
ಬೆಂಗಳೂರು, ಏಪ್ರಿಲ್ 01: ಪೊಲೀಸ್ ಇಲಾಖೆಗೆ ಸೇರಿದ ಸುಮಾರು 80 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಕಬಳಿಸಲು ಯತ್ನಿಸಿರುವ ಗಂಭೀರ ಆರೋಪ ಬೆಳಕಿಗೆ ಬಂದಿದೆ. ಈ ಸಂಬಂಧ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬೆಸ್ಕಾಂ, ಬಿಬಿಎಂಪಿ ಅಧಿಕಾರಿಗಳು ಹಾಗೂ ಖಾಸಗಿ ವ್ಯಕ್ತಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಹಳೆಯ ಮಲ್ಲೇಶ್ವರಂ ಪೊಲೀಸ್ ಠಾಣೆ ಹಾಗೂ ಪೊಲೀಸ್ ವಸತಿ ಗೃಹಗಳಿರುವ ಈ ಜಾಗಕ್ಕೆ 100 ವರ್ಷಕ್ಕೂ ಹೆಚ್ಚು ಇತಿಹಾಸವಿದೆ. 1913ರ ಮಾಪನ ನಕ್ಷೆಯಲ್ಲಿಯೇ ಈ ಪ್ರದೇಶವನ್ನು ಪೊಲೀಸ್ ವಸತಿಗೃಹ ಎಂದು ಗುರುತಿಸಲಾಗಿದೆ. ಪ್ರಸ್ತುತವೂ ಇಲ್ಲಿ ನಾಲ್ವರು ಇನ್ಸ್ಪೆಕ್ಟರ್ಗಳ ಕುಟುಂಬಗಳು ವಾಸಿಸುತ್ತಿವೆ. ಆದರೆ ಇತ್ತೀಚೆಗೆ ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರ್ ಅವರ ಮನೆಗೆ ಬಂದ ವಿದ್ಯುತ್ ಬಿಲ್ಲಿನಲ್ಲಿ ಮಹಾಲಕ್ಷ್ಮೀ ಎಂಬ ಖಾಸಗಿ ವ್ಯಕ್ತಿಯ ಹೆಸರು ನಮೂದಾಗಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಇದರಿಂದ ಅನುಮಾನಗೊಂಡ ಕುಮಾರ್ ಸಂಬಂಧಪಟ್ಟ ಕಚೇರಿಗೆ ಭೇಟಿ ನೀಡಿ ವಿಚಾರಿಸಿದಾಗ, ಅಕ್ರಮವಾಗಿ ಆಸ್ತಿ ದಾಖಲೆಗಳನ್ನು ಮಹಾಲಕ್ಷ್ಮೀ ಹೆಸರಿಗೆ ವರ್ಗಾವಣೆ ಮಾಡಿರುವುದು ಬಹಿರಂಗವಾಗಿದೆ.
ಇದನ್ನೂ ಓದಿ ಬ್ರ್ಯಾಂಡೆಡ್ ವಾಚ್ ಎಂದು ಕಮ್ಮಿ ಬೆಲೆಗೆ ನಕಲಿ ವಾಚ್ಗಳನ್ನು ಮಾರುತ್ತಿದ್ದ ಐವರ ಬಂಧನ!
ಇದಲ್ಲದೆ, ಬಿಬಿಎಂಪಿ ಮೂಲಕ ಅಕ್ರಮವಾಗಿ ಇ-ಖಾತಾ ಮಾಡಿಸಿರುವುದು ಹಾಗೂ ಕೃಷ್ಣಮೂರ್ತಿ ಎಂಬಾತನಿಗೆ ಮಾರಾಟ ಮಾಡಲು ಒಪ್ಪಂದ ಪತ್ರ (ಅಗ್ರಿಮೆಂಟ್ ಆಫ್ ಸೇಲ್) ಕೂಡ ಮಾಡಿರುವುದು ತನಿಖೆಯಲ್ಲಿ ಪತ್ತೆಯಾಗಿದೆ. ಈ ನಡುವೆ, ಅಧಿಕಾರಿಗಳಿದ್ದರೂ ಜಾಗ ಖಾಲಿ ಮಾಡಿಸುತ್ತೇನೆ ಎಂದು ಮಹಿಳೆ ಕಡೆಯವರು ಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ. ಪ್ರಸ್ತುತ ಲೋಕಾಯುಕ್ತ ಇನ್ಸ್ಪೆಕ್ಟರ್ ಕುಮಾರ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು, ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 11:03 am, Wed, 1 April 26