ವಿಂಗ್ ಕಮಾಂಡರ್ ಹಲ್ಲೆ ಪ್ರಕರಣ: ಪೊಲೀಸ್ ಕಮಿಷನರ್ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ
ಬೆಂಗಳೂರಿನ ಸಿವಿ ರಾಮನ್ ನಗರದ ಗೋಪಾಲನ್ ಗ್ರ್ಯಾಂಡ್ ಮಾಲ್ ಬಳಿ ವಿಂಗ್ ಕಮಾಂಡರ್ ಶಿಲಾದಿತ್ಯ ಹಾಗೂ ಟೆಕ್ಕಿ ವಿಕಾಸ್ ಕುಮಾರ್ ನಡುವೆ ನಡೆದ ಹೊಡೆದಾಟ ಹಾಗೂ ನಂತರದ ಬೆಳವಣಿಗೆಗಳ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಸಣ್ಣತನ ಕನ್ನಡಿಗರದ್ದಲ್ಲ ಎಂದಿರುವ ಅವರು, ಘಟನೆ ಬಗ್ಗೆ ಕೂಲಂಕಷ ತನಿಖೆ ನಡೆಸಿ ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

ಬೆಂಗಳೂರು, ಏಪ್ರಿಲ್ 22: ಏರ್ಫೋರ್ಸ್ ಅಧಿಕಾರಿ, ವಿಂಗ್ ಕಮಾಂಡರ್ (Wing Commander) ಶಿಲಾದಿತ್ಯ ಹಾಗೂ ಟೆಕ್ಕಿ ವಿಕಾಸ್ ಕುಮಾರ್ (Vikas Kumar) ನಡುವಣ ಬೆಂಗಳೂರಿನ ರಸ್ತೆ ಜಗಳ ಇದೀಗ ದೇಶಮಟ್ಟದಲ್ಲಿ ಸದ್ದು ಮಾಡಲಾರಂಭಿಸಿದೆ. ಒಂದು ಕಡೆ, ಭಾಷೆಯ ವಿಚಾರಕ್ಕೆ ತಮ್ಮ ಮೇಲೆ ಹಲ್ಲೆ ನಡೆದಿದೆ ಎಂದು ಶಿಲಾದಿತ್ಯ ಹೇಳಿಕೊಂಡಿದ್ದರೆ, ಮತ್ತೊಂದೆಡೆ ಅವರ ವಿರುದ್ಧವೇ ಕೊಲೆ ಯತ್ನ ಪ್ರಕರಣವೂ ದಾಖಲಾಗಿದೆ. ವಿಕಾಸ್ ಕುಮಾರ್ ಬಂಧವೂ ಆಗಿದೆ. ಇಷ್ಟೆಲ್ಲ ಆಗುತ್ತಿದ್ದಂತೆಯೇ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಿರುವ ಸಿಎಂ ಸಿದ್ದರಾಮಯ್ಯ (Siddramaiah), ಘಟನೆ ಸಂಬಂಧ ಸಂಪೂರ್ಣ ಪರಿಶೀಲನೆ ನಡೆಸಿ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರಿಗೆ ಸೂಚನೆ ನೀಡಿದ್ದಾರೆ.
ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ ಬಗ್ಗೆ ಅಭಿಮಾನ ಹೊಂದಿರುವವರೇ ಹೊರತು ದುರಭಿಮಾನಿಗಳಲ್ಲ. ಭಾಷೆಯ ವಿಚಾರಕ್ಕೆ ವಿನಾಕರಣ ಇತರರ ಮೇಲೆ ಹಲ್ಲೆ ಮಾಡುವ ಅಥವಾ ನಿಂದಿಸುವ ಸಣ್ಣತನ ಕನ್ನಡಿಗರದ್ದಲ್ಲ ಎಂದು ಉಲ್ಲೇಖಿಸಿದ್ದಾರೆ.
