ಬೆಂಗಳೂರಿನಲ್ಲಿ ನಿಗೂಢ ಸ್ಫೋಟ: ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಘೋಷಿಸಿದ ಸಿದ್ದರಾಮಯ್ಯ
ಬೆಂಗಳೂರಿನ ಚಿನ್ನಯ್ಯನಪಾಳ್ಯದಲ್ಲಿನ ಮನೆಯಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಿಂದ ಓರ್ವ ಬಾಲಕ ಮೃತಪಟ್ಟಿದ್ದು, ಹಲವರಿಗೆ ಗಾಯಗಳಾಗಿವೆ. ಸಿಎಂ ಸಿದ್ದರಾಮಯ್ಯ ಘಟನಾ ಸ್ಥಳಕ್ಕೆ ಭೇಟಿ ನೀಡಿ ಮೃತ ಬಾಲಕನ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದಿದ್ದಾರೆ.

ಬೆಂಗಳೂರು, ಆಗಸ್ಟ್ 15: ಇಂದು ಬೆಳ್ಳಂಬೆಳಗ್ಗೆ ನಿಗೂಢ ಸ್ಫೋಟಕ್ಕೆ (Explosion) ಸಿಲಿಕಾನ್ ಸಿಟಿ ಮಂದಿ ಬೆಚ್ಚಿಬಿದ್ದಿದ್ದಾರೆ. ಯಾರಿಗೆ ಏನ್ ಆಗ್ತಿದೆ ಅಂತಾ ಗೊತ್ತಾಗಿಲ್ಲ. ಎದ್ನೋ, ಬಿದ್ನೋ ಅಂತಾ ಜನರು ಮನೆಯಿಂದ ಓಡಿದ್ದಾರೆ. ಚಿನ್ನಯ್ಯನಪಾಳ್ಯದ ಶ್ರೀರಾಮ ಕಾಲೋನಿಯ ಮನೆಯೊಂದರಲ್ಲಿ ಸಂಭವಿಸಿದ ಅನುಮಾನಾಸ್ಪದ ವಸ್ತು ಸ್ಫೋಟದಲ್ಲಿ 8 ವರ್ಷದ ಬಾಲಕ ಸಾವನ್ನಪ್ಪಿದ್ದು, ಹಲವರಿಗೆ ಗಾಯಳಾಗಿವೆ. ಮೃತ ಮುಬಾರಕ್ ಕುಟುಂಬಕ್ಕೆ 5 ಲಕ್ಷ ರೂ ಪರಿಹಾರ ಮತ್ತು ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.
ಮನೆಗಳನ್ನು ನಾವೇ ದುರಸ್ತಿ ಮಾಡಿಸಿಕೊಡುತ್ತೇವೆ: ಸಿಎಂ ಸಿದ್ದರಾಮಯ್ಯ
ಘಟನಾ ಸ್ಥಳಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿದ ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಇವತ್ತು ಅಹಿತಕರ ಘಟನೆ ನಡೆದಿದೆ. ಮೇಲ್ನೋಟಕ್ಕೆ ಗ್ಯಾಸ್ ಸಿಲಿಂಡರ್ ಸ್ಫೋಟದಂತೆ ಕಂಡುಬಂದಿದೆ. ಕಸ್ತೂರಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಸ್ಫೋಟ ಸಂಭವಿಸಿದ್ದು, ಮುಬಾರಕ್ ಎಂಬ ಬಾಲಕ ಮೃತಪಟ್ಟಿದ್ದಾನೆ. 9 ಜನ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಸುಮಾರು 13 ಮನೆಗಳಿಗೆ ಹಾನಿಯಾಗಿದ್ದು, ನಾವೇ ದುರಸ್ತಿ ಮಾಡಿಸಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ: ಬೆಂಗಳೂರು: ಮನೆಯೊಂದರಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟ; ಬಾಲಕ ಸಾವು, ಹಲವರಿಗೆ ಗಾಯ
ಸಂಜಯ್ ಗಾಂಧಿ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಮೂವರು ಗಾಯಾಳುಗಳ ಪೈಕಿ 60 ವರ್ಷದ ಸರಸಮ್ಮ ಸ್ಥಿತಿ ಗಂಭೀರವಾಗಿದೆ. ಪ್ರಮೀಳಾ(40) ಹಾಗೂ ರಾಜೇಶ್(38) ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ. ಇನ್ನು ಸಂಜಯ್ ಗಾಂಧಿ ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಆಸ್ಪತ್ರೆ ಬಳಿ ಬ್ಯಾರಿಕೇಡ್ಗಳನ್ನ ಹಾಕಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ.
ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿದ್ದಿಷ್ಟು
ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಹೇಳಿಕೆ ನೀಡಿದ್ದು, ಆಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಒಂದು ಮಗು ಮೃತಪಟ್ಟಿದೆ, ಓರ್ವ ಮಹಿಳೆ ಸ್ಥಿತಿ ಗಂಭೀರವಾಗಿದೆ. ಸ್ಫೋಟದ ತೀವ್ರತೆಗೆ 6ರಿಂದ 7 ಮನೆಗಳಿಗೆ ಹಾನಿಯಾಗಿದೆ. 5 ಆಸ್ಪತ್ರೆಗಳಲ್ಲಿ ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಇದ್ದಕ್ಕಿದ್ದಂತೆ ದೊಡ್ಡ ಸ್ಫೋಟವಾಯ್ತು ಎಂದ ಸ್ಥಳೀಯರು: ವಿಡಿಯೋ ನೋಡಿ
ಸ್ಫೋಟ ಯಾವ ರೀತಿಯಾಗಿದೆ ಅಂತಾ ತಕ್ಷಣಕ್ಕೆ ಹೇಳಲು ಸಾಧ್ಯವಿಲ್ಲ. ಮನೆಯಿಂದ ಡ್ಯಾಮೇಜ್ ಆಗಿರುವ ಬಗ್ಗೆ ತನಿಖೆ ನಡೆಸುತ್ತೇವೆ. ಸ್ಫೋಟವಾದಾಗ ತಾಯಿ ಮತ್ತು ಮಗು ಮಾತ್ರ ಇದ್ದರು. ಅವಶೇಷಗಳನ್ನು ಕ್ಲೀನ್ ಮಾಡಿದ ಬಳಿಕ ಸತ್ಯಾಂಶ ತಿಳಿಯಲಿದೆ ಎಂದಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



