ತಮಿಳುನಾಡಿನಲ್ಲಿ ಸಿಕ್ತು ಕಿಡ್ನ್ಯಾಪ್ ಆಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಶವ! ಕೊಲೆಗೆ ಕೊಡಲಾಗಿತ್ತಾ 25 ಲಕ್ಷ ಸುಪಾರಿ?
ಅಪಹರಣಗೊಂಡಿದ್ದ ಬೆಂಗಳೂರಿನ ಆನೇಕಲ್ನಲ್ಲಿ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ತಮಿಳುನಾಡಿನ ಡೆಂಕಣಿಕೋಟೆ ಬಳಿ ಶವವಾಗಿ ಪತ್ತೆಯಾಗಿದ್ದಾರೆ. 25 ಲಕ್ಷ ರೂಪಾಯಿ ಸುಪಾರಿ ಕೊಟ್ಟು ಈ ಕೊಲೆ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಗೋಪಾಲ್ ಕುಟುಂಬಸ್ಥರು ನ್ಯಾಯಕ್ಕಾಗಿ ಪ್ರತಿಭಟಿಸಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ತನಿಖೆ ತೀವ್ರಗೊಳಿಸಿದ್ದಾರೆ.

ಬೆಂಗಳೂರು, ಮಾರ್ಚ್ 09: ನಗರದ ಆನೇಕಲ್ನಲ್ಲಿ (Anekal Kidnap and Murder) ಅಪಹರಣಕ್ಕೊಳಗಾಗಿದ್ದ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಹತ್ಯೆಯಾದ ಘಟನೆ ಬೆಳಕಿಗೆ ಬಂದಿದೆ. ನಿನ್ನೆ ಸಂಜೆ ದುಷ್ಕರ್ಮಿಗಳು ಗೋಪಾಲ್ ಅವರ ಕಾರನ್ನು ಅಡ್ಡಗಟ್ಟಿ ಅಪಹರಿಸಿ ಕರೆದೊಯ್ದಿದ್ದರು. ಬಳಿಕ ಅವರನ್ನು ತಮಿಳುನಾಡಿನ ಡೆಂಕಣಿಕೋಟೆ ಸಮೀಪಕ್ಕೆ ಕರೆದೊಯ್ದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವುದು ತಿಳಿದುಬಂದಿದೆ. ಇಂದು ಡೆಂಕಣಿಕೋಟೆ ಬಳಿ ಗೋಪಾಲ್ ಅವರ ಮೃತದೇಹ ಪತ್ತೆಯಾಗಿದೆ.
ನಡೆದಿದ್ದೇನು?
ಈ ಹತ್ಯೆ ಪ್ರಕರಣದಲ್ಲಿ ಮೋಹನ್ ಬಾಬು ಎಂಬ ವ್ಯಕ್ತಿ 25 ಲಕ್ಷ ರೂಪಾಯಿ ಸುಪಾರಿ ನೀಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಸುಪಾರಿ ಪಡೆದ ದುಷ್ಕರ್ಮಿಗಳು ಗೋಪಾಲ್ರನ್ನು ಕಾರಿನಲ್ಲಿ ಕರೆದೊಯ್ದು ಹತ್ಯೆಗೈದಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ತಿಳಿದು ಆಕ್ರೋಶಗೊಂಡ ಗೋಪಾಲ್ ಕುಟುಂಬಸ್ಥರು ಹಾಗೂ ಬಂಧುಗಳು ಆನೇಕಲ್ ಪೊಲೀಸ್ ಠಾಣೆ ಮುಂಭಾಗ ಪ್ರತಿಭಟನೆ ನಡೆಸಿ ನ್ಯಾಯಕ್ಕಾಗಿ ಆಗ್ರಹಿಸಿದರು. ಆರೋಪಿಗಳನ್ನು ತಕ್ಷಣ ಬಂಧಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಇದನ್ನೂ ಓದಿ ಬೆಂಗಳೂರಿನ ರಿಯಲ್ ಎಸ್ಟೇಟ್ ಏಜೆಂಟ್ ಕಿಡ್ನ್ಯಾಪ್! ಪೊಲೀಸರ 7 ವಿಶೇಷ ತಂಡಗಳಿಂದ ಆರೋಪಿಗಳಿಗೆ ಬಲೆ
ಗೋಪಾಲ್ಗಾಗಿ ಹುಡುಕುತ್ತಿದ್ದ ಪೊಲೀಸರ ತಂಡ
ಗೋಪಾಲ್ ರಿಯಲ್ ಎಸ್ಟೇಟ್ ಹಾಗೂ ಹಣಕಾಸು ವ್ಯವಹಾರ ನಡೆಸುತ್ತಿದ್ದರು. ಕರ್ಪೂರು ಗೇಟ್ ಬಳಿ ಗೋಪಾಲ್ ಹಾಗೂ ಸತೀಶ್ ಇದ್ದ ಕಾರಿಗೆ ದುಷ್ಕರ್ಮಿಗಳು ವಾಹನದಿಂದ ಡಿಕ್ಕಿ ಹೊಡೆದು, ನಂತರ ಅವರನ್ನು ಅಪಹರಿಸಲಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದರು. ಕುಟುಂಬಸ್ಥರ ಶಂಕೆಯ ಮೇರೆಗೆ ಜಿಗಣಿ ಪೊಲೀಸರು ಮೋಹನ್ ಬಾಬು, ಹರೀಶ್ ಹಾಗೂ ಕಿರಣ್ ಎಂಬ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಗೋಪಾಲ್ ಪತ್ತೆಗಾಗಿ ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಕುಮಾರ್ ನೇತೃತ್ವದಲ್ಲಿ 9 ಇನ್ಸ್ಪೆಕ್ಟರ್ಗಳೊಂದಿಗೆ 7 ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.