ದೇಶದ ಮೂಲೆ ಮೂಲೆಗಳಿಂದ ಬಂದು ಇಲ್ಲಿ ನೆಲೆಸಿರುವ ಪ್ರತಿಯೊಬ್ಬರನ್ನು ಗೌರವದಿಂದ ಕಾಣುತ್ತಿರುವ, ಅವರನ್ನೂ ಕನ್ನಡಿಗರೇ ಎಂದು ಪ್ರೀತಿಸುವ ಸಂಸ್ಕೃತಿ ಕನ್ನಡ ಮಣ್ಣಿನದ್ದು. ಇದಕ್ಕೆ ಇತಿಹಾಸ ಸಾಕ್ಷಿ. ರಾಷ್ಟ್ರೀಯ ಮಾಧ್ಯಮಗಳು ತಮ್ಮ ಜವಾಬ್ದಾರಿ ಮತ್ತು ವೃತ್ತಿಧರ್ಮ ಮರೆತು ಯಾರೋ ಒಬ್ಬ ಮಾಡಿದ ಆಧಾರ ರಹಿತ ಆರೋಪವನ್ನು ಹಿಡಿದುಕೊಂಡು ಇಡೀ ಕರ್ನಾಟಕದ ಘನತೆಗೆ ಮಸಿಬಳಿಯುವ ಕೆಲಸವನ್ನು ಮಾಡಿದ್ದು ನಿಜಕ್ಕೂ ವಿಷಾದನೀಯ. ಇದರಿಂದ ಪ್ರತಿಯೊಬ್ಬ ಕನ್ನಡಿಗನ ಮನಸಿಗೆ ಘಾಸಿಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಎಕ್ಸ್ ಸಂದೇಶ
ಬೆಂಗಳೂರಿನ ಸಿವಿ ರಾಮನ್ ನಗರದಲ್ಲಿ ವಾಹನ ಟಚ್ ಆದ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡಿಗ ವಿಕಾಸ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿರುವ ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್, ನಂತರ ಜಾಲತಾಣದಲ್ಲಿ ಕರ್ನಾಟಕ ಮತ್ತು ಕನ್ನಡಿಗರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡಿ ಕನ್ನಡಿಗರ ಸ್ವಾಭಿಮಾನ ಕೆಣಕುವ ದುಷ್ಟತನ ಮೆರೆದಿದ್ದಾರೆ. ಕನ್ನಡಿಗರು ಮಾತೃ ಭಾಷೆಯ…
— Siddaramaiah (@siddaramaiah) April 22, 2025
ಕನ್ನಡಿಗರು ಉದ್ವೇಗ ಅಥವಾ ಪ್ರಚೋದನೆಗಳಿಗೆ ಒಳಗಾಗಿ ಕಾನೂನು ಕೈಗೆತ್ತಿಕೊಳ್ಳುವ ಕೆಲಸ ಮಾಡಬಾರದು. ಕನ್ನಡಿಗರಿಂದ ಆಯ್ಕೆಯಾದ ಕನ್ನಡದ್ದೆ ಸರ್ಕಾರ ಕರ್ನಾಟಕದಲ್ಲಿದೆ ಎಂದು ಅವರು ಕನ್ನಡಿಗರಿಗೆ ಅಭಯ ನೀಡಿದ್ದಾರೆ.
ಇದನ್ನೂ ಓದಿ: ಬೆಂಗಳೂರು ರೋಡ್ರೇಜ್, ಹಲ್ಲೆ ಪ್ರಕರಣ: ವಿಂಗ್ ಕಮಾಂಡರ್ ಶಿಲಾದಿತ್ಯ ಬೋಸ್ ವಿರುದ್ಧ ಕೊಲೆ ಯತ್ನ ಕೇಸ್ ದಾಖಲು
ನಿನ್ನೆಯ ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರು ಯಾರೇ ಆಗಿರಲಿ, ಯಾವ ಹುದ್ದೆಯಲ್ಲೇ ಇರಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಪೊಲೀಸ್ ಕಮಿಷನರ್ ಅವರಿಗೆ ಆದೇಶಿಸಿದ್ದೇನೆ. ಪ್ರಕರಣವನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು, ಅನ್ಯಾಯಕ್ಕೊಳಗಾದ ವ್ಯಕ್ತಿಗೆ ನ್ಯಾಯ ಕೊಡಿಸಲು ಬದ್ಧವಾಗಿದೆ ಎಂದು ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.