ಬೆಂಗಳೂರಿನಲ್ಲಿ ಮತ್ತೊಂದು ದರೋಡೆ: ಅಧಿಕಾರಿಗಳ ಸೋಗಿನಲ್ಲಿ ಬಂದು ಲಕ್ಷಾಂತರ ರೂ ಹೊತ್ತೊಯ್ದರು
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ದರೋಡೆ ನಡೆದಿದೆ. ರೈಡ್ ಮಾಡುವ ನೆಪದಲ್ಲಿ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು ಬರೋಬ್ಬರಿ 24 ಲಕ್ಷ ರೂ ದೋಚಿ ಖದೀಮರು ಪರಾರಿಯಾಗಿದ್ದಾರೆ. ಸದ್ಯ ದೇವನಹಳ್ಳಿ ಪೊಲೀಸರು 09 ಜನ ಆರೋಪಿಗಳನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ದೇವನಹಳ್ಳಿ, ಫೆಬ್ರವರಿ 23: ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳ ಸೋಗಿನಲ್ಲಿ ಎಂಟ್ರಿಕೊಟ್ಟು 24 ಲಕ್ಷ ರೂ ಹಣವನ್ನ ದೋಚಿ (Robbery) ಎಸ್ಕೇಪ್ ಆಗಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹೊರವಲಯದ ಪ್ರಸನ್ನಹಳ್ಳಿ ರಸ್ತೆಯಲ್ಲಿ ನಡೆದಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿದಂತೆ 12 ಜನರ ಪೈಕಿ 09 ಆರೋಪಿಗಳನ್ನ ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಕೃಷ್ಣಕುಮಾರ್, ವೇಣುಗೋಪಾಲ್, ಸಂಪಂಗಿ ರಾಮ, ಅಹಮದ್, ನಾರಾಯಣಸ್ವಾಮಿ, ವೆಂಕಟೇಶ, ಮುರುಗೇಶನ್, ಶಿವ, ಲತೀಪ್ ಬಂಧಿತ ಆರೋಪಿಗಳು. ಬಂಧಿತರಿಂದ ಹಣವನ್ನು ಜಪ್ತಿ ಮಾಡಲಾಗಿದೆ.
ನಡೆದಿದ್ದೇನು?
ಶಂಕರಪ್ಪ ಎಂಬುವವರಿಗೆ ಹಣ ತ್ರಿಬಲ್ ಮಾಡಿಕೊಡುವುದಾಗಿ ಹೇಳಿ ಎ1 ಆರೋಪಿ ಕೃಷ್ಣ ಕುಮಾರ್ ಫೋನ್ ಮಾಡಿ ಕರೆಸಿಕೊಂಡಿದ್ದಾನೆ. ಅದರಂತೆ ಶಂಕರಪ್ಪ ಚಿನ್ನಾಭರಣ ಅಡವಿಟ್ಟು 24 ಲಕ್ಷ ರೂ ಹಣವನ್ನು ತಂದಿದ್ದಾರೆ. ಇತ್ತ ಮೊದಲೇ ಮಾಡಿಕೊಂಡಿದ್ದ ಪ್ಲ್ಯಾನ್ನಂತೆ ಖಾಸಗಿ ಕಾರಿನಲ್ಲಿ ಕೃಷ್ಣ ಕುಮಾರ್ ಸಹಚರರು ಮಾನವ ಹಕ್ಕುಗಳ ಸಂರಕ್ಷಣೆ ಮತ್ತು ಭ್ರಷ್ಟಾಚಾರ ನಿಗ್ರಹ ದಳ ಹೆಸರಿನಲ್ಲಿ ಖಾಸಗಿ ಕಾರ್ಗೆ ಬೋರ್ಡ್ ಹಾಕಿಕೊಂಡು ಅಧಿಕಾರಿಗಳ ಸೋಗಿನಲ್ಲಿ ಬಂದು 24 ಲಕ್ಷ ರೂ ಹಣವನ್ನು ದೋಚಿ ಪರಾರಿಯಾಗಿದ್ದಾರೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್ಕಾರ್ಟ್ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ
ಹಣ ಎಗರಿಸಿದ ನಂತರ ಎ1 ಆರೋಪಿ ಕೃಷ್ಣಕುಮಾರ್ ಪೊಲೀಸ್ ಠಾಣೆಗೆ ಬಂದು ತಾನೇ ದೂರು ನೀಡಿದ್ದ. ಪೊಲೀಸರ ವಿಚಾರಣೆ ವೇಳೆ ದೂರು ನೀಡಿದ್ದ ಆರೋಪಿಯೇ ದರೋಡೆಕೋರ ಎನ್ನುವುದು ಬಯಲಾಗಿದೆ. ಸದ್ಯ ದೇವನಹಳ್ಳಿ ಠಾಣೆ ಪೊಲೀಸರು 12 ಜನರಲ್ಲಿ 09 ಆರೋಪಿಗಳನ್ನ ಬಂಧಿಸಿದ್ದಾರೆ.
ಪ್ರತಿಷ್ಠಿತ ಕೆನರಾ ಬ್ಯಾಂಕ್ನಲ್ಲಿ ಕಳ್ಳತನಕ್ಕೆ ಯತ್ನ
ಇನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಪ್ರತಿಷ್ಠಿತ ಕೆನರಾ ಬ್ಯಾಂಕ್ನಲ್ಲಿ ಬೆಳಗಿನ ಜಾವ 3ರ ಸುಮಾರಿಗೆ ಕಳ್ಳತನಕ್ಕೆ ಯತ್ನಿಸಿರುವಂತಹ ಘಟನೆ ನಡೆದಿದೆ. ಸೈರನ್ ಆಗುತ್ತಿದ್ದಂತೆ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಸದ್ಯ ಶೇಷಾದ್ರಿಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.
ಇದನ್ನೂ ಓದಿ: ದರೋಡೆ ಕೇಸ್ ಬೇಧಿಸಿದ ಬೆಂಗಳೂರು ಪೊಲೀಸ್: ಅಧಿಕಾರಿಗಳಿಗೆ 5 ಲಕ್ಷ ರೂ ಬಹುಮಾನ ಘೋಷಣೆ
ರಾತ್ರಿ ಬ್ಯಾಂಕ್ ಹಿಂಬದಿ ಇದ್ದ ಗ್ರಿಲ್ ಕಟ್ ಮಾಡಿ ಒಳ ನುಗ್ಗಿರುವ ಕಳ್ಳ, ಪೂರ್ತಿ ಬ್ಯಾಂಕ್ ಸರ್ಚ್ ಮಾಡಿದ್ದಾನೆ. ಸ್ಟ್ರಾಂಗ್ ರೂಮ್ ಹತ್ತಿರ ಹೋಗಿ ವೈರ್ ಕಟ್ ಮಾಡಿದ್ದು, ವೈರ್ ಕಟ್ ಮಾಡುತ್ತಿದಂತೆ ಸೈರನ್ ಆನ್ ಆಗಿದೆ. ಬಳಿಕ ಅಲ್ಲಿಂದ ಕಳ್ಳ ಓಡಿ ಹೋಗಿರುವ ಶಂಕೆ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.