Karnataka Hijab Row: ಸೋಮವಾರದಿಂದ 9, 10ನೇ ತರಗತಿ ಆರಂಭ; ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ

| Updated By: ganapathi bhat

Updated on: Feb 11, 2022 | 8:35 PM

ಬೀದರ್, ಬಾಗಲಕೋಟೆ, ಉಡುಪಿ, ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಹಿಜಾಬ್, ಕೇಸರಿ ಶಾಲು ವಿಚಾರದಲ್ಲಿ ಗಲಾಟೆಯಾಗಿದ್ದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಭದ್ರತೆ ನೀಡಿ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

Karnataka Hijab Row: ಸೋಮವಾರದಿಂದ 9, 10ನೇ ತರಗತಿ ಆರಂಭ; ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲು ಸೂಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us on

ಬೆಂಗಳೂರು: ಹಿಜಾಬ್ ಹಾಗೂ ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿ ಕರ್ನಾಟಕದ ವಿವಿಧ ಭಾಗಗಳಲ್ಲಿ ಭುಗಿಲೆದ್ದಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ಹಾಗೂ ಅವ್ಯವಸ್ಥೆಯನ್ನು ನಿಗ್ರಹಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾಧಿಕಾರಿಗಳ ಜತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ್ದಾರೆ. ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ಸಭೆಯಲ್ಲಿ ಭಾಗವಹಿಸಿದ್ದಾರೆ. ಸಭೆಯಲ್ಲಿ ಮೊದಲಿಗೆ ಸೂಕ್ಷ್ಮ ಪರಿಸ್ಥಿತಿ ಇರುವ ಜಿಲ್ಲೆಗಳಾದ ಉಡುಪಿ, ಬಾಗಲಕೋಟೆ, ಮೈಸೂರು, ಮಂಡ್ಯ, ಬೀದರ್ ಜಿಲ್ಲೆಗಳಿಂದ ಮಾಹಿತಿ ಪಡೆದಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತೆ ವಹಿಸಿ. ಸೋಮವಾರ ಹೈಸ್ಕೂಲ್ ಬಳಿ ಕಟ್ಟೆಚ್ಚರ ವಹಿಸಿ. ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ, ಸಂಘಟನೆಗಳ ಮೇಲೆ‌ ನಿಗಾ ಇಡಿ. ಇಲಾಖೆಗಳ‌ ನಡುವೆ ಸಮನ್ವಯತೆ ಇರಲಿ ಎಂದು ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸಿಎಂ ಬೊಮ್ಮಾಯಿ ತಾಕೀತು ಹಾಕಿದ್ದಾರೆ. ಬೀದರ್, ಬಾಗಲಕೋಟೆ, ಉಡುಪಿ, ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದು, ಹಿಜಾಬ್, ಕೇಸರಿ ಶಾಲು ವಿಚಾರದಲ್ಲಿ ಗಲಾಟೆಯಾಗಿದ್ದ ಜಿಲ್ಲೆಗಳಲ್ಲಿ ಶಾಲೆಗಳಿಗೆ ಹೆಚ್ಚುವರಿ ಭದ್ರತೆ ನೀಡಿ ಎಂದು ಹೇಳಿದ್ದಾರೆ.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಕಾನ್ಫರೆನ್ಸ್​ನಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ, ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಸಿಎಸ್​ ಪಿ ರವಿಕುಮಾರ್, ಡಿಜಿ & ಐಜಿಪಿ ಪ್ರವೀಣ್​ ಸೂದ್, ಗೃಹ ಇಲಾಖೆ ಎಸಿಎಸ್ ರಜನೀಶ್ ಗೋಯಲ್, ಶಿಕ್ಷಣ ಇಲಾಖೆ ಕಾರ್ಯದರ್ಶಿ ಸೆಲ್ವಕುಮಾರ್​​, ಡಿಸಿ, ಎಸ್​ಪಿ, ಶಿಕ್ಷಣ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ.

