ಬೆಂಗಳೂರು ಸೇರಿ ರಾಜ್ಯದಲ್ಲಿ ಮೂರು ಭೀಕರ ರಸ್ತೆ ಅಪಘಾತ: ಆರು ಬಂದಿ ಸಾವು
ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ. ರಾಯಚೂರಿನಲ್ಲಿ ಟ್ಯಾಕ್ಟರ್ ಪಲ್ಟಿಯಾಗಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದು ಇಬ್ಬರು, ಹಾಗೂ ಬೆಂಗಳೂರಿನಲ್ಲಿ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. ಚಾಲಕರ ಅಜಾಗರೂಕತೆಯೇ ಇಂತಹ ಭೀಕರ ಅಪಘಾತಗಳಿಗೆ ಮುಖ್ಯ ಕಾರಣವಾಗಿದೆ.

ಬೆಂಗಳೂರು, ಮಾರ್ಚ್ 29: ರಾಜ್ಯದಲ್ಲಿ ನಡೆದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ (Road Accidents) ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿರುವ ಘಟನೆ ಬೆಳಕಿಗೆ ಬಂದಿದೆ. ರಾಯಚೂರಿನಲ್ಲಿ ಟ್ಯಾಕ್ಟರ್ ಅಪಘಾತದಲ್ಲಿ ಇಬ್ಬರು, ಚಿಕ್ಕಬಳ್ಳಾಪುರದಲ್ಲಿ ಕ್ಯಾಂಟರ್ ಡಿಕ್ಕಿ ಹೊಡೆದು ಇಬ್ಬರು ಹಾಗೂ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಇಬ್ಬರು ಸೇರಿ ಒಟ್ಟೂ ಆರು ಜನ ಸಾವನ್ನಪ್ಪಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಅವಘಡ
ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ನಾಲ್ಕು ಮೈಲ್ ಕ್ಯಾಂಪ್ ಸಮೀಪ ಅಪಘಾತ ನಡೆದಿದೆ. ಜಮೀನಿಗೆ ತಿಪ್ಪೆಗೊಬ್ಬರ ಸಾಗಿಸುತ್ತಿದ್ದ ಟ್ಯಾಕ್ಟರ್ ನಿಯಂತ್ರಣ ತಪ್ಪಿ ಕೆರೆಗೆ ಪಲ್ಟಿಯಾಗಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ವಿರೂಪಾಪುರ ಗ್ರಾಮದ ಸುಕುಮುನಿ (31) ಹಾಗೂ ಅರಳಹಳ್ಳಿ ನಿವಾಸಿ ವಿರೂಪನಗೌಡ (42) ಮೃತ ದುರ್ದೈವಿಗಳು. ಘಟನೆ ಬಗ್ಗೆ ಮಾಹಿತಿ ತಿಳಿದು ಸಿಂಧನೂರು ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ. ಈ ಕುರಿತು ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಗವಾಗಿ ಬಂದ ಕ್ಯಾಂಟರ್ಗೆ ಬೈಕ್ ಡಿಕ್ಕಿ
ಇನ್ನೊಂದು ಭೀಕರ ಅಪಘಾತ ಚಿಕ್ಕಬಳ್ಳಾಪುರ ತಾಲೂಕಿನ ಸಾದಲಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ನಡೆದಿದೆ. ವೇಗವಾಗಿ ಬಂದ ಕ್ಯಾಂಟರ್ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನರಸಿಂಹಪ್ಪ (45) ಮತ್ತು ನಾರಾಯಣಸ್ವಾಮಿ (44) ಮೃತರು. ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ನಿವಾಸಿಗಳಾಗಿದ್ದಾರೆ. ಅಪಘಾತದ ತೀವ್ರತೆಗೆ ಬೈಕ್ ಸಂಪೂರ್ಣ ಜಖಂ ಆಗಿದ್ದು, ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಒನ್ವೇಲಿ ಬಂದ ಕಾರು
ಬೆಂಗಳೂರಿನಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ ಒನ್ವೇ ನಿಯಮ ಉಲ್ಲಂಘಿಸಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ನಗರದ ವಕ್ಫ್ ಬೋರ್ಡ್ ಸಮೀಪ ಕಳೆದ ರಾತ್ರಿ ಈ ಘಟನೆ ಸಂಭವಿಸಿದೆ. ಜುಬೇರ್ ಅಹಮದ್ (42) ಮತ್ತು ಅಬ್ದುಲ್ ಮುನ್ವಿರ್ ಪಾಷಾ (16) ಮೃತರಾಗಿದ್ದಾರೆ. ಕಾರು ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಶಂಕಿಸಲಾಗಿದೆ.
ಇದನ್ನೂ ಓದಿ ‘ನಮಗೆ ಡಿಜಿಪಿನೇ ಮೊಬೈಲ್ ಕೊಟ್ಟಿದ್ದು’: ಜೈಲಲ್ಲೇ ಕೂತು ವಿಡಿಯೋ ಮಾಡಿದ ಕೈದಿಗಳು!
ಮರಕ್ಕೆ ಡಿಕ್ಕಿ ಹೊಡೆದ ಕೆಎಸ್ಆರ್ಟಿಸಿ ಬಸ್
ವಿಜಯನಗರ ಜಿಲ್ಲೆಯ ಹಗರಿಬೊಮ್ಮನ ಹಳ್ಳಿ, ಪಿಂಜಾರ್ ಹೆಗ್ಡಾಳ್ ಬಳಿ ಹೊಸಪೇಟೆ-ಶಿವಮೊಗ್ಗ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ನುಜ್ಜುಗುಜ್ಜಾಗಿದೆ. ಬಸ್ ಹಗರಿಬೊಮ್ಮನಹಳ್ಳಿಯಿಂದ ಹೊಸಪೇಟೆ ಕಡೆ ಹೊರಟಿದ್ದ ಸಮಯದಲ್ಲೇ ಘಟನೆ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆ ಹಗರಿಬೊಮ್ಮನ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪ್ರಯಾಣಿಕರು ಕೂಡ ಸುರಕ್ಷಿತರಾಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
