
ಬೆಂಗಳೂರು, ಡಿಸೆಂಬರ್ 8: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ (M Chinnaswamy Stadium) ಬಳಿ ಜೂನ್ ತಿಂಗಳಲ್ಲಿ ನಡೆದ ಆರ್ಸಿಬಿ (RCB) ವಿಜಯೋತ್ಸವದ ಸಂದರ್ಭದ ಕಾಲ್ತುಳಿತ ದುರಂತದ ನೆನಪು ಇನ್ನೂ ಮಾಸಿಲ್ಲ. ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿ, ಅನೇಕರು ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಐಪಿಎಲ್ (IPL) ಮ್ಯಾಚ್ಗಳನ್ನು ಮತ್ತೆ ಇದೇ ಕ್ರೀಡಾಂಗಣದಲ್ಲಿ ಆಯೋಜನೆ ಮಾಡುವುದಕ್ಕೆ ವಿರೋಧ ವ್ಯಕ್ತವಾಗಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜನೆ ಮಾಡಬಾರದು ಎಂದು ಹಿರಿಯ ವಕೀಲ ಅಮೃತೇಶ್ ಎಂಬವರು ಸಂಬಂಧಪಟ್ಟ ಎಲ್ಲ ಇಲಾಖೆ, ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹೈಕೋರ್ಟ್ಗೂ ಅಪೀಲು ಸಲ್ಲಿಸಿದ್ದಾರೆ.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (ಕೆಎಸ್ಸಿಎ) ಚುನಾವಣೆಯಲ್ಲಿ ಮತದಾನದ ಬಳಿಕ ಭಾನುವಾರ ಮಾಧ್ಯಮಗಳಿಗೆ ಪ್ರತಿಯಿಸಿದ್ದ ಡಿಸಿಎಂ ಡಿಕೆ ಶಿವಕುಮಾರ್, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಂತಾರಾಷ್ಟ್ರೀಯ ಮಟ್ಟದ ಮ್ಯಾಚ್ ನಡೆಯುವಂತೆ ಮಾಡಲು ಪ್ರಯತ್ನಿಸುವುದಾಗಿ ಹೇಳಿದ್ದರು. ಐಪಿಎಲ್ ಪಂದ್ಯಗಳ ಆಯೋಜನೆಗೆ ಅನುಮತಿ ದೊರಕಿಸಿಕೊಡಲು ಯತ್ನಿಸುವುದಾಗಿ ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಅಮೃತೇಶ್ ಪಂದ್ಯಗಳ ಆಯೋಜನೆಗೆ ಅನುಮತಿ ನೀಡಬಾರದು ಎಂದು ಅಪೀಲ್ ಸಲ್ಲಿಸಿದ್ದಾರೆ.
ವಕೀಲ ಅಮೃತೇಶ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ, ಪೊಲೀಸ್ ಇಲಾಖೆ, ಅಗ್ನಿಶಾಮಕ ಹಾಗೂ ತುರ್ತು ಸೇವೆಗಳು, ಪಿಡಬ್ಲ್ಯೂಡಿ, ಕೆಎಸ್ಸಿಎ ಹಾಗೂ ಹೈಕೋರ್ಟ್ಗೆ ವಿವರವಾದ ಪತ್ರ ಸಲ್ಲಿಸಿದ್ದು ಹಲವು ಅಂಶಗಳನ್ನು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ನಿರಾಸೆಯಲ್ಲಿದ್ದ ಆರ್ಸಿಬಿ ಅಭಿಮಾನಿಗಳಿಗೆ ಗುಡ್ ನ್ಯೂಸ್
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಮತ್ತು ಇತರ ವಾಣಿಜ್ಯ ಪಂದ್ಯಗಳಿಗೆ ಅನುಮತಿ ನಿರಾಕರಿಸುವಂತೆ ರಾಜ್ಯ ಸರ್ಕಾರ ಮತ್ತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳನ್ನು ವಕೀಲ ಅಮೃತೇಶ್ ಒತ್ತಾಯಿಸಿದ್ದಾರೆ.
ವರದಿ: ವಿಕಾಸ್, ಟಿವಿ9 ಬೆಂಗಳೂರು
Published On - 9:31 am, Mon, 8 December 25