ಪ್ರಧಾನಿ ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ ಎಂಬ ವಿಡಿಯೋ ವೈರಲ್: ಬೆಂಗಳೂರಿನಲ್ಲಿ ಯುವಕನ ಬಂಧನ
ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧದ ವಾತಾವರಣ ಸೃಷ್ಟಿಯಾದ ಸಂದರ್ಭದಲ್ಲಿ ಕರ್ನಾಟಕದ ಹಲವು ಕಡೆಗಳಲ್ಲಿ ಕೆಲವು ವ್ಯಕ್ತಿಗಳು ಪಾಕಿಸ್ತಾನದ ಪರವಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ಸಂದೇಶ ಪ್ರಕಟಿಸಿದ ಕುರಿತು ವರದಿಯಾಗಿದ್ದವು. ಇದೀಗ, ವ್ಯಕ್ತಿಯೊಬ್ಬ, ‘‘ಪ್ರಧಾನಿ ಮೋದಿ ಮನೆ ಮೇಲೆ ಮೊದಲು ಬಾಂಬ್ ಹಾಕಿ’’ ಎಂಬ ವಿಡಿಯೋ ವೈರಲ್ ಮಾಡಿ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರು, ಮೇ 13: ಪ್ರಧಾನಿ ನರೇಂದ್ರ ಮೋದಿ (Narendra Modi) ವಿರುದ್ಧ ಪ್ರಚೋದನಾಕಾರಿ ಹೇಳಿಕೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ಲೋಡ್ ಮಾಡಿದ್ದ ಯುವಕನನ್ನು ಬೆಂಗಳೂರಿನ (Bengaluru) ಬಂಡೆಪಾಳ್ಯ ಪೊಲೀಸರು ಬಂಧಿಸಿದ್ದಾರೆ. ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಆರೋಪಿ ನವಾಜ್ ಎಂಬಾತನ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಸದ್ಯ ಆತನನ್ನು ಪರಪ್ಪನ ಅಗ್ರಹಾರ ಜೈಲಿನಲ್ಲಿರಿಸಲಾಗಿದೆ.
ಮೋದಿ ಮನೆಗೆ ಮೊದಲು ಬಾಂಬ್ ಹಾಕಿ ಎಂದಿದ್ದ ನವಾಜ್
“ಭಾರತ ಮತ್ತು ಪಾಕಿಸ್ತಾನ ಮಧ್ಯೆ ಯುದ್ಧವಾಗುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಮನೆ ಮೇಲೆ ಯಾಕೆ ಪಾಕಿಸ್ತಾನ ಬಾಂಬ್ ಹಾಕಿಲ್ಲ? ಜನರೆಲ್ಲ ಸುಮ್ಮನೆ ನೆಮ್ಮದಿಯಿಂದ ಇರುವಾಗ ಈ ಪರಿಸ್ಥಿತಿ ಸೃಷ್ಟಿಸಿದ್ದು ಮೋದಿ. ಮೊದಲು ಮೋದಿ ಮನೆ ಮೇಲೆ ಬಾಂಬ್ ಹಾಕಬೇಕು” ಎಂದು ವೈರಲ್ ವಿಡಿಯೋದಲ್ಲಿ ನವಾಜ್ ಹೇಳಿದ್ದಾನೆ.
ಪಬ್ಲಿಕ್ ಸರ್ವೆಂಟ್ ಐಡಿಯಲ್ಲಿ ನವಾಜ್ ವಿಡಿಯೋ ವೈರಲ್ ಮಾಡಿದ್ದ. ಇದನ್ನು ಆಧರಿಸಿ ಬಂಡೆಪಾಳ್ಯ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.
ಕೆಲವೇ ದಿನಗಳ ಹಿಂದಷ್ಟೇ ಉಡುಪಿ ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಪಾಕಿಸ್ತಾನದ ಪರ ಸಂದೇಶಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಿರುವುದು ಬೆಳಕಿಗೆ ಬಂದಿತ್ತು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿದ್ದ ಪೊಲೀಸರು ಕೆಲವರನ್ನು ವಶಕ್ಕೆ ಪಡೆದಿದ್ದರು. ಇದೀಗ ಬೆಂಗಳೂರಿನಲ್ಲಿ ಮೋದಿ ವಿರುದ್ಧ ಪ್ರಚೋದನಕಾರಿ ವಿಡಿಯೋ ವೈರಲ್ ಆಗಿದೆ.
ಇದನ್ನೂ ಓದಿ: ಬೆಂಗಳೂರಿನ ಮಾಲ್ಗಳಲ್ಲಿ ಕಟ್ಟೆಚ್ಚರ: ಸೆಕ್ಯೂರಿಟಿ ಚೆಕಿಂಗ್, ಭದ್ರತೆ ಹೆಚ್ಚಳ
ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಪ್ರವಾಸಿಗರ ಮೇಲೆ ನಡೆದಿದ್ದ ಭಯೋತ್ಪಾದಕದ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನದ ನಾಲ್ಕು ಪ್ರದೇಶಗಳು ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಐದು ಕಡೆಗಳಲ್ಲಿ ಉಗ್ರ ನಿಗ್ರಹ ಕಾರ್ಯಚರಣೆ ನಡೆಸಿತ್ತು. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಸೇನೆ ಭಾರತೀಯ ನಾಗರಿಕರ ಮೇಲೆ ದಾಳಿ ನಡೆಸಿತ್ತು. ಅಲ್ಲದೆ ಭಾರತದ 15 ನಗರಗಳನ್ನು ಗುರಿಯಾಗಿಸಿ ದಾಳಿ ನಡೆಸಲು ಸಂಚು ರೂಪಿಸಿತ್ತು. ಇದಕ್ಕೆ ತಿರುಗೇಟು ನೀಡಿದ್ದ ಭಾರತೀಯ ಸೇನೆ ಪಾಕಿಸ್ತಾನದ ಅನೇಕ ವಾಯುನೆಲೆಗಳನ್ನು ಮತ್ತು ವಾಯು ರಕ್ಷಣಾ ವ್ಯವಸ್ಥೆಗಳನ್ನು ಧ್ವಂಸಗೊಳಿಸಿತ್ತು. ಅಂತಿಮವಾಗಿ ಪಾಕಿಸ್ತಾನ ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕರು ಮನವಿ ಮಾಡಿದ್ದರ ಮೇರೆಗೆ ಕದನ ವಿರಾಮಕ್ಕೆ ಭಾರತ ಸಮ್ಮತಿಸಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:21 am, Tue, 13 May 25







