ಬೃಹತ್ ಕಾರ್ಯಕ್ರಮ, ಸಮಾರಂಭಗಳಿಗೆ ಎಸ್​ಒಪಿ: ಗೃಹ ಸಚಿವ ಪರಮೇಶ್ವರ್ ಘೋಷಣೆ

ಅಪಾರ ಪ್ರಮಾಣದಲ್ಲಿ ಜನ ಸೇರುವ ಸಮಾರಂಭಗಳಿಗೆ, ಬೃಹತ್ ಕಾರ್ಯಕ್ರಮ, ಸಂಭ್ರಮಾಚರಣೆಗಳಿಗೆ ಹೊಸ ಎಸ್​​ಒಪಿ ರೂಪಿಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದ್ದಾರೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್​ಸಿಬಿ ಐಪಿಎಲ್ ವಿಜಯೋತ್ಸವ ಕಾರ್ಯಕ್ರಮದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಜನ ಸಾವಿಗೀಡಾದ ಬೆನ್ನಲ್ಲೇ ಅವರು ಈ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಘಟನೆ ಸಂಬಂಧ ತಪ್ಪಿತಸ್ಥರ ವಿರುದ್ಧ ಕ್ರಮದ ಭರವಸೆಯನ್ನೂ ನೀಡಿದ್ದಾರೆ.

ಬೃಹತ್ ಕಾರ್ಯಕ್ರಮ, ಸಮಾರಂಭಗಳಿಗೆ ಎಸ್​ಒಪಿ: ಗೃಹ ಸಚಿವ ಪರಮೇಶ್ವರ್ ಘೋಷಣೆ
ಗೃಹ ಸಚಿವ ಪರಮೇಶ್ವರ್

Updated on: Jun 05, 2025 | 12:10 PM

ಬೆಂಗಳೂರು, ಜೂನ್ 5: ಆರ್​ಸಿಬಿ  (RCBಐಪಿಎಲ್ ವಿಜಯೋತ್ಸವ ಕಾರ್ಯಕ್ರಮದ ವೇಳೆ ಕಾಲ್ತುಳಿತದಿಂದ 11 ಮಂದಿ ಮೃತಪಟ್ಟ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕರ್ನಾಟಕ ಸರ್ಕಾರ, ಇಂಥ ಬೃಹತ್ ಕಾರ್ಯಕ್ರಮಗಳಿಗೆ ಸ್ಟಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ ರೂಪಿಸಲು ಮುಂದಾಗಿದೆ. ಅಹಿತಕರ ಘಟನೆಗಳನ್ನು ತಡೆಯುವ ಉದ್ದೇಶದಿಂದ ಬೃಹತ್ ಸಭೆ-ಸಮಾರಂಭಗಳು, ಕಾರ್ಯಕ್ರಮಗಳು, ಸಂಭ್ರಮಾಚರಣೆಗಳಿಗೆ ಎಸ್​​ಒಪಿ ರೂಪಿಸಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ (G Parameshwara) ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತಕ್ಕೆ ಕಾರಣವೇನು ಎಂಬುದನ್ನು ಪತ್ತೆಮಾಡಲಿದ್ದೇವೆ. ಲೋಪಗಳನ್ನು ಗುರುತಿಸಿ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಹೇಳಿದರು.

ಕಾಲ್ತುಳಿತ ಘಟನೆಯಲ್ಲಿ ಹನ್ನೊಂದು ಜನರು ಸಾವನ್ನಪ್ಪಿದ್ದಾರೆ ಮತ್ತು 56 ಜನರು ಗಾಯಗೊಂಡಿದ್ದಾರೆ ಎಂದು ಅವರು ಮಾಹಿತಿ ನೀಡಿದರು. ಗಾಯಾಳುಗಳಲ್ಲಿ 46 ಜನರು ಚಿಕಿತ್ಸೆಯ ನಂತರ ಮನೆಗೆ ಮರಳಿದ್ದಾರೆ, 10 ಜನರು ಆಸ್ಪತ್ರೆಯಲ್ಲಿದ್ದಾರೆ ಮತ್ತು ವೈದ್ಯರ ಪ್ರಕಾರ, ಅವರ ಸ್ಥಿತಿ ಗಂಭೀರವಾಗಿಲ್ಲ ಎಂದು ಸಚಿವರು ತಿಳಿಸಿದರು.

