
ಬೆಂಗಳೂರು, ಸೆಪ್ಟೆಂಬರ್ 12: ರಾಜ್ಯ ರಾಜಕಾರಣದಲ್ಲಿ ಸದ್ಯ ವಂದೇಮಾತರಂ ವಿವಾದ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ಮಧ್ಯೆ ಕದನಕ್ಕೆ ಕಾರಣ ಆಗಿದೆ. ವಂದೇ ಮಾತರಂ ಗೀತೆಯ ಮೊದಲ ಎರಡು ಚರಣ ಮಾತ್ರ ಹಾಡಿದರೆ ಸಾಕು ಅಂತಾ ಸರ್ಕಾರ ಹೊರಡಿಸಿರುವ ಆದೇಶಕ್ಕೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಸರ್ಕಾರದ ಈ ನಿರ್ಧಾರ ವಿರೋಧಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಾದಯಾತ್ರೆಗೆ ಸಜ್ಜಾಗಿದೆ.
ಸರ್ಕಾರದ ಈ ನಿರ್ಧಾರವನ್ನು ಹಿಂಪಡೆಯುವಂತೆ ಒತ್ತಾಯಿಸಿ ಸೆಪ್ಟೆಂಬರ್ 15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲು ಬಿಜೆಪಿ ನಿರ್ಧರಿಸಿದೆ. ಪ್ರತಿಯೊಂದು ಕ್ಷೇತ್ರದಲ್ಲೂ ಅರ್ಧ ಕಿ.ಮೀನಿಂದ ಒಂದು ಕಿ.ಮೀವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅಧಿಕೃತವಾಗಿ ಮನವಿ ಪತ್ರ ಸಲ್ಲಿಸಲಾಗುತ್ತದೆ. ಈ ಮೂಲಕ ಸಚಿವ ಸಂಪುಟದ ಆದೇಶವನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದ ಮೇಲೆ ಬಿಜೆಪಿ ತೀವ್ರ ಒತ್ತಡ ಹೇರಲು ಮುಂದಾಗಿದೆ.
ಇನ್ನು ರಾಜ್ಯದಲ್ಲಿ ವಂದೇ ಮಾತರಂ ಎರಡು ಚರಣ ಮಾತ್ರ ಹಾಡುವ ಸಂಪುಟ ನಿರ್ಧಾರ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮಾತನಾಡಿದ್ದು, ‘ವಂದೇ ಮಾತರಂ ಕೇವಲ ಹಾಡು ಅಲ್ಲ. ಸಿಎಂ ಡಿಕೆ ಶಿವಕುಮಾರ್ ಎರಡೇ ಚರಣ ಹಾಡಬೇಕು ಎಂದು ತೀರ್ಮಾನಿಸಿರುವುದು ದುರ್ದೈವ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ‘ವಂದೇ ಮಾತರಂ’ ಗೀತೆ ಬಗ್ಗೆ ತಮ್ಮ ಪಕ್ಷದ ನಿಲುವು ಸ್ಪಷ್ಟಪಡಿಸಿದ ಸಿಎಂ, ಕೆಪಿಸಿಸಿ ಅಧ್ಯಕ್ಷ
‘ಅಲ್ಪಸಂಖ್ಯಾತರ ಓಲೈಕೆಗೆ ಈ ತೀರ್ಮಾನ ತೆಗೆದುಕೊಂಡಿದ್ದಾರೆ. ಸೆ. 15 ರಿಂದ ಐದು ದಿನಗಳ ಕಾಲ 224 ಕ್ಷೇತ್ರಗಳಲ್ಲಿ ಪಾದಯಾತ್ರೆ ಮೂಲಕ ತಹಶಿಲ್ದಾರ್ ಮತ್ತು ಡಿಸಿಗಳನ್ನು ಭೇಟಿ ಮಾಡಿ ಸರ್ಕಾರದ ನಿರ್ಧಾರ ಹಿಂಪಡೆಯಬೇಕು ಎಂದು ಆಗ್ರಹ ಮಾಡಲಿದ್ದೇವೆ. ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಈ ನಿರ್ಧಾರ ಮಾಡಿದ್ದಾರೆ. ಡಿಕೆ ಶಿವಕುಮಾರ್ ಜಮ್ಮು ಕಾಶ್ಮೀರದ ಸಿಎಂ ಓಮರ್ ಅಬ್ದುಲ್ಲಾ ಅವರಿಂದ ಪಾಠ ಕಲಿಯಬೇಕು ಎಂದು ಬಿವೈ ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.