
ಬೆಂಗಳೂರು, ಆಗಸ್ಟ್ 05: ತಡರಾತ್ರಿ ವೇಳೆ ಕಷ್ಟಪಟ್ಟು ಕೆಲಸ ಮಾಡುವ ಫುಡ್ ಡೆಲಿವರಿ ಬಾಯ್ಗಳನ್ನೇ (Delivery boy) ಗುರಿಯಾಗಿಸಿಕೊಂಡು ದರೋಡೆ ನಡೆಸುತ್ತಿದ್ದ ಜಾಲವೊಂದನ್ನು ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಸುಲಿಗೆ ಕೃತ್ಯದಲ್ಲಿ ತೊಡಗಿದ್ದ ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಂದು ಮೊಬೈಲ್ ಫೋನ್ ಹಾಗೂ ಬರೋಬ್ಬರಿ 1.30 ಲಕ್ಷ ರೂಪಾಯಿ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಜುಲೈ 30ರ ರಾತ್ರಿ ಕಗ್ಗದಾಸಪುರ ಒಂದನೇ ಕ್ರಾಸ್ ಬಳಿ ಈ ಘಟನೆ ನಡೆದಿತ್ತು. ಆಹಾರ ತಲುಪಿಸಲು ತೆರಳುತ್ತಿದ್ದ ಫುಡ್ ಡೆಲಿವರಿ ಸಿಬ್ಬಂದಿಯನ್ನು ನಿರ್ಜನ ಪ್ರದೇಶದಲ್ಲಿ ಹೊಂಚು ಹಾಕಿ ತಡೆದಿದ್ದ ಈ ಆರೋಪಿಗಳು, ಚಾಕು ತೋರಿಸಿ ಬೆದರಿಕೆ ಹಾಕಿದ್ದರು. ಸಂತ್ರಸ್ತ ಡೆಲಿವರಿ ಬಾಯ್ ಬಳಿಯಿದ್ದ ಬೆಲೆಬಾಳುವ ಮೊಬೈಲ್ ಹಾಗೂ ನಗದನ್ನು ಕಸಿದುಕೊಂಡು ಸ್ಥಳದಿಂದ ಪರಾರಿಯಾಗಿದ್ದರು. ಈ ಕುರಿತು ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಬೈಯಪ್ಪನಹಳ್ಳಿ ಪೊಲೀಸರು, ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ಹಾಗೂ ತಾಂತ್ರಿಕ ಮಾಹಿತಿ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ ದೋಚಲಾಗಿದ್ದ ಮೊಬೈಲ್ ಹಾಗೂ ಸುಲಿಗೆ ಮಾಡಿದ್ದ ಹಣವನ್ನು ಜಪ್ತಿ ಮಾಡಲಾಗಿದೆ.
ಬಂಧಿತ ದರೋಡೆಕೋರರು ಕೇವಲ ಈ ಒಂದೇ ಕೃತ್ಯಕ್ಕೆ ಸೀಮಿತವಾಗಿರದೆ, ನಗರದ ವಿವಿಧ ಭಾಗಗಳಲ್ಲಿ ತಡರಾತ್ರಿ ಸಂಚರಿಸುವ ಡೆಲಿವರಿ ಬಾಯ್ಗಳನ್ನು ಗುರಿಯಾಗಿಸಿಕೊಂಡು ಹಲವು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರುವ ದಟ್ಟ ಶಂಕೆ ವ್ಯಕ್ತವಾಗಿದೆ. ರಾತ್ರಿ ವೇಳೆ ಒಂಟಿಯಾಗಿ ಸಿಗುವ ಕೆಲಸಗಾರರನ್ನು ಬೆದರಿಸಿ ಹಣ, ಮೊಬೈಲ್ ಕಸಿಯುವುದು ಇವರ ಕಾಯಕವಾಗಿತ್ತು. ಈ ಹಿನ್ನೆಲೆಯಲ್ಲಿ ಬೈಯಪ್ಪನಹಳ್ಳಿ ಪೊಲೀಸರು ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕಾಯ್ದುಕೊಂಡಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