
ಬೆಂಗಳೂರು, ಮಾರ್ಚ್ 23: ನಗರದಲ್ಲಿ ಡಿಜಿಟಲ್ ಅರೆಸ್ಟ್ (Digital Arrest) ಹೆಸರಿನ ವಂಚನೆ ಜಾಲ ಬೆಳೆಯುತ್ತಲೇ ಇದೆ. ಕೆಲ ದಿನಗಳ ಹಿಂದೆಯಷ್ಟೇ ವೃದ್ಧ ಉದ್ಯಮಿಗೆ ಇದೇ ರೀತಿ 15 ಕೋಟಿ ರೂ. ವಂಚಿಸಲಾಗಿತ್ತು. ಇದೀಗ ಮತ್ತೊಮ್ಮೆ ಅದೇ ರೀತಿಯ ಸೈಬರ್ ವಂಚನೆಯ ಪ್ರಕರಣ ಬೆಳಕಿಗೆ ಬಂದಿದೆ. ನಗರದ ನಿವೃತ್ತ ಸಂಶೋಧಕರೊಬ್ಬರಿಗೆ ಬರೋಬ್ಬರಿ 5 ಕೋಟಿ ರೂ. ಸೈಬರ್ ವಂಚನೆ ಮಾಡಿದ್ದು, ವೃದ್ಧನನ್ನು ಬೆದರಿಸಿ ಹಣ ವರ್ಗಾಯಿಸಿಕೊಳ್ಳಲಾಗಿದೆ ಎನ್ನಲಾಗಿದೆ.
94 ವರ್ಷದ ನಿವೃತ್ತ ಸಂಶೋಧಕರಿಗೆ ಅಪರಿಚಿತ ವ್ಯಕ್ತಿಯೊಬ್ಬ ಲ್ಯಾಂಡ್ ಲೈನ್ಗೆ ಕರೆ ಮಾಡಿ, ನಿಮ್ಮ ವಿರುದ್ಧ ಬಳ್ಳಾರಿಯಲ್ಲಿ ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ ಎಂದು ಹೇಳಿ ಬೆದರಿಕೆ ಹಾಕಿದ್ದಾನೆ. ನಂತರ ತಾನು ಸಿಬಿಐ ಅಧಿಕಾರಿ ಎಂದು ಹೇಳಿಕೊಂಡ ಮತ್ತೊಬ್ಬ ವ್ಯಕ್ತಿ ‘ಸಂದೀಪ್ ರಾವ್’ ಎಂಬ ಹೆಸರಿನಲ್ಲಿ ಕರೆ ಮಾಡಿ, ಆಧಾರ್ ಕಾರ್ಡ್ ವಿವರಗಳನ್ನು ವಾಟ್ಸಪ್ ಮೂಲಕ ಪಡೆದಿದ್ದಾನೆ. ಬಳಿಕ ನಕಲಿ ಎಫ್ಐಆರ್ ಕಳುಹಿಸಿ, ಸಿಬಿಐ ಅಧಿಕಾರಿಗಳಂತೆ ವೇಷ ಹಾಕಿಕೊಂಡು ವಿಡಿಯೋ ಕಾಲ್ ಮೂಲಕ ಬೆದರಿಕೆ ಹಾಕಿದ್ದಾರೆ ಎಂದು ವೃದ್ಧ ಆರೋಪಿಸಿದ್ದಾರೆ.
ಇದನ್ನೂ ಓದಿ ಡಿಜಿಟಲ್ ಅರೆಸ್ಟ್ ಎಂದು ಯಾಮಾರಿಸಿ ವೃದ್ಧ ಉದ್ಯಮಿಯ 15 ಕೋಟಿ ರೂ. ಎಗರಿಸಿದ್ರು!
ಕೇಸ್ ಕೈ ಬಿಡಲು ಹಣ ನೀಡಬೇಕು ಎಂದು ಒತ್ತಾಯಿಸಿದ ಆರೋಪಿಗಳು, ಜನವರಿ 17ರಿಂದ ಫೆಬ್ರವರಿ 23ರವರೆಗೆ ಹಂತ ಹಂತವಾಗಿ ಒಟ್ಟು 4.91 ಕೋಟಿ ರೂಪಾಯಿಯನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಬಳಿಕ ಇನ್ನಷ್ಟು ಹಣ ಕೇಳಿದಾಗ ಅನುಮಾನಗೊಂಡ ವೃದ್ಧ ಪೊಲೀಸರನ್ನು ಸಂಪರ್ಕಿಸಿದ್ದಾರೆ. ಈ ಸಂಬಂಧ ಸೆಂಟ್ರಲ್ ಸೈಬರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.