ಹೆಬ್ಬಾಳ ಜಂಕ್ಷನ್ನಲ್ಲಿ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲು ಮುಂದಾದ ಬಿಡಿಎ: ಟ್ವಿನ್ ಟನಲ್ ಯೋಜನೆಗೆ ಚಾಲನೆ
ಬೆಂಗಳೂರಿನ ಹೆಬ್ಬಾಳ ಜಂಕ್ಷನ್ನಲ್ಲಿ ಪ್ರತಿದಿನ ಎದುರಾಗುವ ಭಾರಿ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. 1,130 ಕೋಟಿ ರೂ. ವೆಚ್ಚದಲ್ಲಿ 2.2 ಕಿ.ಮೀ ಉದ್ದದ ಟ್ವಿನ್ ಟನಲ್ ನಿರ್ಮಾಣಕ್ಕೆ ಮುಂದಾಗಿದ್ದು, ಕಾಮಗಾರಿಗಳಿಗೆ ಪ್ರಾಥಮಿಕ ಚಾಲನೆ ಸಿಕ್ಕಿದೆ.

ಬೆಂಗಳೂರು, ಆಗಸ್ಟ್ 04: ಬೆಂಗಳೂರಿನ (Bangaluru) ಹೆಬ್ಬಾಳ ಜಂಕ್ಷನ್ನಲ್ಲಿ ಪ್ರತಿದಿನ ಎದುರಾಗುವ ಸಂಚಾರ ದಟ್ಟಣೆಗೆ ಮುಕ್ತಿ ನೀಡಲು ಬಿಡಿಎ (BDA) ಮಹತ್ವದ ಯೋಜನೆಗೆ ಚಾಲನೆ ನೀಡಿದೆ. ಹೆಬ್ಬಾಳ ಜಂಕ್ಷನ್ನಿಂದ ಕೆವಿಎಎಫ್ಎಸ್ಯು ಕ್ಯಾಂಪಸ್ವರೆಗೆ ನಿರ್ಮಿಸಲು ಉದ್ದೇಶಿಸಿರುವ ಟ್ವಿನ್ ಟನಲ್ ಸುರಂಗ ಮಾರ್ಗದ ಕಾಮಗಾರಿಗಳಿಗೆ ಪ್ರಾಥಮಿಕ ಚಾಲನೆ ಸಿಕ್ಕಿದೆ. ಮುಂದಿನ 2 ವರ್ಷದಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿಯನ್ನು ಬಿಡಿಎ ಹೊಂದಿದೆ.
2.2 ಕಿ.ಮೀ ಉದ್ದ: 1,130 ಕೋಟಿ ರೂ ಅಧಿಕ ವೆಚ್ಚ
ಸಿಲಿಕಾನ್ ಸಿಟಿ ಬೆಂಗಳೂರಿನ ಸಂಚಾರ ದಟ್ಟಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹಾಗೂ ಬಿಡಿಎ ಇಂದು ಹೆಬ್ಬಾಳ ಸುರಂಗ ಮಾರ್ಗ ಯೋಜನೆಗೆ ಚಾಲನೆ ನೀಡಿವೆ. ಹೆಬ್ಬಾಳ ಜಂಕ್ಷನ್ನಿಂದ ಕರ್ನಾಟಕ ಪಶು, ಪಶುವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವರೆಗೆ ಒಟ್ಟು 2.2 ಕಿ.ಮೀ ಉದ್ದದ 3 ಪಥಗಳ ಜೋಡಿ ಸುರಂಗ ಮಾರ್ಗವನ್ನು ನಿರ್ಮಿಸಲಾಗುತ್ತಿದೆ.
ಕಟ್ ಆ್ಯಂಡ್ ಕವರ್ ಮಾದರಿಯಲ್ಲಿ ನಡೆಯಲಿರುವ ಈ ಯೋಜನೆಗೆ ಬರೋಬ್ಬರಿ 1,130 ಕೋಟಿ ರೂ ಅಧಿಕ ವೆಚ್ಚ ಅಂದಾಜಿಸಲಾಗಿದ್ದು, ಹೈದರಾಬಾದ್ ಮೂಲದ ರಿಷಿಕ್ ಪ್ರಾಜೆಕ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಗುತ್ತಿಗೆ ನೀಡಲಾಗಿದೆ.
ಯೋಜನೆಗೆ ಸಾರ್ವಜನಿಕರ ತೀವ್ರ ವಿರೋಧ
ಇನ್ನು ಈ ಯೋಜನೆಗೆ ಸಾರ್ವಜನಿಕರ ತೀವ್ರ ವಿರೋಧವೂ ವ್ಯಕ್ತವಾಗುತ್ತಿದೆ. ಇದು ಅನಗತ್ಯ ಹಾಗೂ ಅತ್ಯಂತ ದುಬಾರಿ ಯೋಜನೆಯಾಗಿದ್ದು, ಬೆಂಗಳೂರಿನ ಸಂಚಾರ ಸಮಸ್ಯೆಗೆ ಇದು ದೀರ್ಘಕಾಲೀನ ಪರಿಹಾರವಲ್ಲ ಎಂದಿದ್ದಾರೆ. ಆದರೆ ಸಂಚಾರ ತಜ್ಞರು ಮತ್ತು ಪೊಲೀಸರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದ ಬಳಿಕವೇ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದು ಸರ್ಕಾರ ಸಮರ್ಥನೆ ನೀಡಿದೆ.
ಇದನ್ನೂ ಓದಿ: Safe Footpath Campaign: 750 ಕಿ.ಮೀ ಪಾದಚಾರಿ ಮಾರ್ಗ ಅತಿಕ್ರಮಣ ತೆರವು; ಪೀಣ್ಯ ಫ್ಲೈಓವರ್ನಲ್ಲಿ ರಾತ್ರಿ ಸಂಚಾರ ನಿಷೇಧ!
ಬೃಹತ್ ಸುರಂಗ ಮಾರ್ಗ ಯೋಜನೆಯು ಹೆಬ್ಬಾಳ ಜಂಕ್ಷನ್ನ ಟ್ರಾಫಿಕ್ ಸಮಸ್ಯೆಗೆ ಮುಕ್ತಿ ನೀಡಲಿದೆ ಎಂಬ ಭರವಸೆಯನ್ನು ಸರ್ಕಾರ ನೀಡಿದೆ. ಆದರೆ ದುಬಾರಿ ವೆಚ್ಚದ ಕುರಿತು ಟೀಕೆಗಳು ವ್ಯಕ್ತವಾಗುತ್ತಿವೆ. ಬಿಡಿಎ ನಿಗದಿಪಡಿಸಿದಂತೆ ಮುಂದಿನ 2 ವರ್ಷಗಳಲ್ಲಿ ಈ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರಿಗೆ ಲಭ್ಯವಾಗಲಿದೆಯೇ ಎಂಬುದನ್ನು ಕಾದು ನೋಡಬೇಕಿದೆ.
ವರದಿ: ಅರುಣ್ ಕುಮಾರ್ ಟಿವಿ9 ಬೆಂಗಳೂರು.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.




