ಒತ್ತುವರಿ ತೆರವು ಕಾರ್ಯಾಚರಣೆ ಮುಂದುವರಿಸಿದ ಬಿಡಿಎ: 25 ಕೋಟಿ ರೂ. ಮೌಲ್ಯದ ಆಸ್ತಿ ಮರುವಶ
Anti-encroachment drive in Bangalore: ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರ ನಿರ್ದೇಶನದಂತೆ ಪ್ರಾಧಿಕಾರದ ಆರಕ್ಷಕ ಅಧೀಕ್ಷಕರಾದ ಕೆ ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳನ್ನೊಳಗೊಂಡಂತೆ ತಾವರೆಕೆರೆಯ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.

ಬೆಂಗಳೂರು, ಅಕ್ಟೋಬರ್ 17: ಒತ್ತುವರಿ ತೆರವು ಕಾರ್ಯಾಚರಣೆಯನ್ನು (Anti-encroachment drive) ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಮುಂದುವರಿಸಿದ್ದು, ಮಂಗಳವಾರ ಬೆಳ್ಳಂಬೆಳಗ್ಗೆಯೇ ಕಾರ್ಯಾಚರಣೆ ನಡೆಸಲಾಗಿದೆ. ಕೆಂಪೇಗೌಡ ಬಡಾವಣೆಯಲ್ಲಿ (Kempegowda Layout) ಸುಮಾರು 25 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಬಿಡಿಎ ಮರು ವಶಪಡಿಸಿಕೊಂಡಿದೆ. ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಅನಧಿಕೃತವಾಗಿ ತಲೆ ಎತ್ತಿದ್ದ ನಿರ್ಮಾಣಗಳನ್ನು ತೆರವುಗೊಳಿಸಿ ಪ್ರಾಧಿಕಾರದ ಆಸ್ತಿಯನ್ನು ಮರುವಶ ಮಾಡಿಕೊಳ್ಳಲಾಗಿದೆ.
ಕೊಡಿಗೇಹಳ್ಳಿ ಗ್ರಾಮದ ಸರ್ವೆ ನಂ. 108ರಲ್ಲಿನ 5 ಎಕರೆ ಪ್ರದೇಶವನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಭೂಸ್ವಾಧೀನಪಡಿಸಿಕೊಂಡಿದ್ದು, ಈ ಪ್ರದೇಶದ ಪೈಕಿ 3 ಎಕರೆ 35 ಗುಂಟೆಯಲ್ಲಿ ರೆವಿನ್ಯೂ ನಿವೇಶನಗಳನ್ನು ರಚಿಸಲಾಗುತ್ತಿತ್ತು. ಇದಕ್ಕೆ ಸಂಬಂಧಪಟ್ಟಂತೆ ಅನೇಕ ಬಾರಿ ನೋಟೀಸ್ಗಳನ್ನು ನೀಡಿದ್ದರೂ ಸಹ ಅನಧಿಕೃತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುತ್ತಿತ್ತು. ಮಂಗಳವಾರ ಬೆಳಿಗ್ಗೆ 3 ಎಕರೆ 35 ಗುಂಟೆ ಪ್ರದೇಶದಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡಿದ್ದ 7 ಶೆಡ್ ಹಾಗೂ 3 ಕಾಂಕ್ರೀಟ್ ಕಟ್ಟಡವನ್ನು ತೆರವುಗೊಳಿಸಿ, ಪ್ರಾಧಿಕಾರವು ಸುಮಾರು 25 ಕೋಟಿ ರೂ. ಮೌಲ್ಯದ ಆಸ್ತಿಯನ್ನು ತನ್ನ ವಶಕ್ಕೆ ತೆಗೆದುಕೊಂಡಿತು. ಅಲ್ಲದೇ ಅಕ್ರಮ ಎಸಗಿದವರ ವಿರುದ್ಧ ಭೂಕಬಳಿಕೆ ಕೇಸನ್ನು ಸಹ ದಾಖಲಿಸಲಾಗಿದೆ.
ಈ ಕಾರ್ಯಾಚರಣೆಯನ್ನು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಆಯುಕ್ತರ ನಿರ್ದೇಶನದಂತೆ ಪ್ರಾಧಿಕಾರದ ಆರಕ್ಷಕ ಅಧೀಕ್ಷಕರಾದ ಕೆ ನಂಜುಂಡೇಗೌಡ ಅವರ ನೇತೃತ್ವದಲ್ಲಿ ಪಶ್ಚಿಮ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಶೋಕ್, ಸಹಾಯಕ ಕಾರ್ಯಪಾಲಕ ಅಭಿಯಂತರರುಗಳನ್ನೊಳಗೊಂಡಂತೆ ತಾವರೆಕೆರೆಯ ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ನೆರವೇರಿಸಲಾಯಿತು.
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಒತ್ತುವರಿ ಮಾಡಲಾಗಿದ್ದ ಸುಮಾರು 5 ಎಕರೆ ಪ್ರದೇಶವನ್ನು ಕೆಲವು ದಿನಗಳ ಹಿಂದಷ್ಟೇ ಬಿಡಿಎ ತೆರವುಗೊಳಿಸಿತ್ತು. ಬೆಂಗಳೂರು ದಕ್ಷಿಣ ತಾಲೂಕು, ಕೆಂಗೇರಿ ಹೋಬಳಿ, ಚಲ್ಲಘಟ್ಟ ಗ್ರಾಮದ ಸರ್ವೆ ನಂ. 4 ಮತ್ತು 8 ಅನ್ನು ನಾಡಪ್ರಭು ಕೆಂಪೇಗೌಡ ಬಡಾವಣೆಗೆ ಹಾಗೂ ಉದ್ದೇಶಿತ ಎಂಎಆರ್ಗೆ ಭೂಸ್ವಾಧೀನಪಡಿಸಿಕೊಳ್ಳಲಾಗಿತ್ತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