Bengaluru auto price: ಬೆಂಗಳೂರು ಜನರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ: ಆಟೋ ಪ್ರಯಾಣದ ದರ ಹೆಚ್ಚಳ!
ಬೆಂಗಳೂರು ಆಟೋ ದರ ಏರಿಕೆ: ದುಬಾರಿ ದುನಿಯಾದಲ್ಲಿ ಬೆಂಗಳೂರಿಗರಿಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದೆ. ಆಟೋ ಪ್ರಯಾಣ ದರ ಏರಿಕೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಕಾಯುವಿಕೆ ಮತ್ತು ಲಗೇಜ್ ದರ ಕೂಡ ನಿಗದಿಪಡಿಸಲಾಗಿದೆ. ಈ ದರ ಏರಿಕೆಗೆ ಆಟೋ ಚಾಲಕರ ಅಹವಾಲು ಮುಖ್ಯ ಕಾರಣವಾಗಿದೆ.

ಬೆಂಗಳೂರು, ಜುಲೈ 14: ನಮ್ಮೆ ಮೆಟ್ರೋ (Namma Metro) ರೈಲು ಟಿಕೆಟ್ ದರ ಏರಿಕೆ ಬೆನ್ನಲ್ಲೇ ಬೆಂಗಳೂರಿನ ಜನರಿಗೆ ಮತ್ತೊಂದು ದರ ಏರಿಕೆಯ ಬಿಸಿ ತಟ್ಟಿದೆ. ಬೆಂಗಳೂರಿನಲ್ಲಿ ಆಟೋ (Auto) ಪ್ರಯಾಣ ದರ ಹೆಚ್ಚಿಸಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ (Bengaluru) ಸದ್ಯ ಎರಡು ಕಿಮೀ ಪ್ರಯಾಣಕ್ಕೆ ಆಟೋ ಮೀಟರ್ ದರ ಕನಿಷ್ಠ 30 ರೂಪಾಯಿ ಇದೆ. ಇದೀಗ ಆ ದರವನ್ನು ಎರಡು ಕಿಮೀಗೆ 36 ರುಪಾಯಿಗೆ ಏರಿಕೆ (Auto Fare Hike) ಮಾಡಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ನೂತನ ದರ ಆಗಸ್ಟ್ 1 ರಿಂದ ಜಾರಿಗೆ ಬರಲಿದೆ.
ಎಷ್ಟು ಏರಿಕೆ?
- ಬೆಂಗಳೂರಿನಲ್ಲಿ ಕನಿಷ್ಠ ಎರಡು ಕಿಮೀ ಆಟೋ ಪ್ರಯಾಣ ದರ 30 ರೂ.ನಿಂದ 36ರೂ.ಗೆ ಹೆಚ್ಚಳವಾಗಿದೆ. ಈ ಮೂಲಕ 6 ರೂ. ಹೆಚ್ಚಿಸಲಾಗಿದೆ. ಕನಿಷ್ಠ ಪ್ರಯಾಣ ದರ ಬಳಿಕ ಪ್ರತಿ ಕಿಮೀ.ಗೆ 15 ರೂ.ನಿಂದ 18 ರೂ.ಗೆ ಏರಿಕೆ ಮಾಡಲಾಗಿದೆ.
- ಕಾಯುವಿಕೆ ದರ ಮೊದಲ ಐದು ನಿಮಿಷ ಉಚಿತವಾಗಿದೆ. ಮೊದಲ ಐದು ನಿಮಿಷದ ನಂತರ ಪ್ರತಿ 15 ನಿಮಿಷ ಅಥವಾ ಅದರ ಭಾಗಕ್ಕೆ 10 ರೂ. ನಿಗದಿ ಮಾಡಲಾಗಿದೆ.
