ಇದು ಪಕ್ಕಾ ಸಿನಿಮೀಯ ವಂಚನೆ! ಡಿಸೈನ್ ಸೆಲೆಕ್ಟ್ ಮಾಡಿ ಫೋಟೋ ತೆಗೆಯೋ ನೆಪದಲ್ಲಿ 3 ಕೋಟಿ ರೂ. ಚಿನ್ನಾಭರಣ ದೋಚಿ ಖದೀಮರು ಪರಾರಿ

ಬೆಂಗಳೂರಿನ ಮಲ್ಲೇಶ್ವರಂನಲ್ಲಿ ಹೋಲ್‌ಸೇಲ್ ಆಗಿ ಚಿನ್ನ ಖರೀದಿಸುವುದಾಗಿ ನಂಬಿಸಿ, ನಗರತ್ ಪೇಟೆಯ ಮೆಹ್ತಾ ಜ್ಯುವೆಲ್ಲರಿ ಮ್ಯಾನೇಜರ್ ಕೈಯಿಂದ 3 ಕೋಟಿ ರೂ. ಮೌಲ್ಯದ 1.85 ಕೆಜಿ ಚಿನ್ನಾಭರಣಗಳನ್ನು ಫೋಟೋ ತೆಗೆದುಕೊಳ್ಳುವ ನೆಪದಲ್ಲಿ ದೋಚಿ ಮೂವರು ಖದೀಮರು ಎಸ್ಕೇಪ್ ಆಗಿದ್ದಾರೆ. ಸದ್ಯ, ಕಳ್ಳರ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಇದು ಪಕ್ಕಾ ಸಿನಿಮೀಯ ವಂಚನೆ! ಡಿಸೈನ್ ಸೆಲೆಕ್ಟ್ ಮಾಡಿ ಫೋಟೋ ತೆಗೆಯೋ ನೆಪದಲ್ಲಿ 3 ಕೋಟಿ ರೂ. ಚಿನ್ನಾಭರಣ ದೋಚಿ ಖದೀಮರು ಪರಾರಿ
ಸಾಂದರ್ಭಿಕ ಚಿತ್ರ
Image Credit source: istockphoto.com

Updated on: May 20, 2026 | 10:11 AM

ಬೆಂಗಳೂರು, ಮೇ 20: ಬೆಂಗಳೂರಿನಲ್ಲಿ (Bengaluru) ಹೋಲ್‌ಸೇಲ್ ದರದಲ್ಲಿ ಚಿನ್ನ ಖರೀದಿಸುವ ನೆಪದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ದೋಚಿ ಉದ್ಯಮಿಯೊಬ್ಬರಿಗೆ ಭಾರಿ ವಂಚನೆ ಮಾಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಗರದ ಮಲ್ಲೇಶ್ವರಂನ ಸಂಪಿಗೆ ರಸ್ತೆಯಲ್ಲಿ ಈ ಹೈಟೆಕ್ ಕಳ್ಳತನ ನಡೆದಿದ್ದು, ವಂಚಕರು ಬರೋಬ್ಬರಿ 3 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 850 ಗ್ರಾಂ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾರೆ. ನಗರತ್ ಪೇಟೆಯಲ್ಲಿರುವ ಪ್ರಸಿದ್ಧ ‘ಮೆಹ್ತಾ ಜ್ಯುವೆಲ್ಲರಿ’ ಶಾಪ್ ಮಾಲೀಕರು ಈ ಜಾಲದ ಕೈಗೆ ಸಿಲುಕಿ ಕೋಟಿ ಕೋಟಿ ಮೌಲ್ಯದ ಬಂಗಾರವನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ.

ಮುಖ್ಯಾಂಶಗಳು

  • ಮಾಹಿ ಎಂಟರ್‌ಪ್ರೈಸಸ್ ಹೆಸರಲ್ಲಿ ವಂಚನೆ ಜಾಲ
  • 3 ಕೆಜಿ ಬಂಗಾರದೊಂದಿಗೆ ಹೋದ ಮ್ಯಾನೇಜರ್
  • ಫೋಟೋ ತೆಗೆಯುವ ನೆಪದಲ್ಲಿ ವಂಚನೆ

