದೆ.

ಚಾರ್ಜ್​ಶೀಟ್​​ನಲ್ಲೇನಿದೆ?

ಆರೋಪಿಗಳಾದ ಅಬ್ದುಲ್ ಮತೀನ್ ಅಹ್ಮದ್ ತಾಹಾ ಮತ್ತು ಮಸ್ಸಾವೀರ್ ಹುಸೇನ್ ಮುಸ್ಲಿಂ ಯುವಕರನ್ನು ಮೂಲಭೂತವಾದಿ ಚಟುವಟಿಕೆಗಳಿಗೆ ಸೆಳೆಯುತ್ತಿದ್ದರಲ್ಲದೆ, ಪ್ರಚೋದನೆ ನೀಡುತ್ತಿದ್ದರು. ಭಯೋತ್ಪಾದಕರಿಗೆ ಹಣಕಾಸು ನೆರವನ್ನೂ ನೀಡುತ್ತಿದ್ದರು ಎಂದು ಚಾರ್ಜ್​​ಶೀಟ್​ನಲ್ಲಿ ಉಲ್ಲೇಖಿಸಲಾಗಿದೆ. ಇವರಿಬ್ಬರೂ ಶಿವಮೊಗ್ಗ ಜಿಲ್ಲೆಯ ನಿವಾಸಿಗಳಾಗಿದ್ದಾರೆ.

10 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ

ಇಬ್ಬರು ಆರೋಪಿಗಳ ವಿರುದ್ಧ ಎನ್‌ಐಎ ಸಲ್ಲಿಸಿರುವ ಮೂರನೇ ಪೂರಕ ಚಾರ್ಜ್‌ಶೀಟ್‌ (ದೋಷಾರೋಪ ಪಟ್ಟಿ) ಇದಾಗಿದೆ. ಇದರೊಂದಿಗೆ ಪ್ರಕರಣದಲ್ಲಿ ಈವರೆಗೆ 10 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದಂತಾಗಿದೆ.

ಆರಂಭದಲ್ಲಿ ಕರ್ನಾಟಕ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದರು. ನಂತರ 2022 ರ ನವೆಂಬರ್​​ನಲ್ಲಿ ಎನ್ಐಎ ತನಿಖೆ ಕೈಗೆತ್ತಿಕೊಂಡಿತ್ತು. ನಂತರ, ಘಟನೆಯು ನಿಷೇಧಿತ ಭಯೋತ್ಪಾದಕ ಸಂಘಟನೆ ಇಸ್ಲಾಮಿಕ್ ಸ್ಟೇಟ್ (ಐಎಸ್/ಐಎಸ್ಐಎಸ್) ನ ಭಾರತ ವಿರೋಧಿ ಚಟುವಟಿಕೆಗಳಿಗೆ ಸಂಬಂಧಿಸಿದೆ ಎಂದು ಅದು ತಿಳಿಸಿತ್ತು.

ದೇಶದಲ್ಲಿ ಅಭದ್ರತೆ ಸೃಷ್ಟಿಸಲು ಸಂಚು

ಆರೋಪಿಗಳು ಭಯೋತ್ಪಾದನೆಯನ್ನು ಹರಡಲು ಮತ್ತು ರಾಷ್ಟ್ರವನ್ನು ಅಸ್ಥಿರಗೊಳಿಸುವ ಐಎಸ್ ಪಿತೂರಿಯ ಭಾಗವಾಗಿ ಮೂಲಭೂತವಾದಿ ಚಟುವಟಿಕೆಗಳು, ಭಯೋತ್ಪಾದನೆಗೆ ಯುವಕರನ್ನು ಸೆಳೆಯುವುದು, ಭಯೋತ್ಪಾದನೆಗೆ ಹಣಕಾಸು ನೆರವು ನೀಡುವುದು, ಸ್ಫೋಟ ಕೃತ್ಯ ಎಸಗುವುದು ಮತ್ತು ಭಾರತೀಯ ರಾಷ್ಟ್ರಧ್ವಜದ ದಹನದಂತಹ ಹಿಂಸಾತ್ಮಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾರೆ ಎಂದು ಎನ್​ಐಎ ತಿಳಿಸಿದೆ.

ಇದನ್ನೂ ಓದಿ: ಬಿಜೆಪಿ ಕಚೇರಿ ಸ್ಫೋಟಗೊಳಿಸುವ ಸಂಚು​ ವಿಫಲ ಬೆನ್ನಲ್ಲೇ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ

ಕರ್ನಾಟಕ ಪೊಲೀಸರು 2022 ರ ಸೆಪ್ಟೆಂಬರ್​​ನಲ್ಲಿ ದಾಖಲಿಸಿದ ಪ್ರಕರಣದ ತನಿಖೆ ಕೂಡ ನಡೆಯುತ್ತಿವೆ ಎಂದು ಎನ್​ಐಎ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
Follow Us