- ಪ್ರಯಾಣಿಕರ ಲಗೇಜು ದರ ಮೊದಲ 20 ಕೆ.ಜಿ.ಗೆ ಉಚಿತವಾಗಿರಲಿದೆ. ಮೊದಲ 20ಕೆ.ಜಿ.ಯಿಂದ ನಂತರ ಪ್ರತಿ 20 ಕೆ.ಜಿ.ಗೆ ಅಥವಾ ಅದರ ಭಾಗಕ್ಕೆ 10 ರೂ. ನಿಗದಿ ಮಾಡಲಾಗಿದೆ. ಗರಿಷ್ಠ ಪ್ರಯಾಣಿಕರ ಲಗೇಜುಗಳು 50 ಕೆ.ಜಿ.ಗೆ ಸೀಮಿತಗೊಳಿಸಲಾಗಿದೆ.
- ರಾತ್ರಿ ವೇಳೆ ಸಾಮಾನ್ಯ ದರ+ಸಾಮಾನ್ಯ ದರದ ಅರ್ಧಪಟ್ಟು ಹೆಚ್ಚು ಪಡೆಯಬಹುದು. ಇದು ರಾತ್ರಿ 10 ಗಂಟೆಯಿಂದ ನಸುಕಿನ ಜಾವ 5 ಗಂಟೆಯವರೆಗೆ ಮಾತ್ರ ಅನ್ವಯವಾಗುತ್ತದೆ.
ಆಟೋ ದರ ಏರಿಕೆ ಸಂಬಂಧ ಮೊದಲು ಮಾರ್ಚ್ ತಿಂಗಳಲ್ಲಿ ಸಭೆ ನಡೆದಿತ್ತು. ಸಭೆಯಲ್ಲಿ ಹಲವು ಆಟೋ ಸಂಘಟನೆಗಳು ಭಾಗಿಯಾಗಿದ್ದವು. ಆಟೋ ದರ ಪರಿಷ್ಕರಣೆ ಸಮಿತಿಯು ಆಟೋ ಚಾಲಕರ ಅಹವಾಲು ಕೇಳಿತ್ತು. ಅಲ್ಲದೆ ಸಭೆಯ ನಿರ್ಣಯವನ್ನು ಜಿಲ್ಲಾಧಿಕಾರಿಗಳಿಗೆ ಒಪ್ಪಿಸಿತ್ತು. ವರದಿ ಪರಿಶೀಲಿಸಿದ ಜಿಲ್ಲಾಧಿಕಾರಿಗಳು ದರ ಏರಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ.
ಇದನ್ನೂ ಓದಿ: ಆಟೋ ಪ್ರಯಾಣ ದರ ಏರಿಕೆಗೂ ಮುನ್ನವೇ ಪ್ರಯಾಣಿಕರಿಗೆ ಸಂಕಷ್ಟ: ಅಗ್ರಿಗೇಟರ್ ಕಂಪನಿಗಳ ದುಪ್ಪಟ್ಟು ದರ ವಸೂಲಿ
ಸರ್ಕಾರ ಸೂಚಿಸಿದ ದರವನ್ನು ಮಾತ್ರ ಪ್ರಯಾಣಿಕರಿಂದ ತೆಗೆದುಕೊಳ್ಳಬೇಕೆಂದು ಆದೇಶ ಇದೆ. ಅದನ್ನು ಮೀರಿ ಪ್ರಯಾಣಿಕರಿಂದ ಹೆಚ್ಚಿನ ದರವನ್ನು ಪಡೆದುಕೊಂಡರೆ ಅಂತಹ ಕಂಪನಿಗಳ ವಿರುದ್ಧ ಮೊದಲು ನೋಟಿಸ್ ನೀಡಲಾಗುತ್ತದೆ. ನಂತರ ಕಠಿಣವಾದ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಆರ್ಟಿಒ ಅಧಿಕಾರಿಗಳು ಎಚ್ಚರಿಕೆ ನೀಡಿದ್ದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:39 pm, Mon, 14 July 25