ಇಂತಹ ಘಟನೆಗಳನ್ನು ತಡೆಗಟ್ಟುವ ಉದ್ದೇಶದಿಂದ ಸರ್ಕಾರ, ಗೃಹ ಇಲಾಖೆ ಹೊಸ ಎಸ್​​ಒಪಿ ರೂಪಿಸಲಿವೆ. ಇನ್ನು ಮುಂದೆ ಯಾವುದೇ ಬೃಹತ್ ಕಾರ್ಯಕ್ರಮಗಳು, ಸಭೆಗಳು ಮತ್ತು ಆಚರಣೆಗಳನ್ನು ಪೊಲೀಸ್ ಇಲಾಖೆ ಹೊರಡಿಸಿದ ನಿರ್ದೇಶನಗಳ ಚೌಕಟ್ಟಿನೊಳಗೆ ನಡೆಸಬೇಕೆಂದು ನಾವು ಸೂಚನೆಗಳನ್ನು ನೀಡುತ್ತೇವೆ ಎಂದು ಪರಮೇಶ್ವರ್ ಹೇಳಿದರು.

ಇದನ್ನೂ ಓದಿ
ತಕ್ಷಣವೇ ಸಂಭ್ರಮಾಚರಣೆ ಬೇಡವೆಂದರೂ ಕೇಳಿಲ್ಲ: ಪೊಲೀಸರಿಂದ ತೀವ್ರ ಅಸಮಾಧಾನ
ಬೆಂಗಳೂರು ಕಾಲ್ತುಳಿತದಲ್ಲಿ ಮೃತಪಟ್ಟವರು ಯಾರೆಲ್ಲ? ಇಲ್ಲಿದೆ ಪೂರ್ಣ ವಿವರ
ಬೆಂಗಳೂರಲ್ಲಿ ಕಾಲ್ತುಳಿತ; ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಕಾರಣವೆಂದ ಬಿಜೆಪಿ
ಐಪಿಎಲ್ ಸಂಭ್ರಮದಲ್ಲಿ ಸೂತಕ; ಯಡವಟ್ಟಾಗಿದ್ದೆಲ್ಲಿ, ಹೊಣೆ ಯಾರು?

ಇಂತಹ ಸಾವುಗಳು ಸಂಭವಿಸಬಾರದು, ಅಮಾಯಕರು ಸಾಯಬಾರದು. ಅಮಾಯಕರ ಮೃತದೇಹಗಳನ್ನು ನೋಡುವುದು ಯಾರಿಗಾದರೂ ನೋವುಂಟು ಮಾಡುತ್ತದೆ. ಅವರಲ್ಲಿ ಹಲವರು 20-25 ವರ್ಷ ವಯಸ್ಸಿನ ಯುವ ಜನರಾಗಿದ್ದರು. ಅವರು ಆರ್​ಸಿಬಿ ಗೆಲುವನ್ನು ಆಚರಿಸಲು ಸಂತೋಷದಿಂದ ಬಂದಿದ್ದರು. ಅಂಥವರು ಪ್ರಾಣ ಕಳೆದುಕೊಳ್ಳುತ್ತಾರೆಂದು ನಿರೀಕ್ಷಿಸಿರಲಿಲ್ಲ. ಲೋಪಗಳನ್ನು ಗುರುತಿಸಿ ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಪರಮೇಶ್ವರ್ ಭರವಸೆ ನೀಡಿದರು.

ಇದನ್ನೂ ಓದಿ: ಬೆಂಗಳೂರು ಕಾಲ್ತುಳಿತ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿದ ಹೈಕೋರ್ಟ್, ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರವೇ ಸಭೆ ನಡೆಸಿ, ಮ್ಯೇಜಿಸ್ಟ್ರೇಟ್ ತನಿಖೆಗೆ ಆದೇಶಿಸಿದ್ದಾರೆ. ಯಾವುದೇ ಲೋಪಗಳು ಕಂಡುಬಂದರೆ, ಜವಾಬ್ದಾರರು ಯಾರೇ ಆಗಿದ್ದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಪರಮಶ್ವರ್ ಹೇಳಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Thu, 5 June 25