ಸೋಮವಾರದಿಂದ 9, 10ನೇ ತರಗತಿಗಳು ಮತ್ತೆ ಆರಂಭವಾಗಲಿದೆ. ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಕ್ರಮಕೈಗೊಳ್ಳಬೇಕು. ಡಿಸಿ, ಎಸ್​ಪಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಶಾಲೆಗಳ ಸುತ್ತಮುತ್ತ ಪೊಲೀಸ್ ಭದ್ರತೆ ನೀಡುವಂತೆ ಸೂಚನೆ ಕೊಡಲಾಗಿದೆ. ಎಲ್ಲಾ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಆ ಬಗ್ಗೆ ರಾಜ್ಯ ಸರ್ಕಾರಕ್ಕೆ ಮಾಹಿತಿ ನೀಡುವಂತೆಯೂ ಡಿಸಿ, ಎಸ್​ಪಿ, ಸಿಇಒ, ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಬಳಿಕ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ವಿಡಿಯೋ ಕಾನ್ಫರೆನ್ಸ್​ ವೇಳೆ ಈ ಕುರಿತಾಗಿ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾವಹಿಸುವಂತೆ ಹೇಳಲಾಗಿದೆ. ವದಂತಿ ಹರಡುವವರ ಬಗ್ಗೆ ನಿಗಾವಹಿಸಲು ಸಿಎಂ ಸೂಚಿಸಿದ್ದಾರೆ. ಕೆಲವು ಮಕ್ಕಳು, ಪೋಷಕರು ಸಂಘಟನೆಗಳ ಜೊತೆ ಸಂಪರ್ಕ ಹೊಂದಿದ್ದಾರೆ. ಮತೀಯ ಸಂಘಟನೆಗಳ ಜತೆ ಸಂಪರ್ಕದಲ್ಲಿರುವ ಬಗ್ಗೆ ಮಾಹಿತಿ ಲಭ್ಯವಿದೆ. ಈ ಬಗ್ಗೆ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಗೃಹಸಚಿವರು ತಿಳಿಸಿದ್ದಾರೆ.

ಫೆ. 14 ರಿಂದ ರಾಜ್ಯಾದ್ಯಂತ 9, 10ನೇ ತರಗತಿ ಪುನಾರಂಭ; ಮುಂದಿನ ದಿನಗಳಲ್ಲಿ ಕಾಲೇಜುಗಳ ಆರಂಭಕ್ಕೆ ಒತ್ತು

ರಾಜ್ಯದ ಎಲ್ಲಾ ಡಿಸಿ, ಎಸ್​ಪಿ, ಸಿಇಒ ಜತೆ ಸಿಎಂ ಚರ್ಚಿಸಿದ್ದಾರೆ. ಫೆಬ್ರವರಿ 14 ರಿಂದ ರಾಜ್ಯಾದ್ಯಂತ 9, 10ನೇ ತರಗತಿಗಳು ಪುನಾರಂಭ ಆಗಲಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಕ್ಕೆ ಸೂಚನೆ ಕೊಡಲಾಗಿದೆ. ಸೂಕ್ಷ್ಮ ಜಿಲ್ಲೆಗಳಲ್ಲಿ ಡಿಸಿ, ಎಸ್​ಪಿ ಶಾಲೆಗಳಿಗೆ ಭೇಟಿ ನೀಡಬೇಕು. ಶಾಲೆಗಳ ಪ್ರಾಂಶುಪಾಲರು, ಪೋಷಕರ ಜತೆ ಡಿಡಿಪಿಐ ಸಂಪರ್ಕ ಹೊಂದಿರಬೇಕು. ಶಾಂತಿ ಸಭೆ ನಡೆಸಿ ಹೈಕೋರ್ಟ್ ಆದೇಶ ಪಾಲನೆಗೆ ತಿಳಿಸಬೇಕು. ಯಾವುದೇ ಒತ್ತಡಕ್ಕೆ ಸ್ಥಳೀಯ ಆಡಳಿತ ಮಣಿಯಬಾರದು ಎಂದು ಹೇಳಿದ್ದಾರೆ.

ಆದ್ಯತೆ ಮೇರೆಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಸೂಚನೆ ಕೊಡಲಾಗಿದೆ. ಹೊರಗಿನ ಪ್ರಚೋದನೆಗೆ ಒಳಗಾಗದಂತೆ ಕ್ರಮಕೈಗೊಳ್ಳುವುದು. ಧಾರ್ಮಿಕ ಮುಖಂಡರ ಜತೆ ಶಾಂತಿ ಸಭೆ ನಡೆಸುವುದು. ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಂತೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕಾಲೇಜುಗಳ ಆರಂಭಕ್ಕೆ ಒತ್ತು ನೀಡುತ್ತೇವೆ. ಪರಿಸ್ಥಿತಿ ಗಮನಿಸಿ ಒಂದೆರಡು ದಿನಗಳಲ್ಲಿ ನಿರ್ಧಾರ ತಿಳಿಸುತ್ತೇವೆ ಎಂದು ಸಿಎಂ ಜತೆ ಸಭೆ ನಂತರ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಇದನ್ನೂ ಓದಿ: ಹಿಜಾಬ್- ಕೇಸರಿ ಶಾಲು ವಿವಾದ ಹಿನ್ನೆಲೆ; ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸರ ಪಥಸಂಚಲನ

ಇದನ್ನೂ ಓದಿ: ವಿಧಾನಸಭಾ ಚುನಾವಣೆ ಗಮನದಲ್ಲಿರಿಸಿ ಹಿಜಾಬ್ ವಿವಾದ ಸೃಷ್ಟಿಸಲಾಗಿದೆ: ಎಸ್​ಡಿಪಿಐನ ಅತಾವುಲ್ಲಾ ಜೋಕಟ್ಟೆ ಹೇಳಿಕೆ

Published On - 8:25 pm, Fri, 11 February 22