ಬೋರ್ಡ್ ಬದಲಾಯಿಸಿ ಖೆಡ್ಡಾಕ್ಕೆ ಕೆಡವಿದ ಖದೀಮರು

ಮೆಹ್ತಾ ಜ್ಯುವೆಲ್ಲರಿ ಮಾಲೀಕರಿಗೆ ಪರೇಶ್ ಸೋನಿ ಎಂಬಾತ ಕರೆ ಮಾಡಿ, ತಮಗೆ ‘ಮಾಹಿ ಎಂಟರ್‌ಪ್ರೈಸಸ್’ ಹೆಸರಿನ ಸಂಸ್ಥೆ ಇದ್ದು, ಹೋಲ್‌ಸೇಲ್ ದರದಲ್ಲಿ ಭಾರಿ ಪ್ರಮಾಣದ ಆಭರಣಗಳು ಬೇಕಾಗಿವೆ ಎಂದು ನಂಬಿಸಿ ಆಫೀಸ್‌ಗೆ ಕರೆಸಿಕೊಂಡಿದ್ದ. ಆತ ತನಗೂ ಮತ್ತು ತನ್ನ ವ್ಯವಹಾರಕ್ಕೂ ಯಾವುದೇ ಸಂಬಂಧವಿಲ್ಲದ ಮಲ್ಲೇಶ್ವರಂನ ಕಚೇರಿಯೊಂದರ ಬಾಗಿಲಿನ ಮೇಲೆ ‘ಲೋಟಸ್ ಜ್ಯುವೆಲ್ಲರಿ’ ಮತ್ತು ‘ಮಾಹಿ ಎಂಟರ್‌ಪ್ರೈಸಸ್’ ಎಂದು ನಕಲಿ ಬೋರ್ಡ್ ಹಾಕಿ ಈ ವ್ಯವಸ್ಥಿತ ಸಂಚು ರೂಪಿಸಿದ್ದ. ವ್ಯಾಪಾರದ ಆರ್ಡರ್ ದೊಡ್ಡದಿದೆ ಎಂದು ನಂಬಿದ ಜ್ಯುವೆಲ್ಲರಿ ಮ್ಯಾನೇಜರ್, ಮಾಲೀಕರ ಸೂಚನೆಯಂತೆ ಬರೋಬ್ಬರಿ 3 ಕೆಜಿ ಚಿನ್ನಾಭರಣಗಳನ್ನು ತೆಗೆದುಕೊಂಡು ಮಲ್ಲೇಶ್ವರಂ ಸಂಪಿಗೆ ರಸ್ತೆಯಲ್ಲಿದ್ದ ಪರೇಶ್ ಸೋನಿ ಕಚೇರಿಗೆ ಹೋಗಿದ್ದರು. ಮ್ಯಾನೇಜರ್ ಆಭರಣ ತಂದಾಗ, ಅವುಗಳ ವಿನ್ಯಾಸವನ್ನು ಪರಿಶೀಲಿಸುವಂತೆ ನಟಿಸಿ, ಪಕ್ಕದ ಕ್ಯಾಬಿನ್‌ನಲ್ಲಿ ಕುಳಿತಿದ್ದ ತನ್ನ ಸಹಚರ ಚಂದ್ರಶೇಖರ್ ಎಂಬಾತನಿಗೆ ಒಪ್ಪಿಸಿ ಆಭರಣಗಳ ಪಟ್ಟಿ (List) ಸಿದ್ಧಪಡಿಸಲು ಹೇಳಿದ್ದ.

ಆಭರಣಗಳ ಫೋಟೋ ತೆಗೆಯುವ ನೆಪದಲ್ಲಿ ಪಕ್ಕದ ಕೋಣೆಗೆ ಹೋದ ಆರೋಪಿಗಳು ಅಲ್ಲಿಂದಲೇ ಚಿನ್ನದೊಂದಿಗೆ ನಾಪತ್ತೆಯಾಗಿದ್ದಾರೆ. ಒಳಗೆ ಹೋದವರು ಎಷ್ಟು ಹೊತ್ತಾದರೂ ಬಾರದೇ ಇದ್ದಾಗ ಅನುಮಾನಗೊಂಡು ಮ್ಯಾನೇಜರ್ ಪರಿಶೀಲಿಸಿದಾಗ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಕಳ್ಳತನದ ಆರೋಪಿ 34 ವರ್ಷಗಳ ಬಳಿಕ ಅರೆಸ್ಟ್! ಮೆಡಿಕಲ್ ಬಂದ್ ಸೇರಿ ಈ ಹೊತ್ತಿನ ಪ್ರಮುಖ ಸುದ್ದಿಗಳು

ಸದ್ಯ ಈ ಭಾರಿ ಕಳ್ಳತನ ಕೇಸ್​​​ಗೆ ಸಂಬಂಧಿಸಿದಂತೆ ಶ್ಯಾಮ್, ರಾಮಚಂದ್ರ ಹಾಗೂ ಪರೇಶ್ ಸೋನಿ ಎಂಬುವವರ ವಿರುದ್ಧ ಸಂತ್ರಸ್ತ ಉದ್ಯಮಿ ದೂರು ನೀಡಿದ್ದು, ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳ ಆಧಾರದ ಮೇಲೆ ತನಿಖೆ ಚುರುಕುಗೊಳಿಸಿದ್ದಾರೆ.

ವರದಿ: ವಿಕಾಸ್, ಟಿವಿ9 ಬೆಂಗಳೂರು

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us