
ಬೆಂಗಳೂರು, ಸೆಪ್ಟೆಂಬರ್ 18: ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮೆಟ್ರೋ ಮೂರನೇ ಹಂತದ ಯೋಜನೆಗೆ ಚಾಲನೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಆ ಮಾರ್ಗದಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಆದರೆ, ಪೂರ್ಣ ಪ್ರಮಾಣದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಈ ಹಿಂದೆಯೇ ಅಸಮಾಧಾನ ವ್ಯಕ್ತಪಡಿಸಿತ್ತು. ಇದೀಗ ಮತ್ತೊಮ್ಮೆ ಅನುಮತಿಗಾಗಿ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಈ ಬಾರಿಯಾದರೂ ಗ್ರೀನ್ ಸಿಗ್ನಲ್ ಸಿಗುತ್ತದೆಯೇ ಎಂಬುದು ಕುತೂಹಲ ಮೂಡಿಸಿದೆ.
ಕಳೆದ ವರ್ಷ ಆಗಸ್ಟ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಮೆಟ್ರೋ ಮೂರನೇ ಹಂತದ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದರು. ಆರೆಂಜ್ ಲೈನ್ ಅನ್ನು ಪೂರ್ಣ ಪ್ರಮಾಣದಲ್ಲಿ ಡಬಲ್ ಡೆಕ್ಕರ್ ಮಾಡುವಂತೆ ರಾಜ್ಯ ಸರ್ಕಾರ ಅನುಮತಿ ಕೋರಿತ್ತು. ಆದರೆ, ಪೂರ್ಣ ಪ್ರಮಾಣದ ಡಬಲ್ ಡೆಕ್ಕರ್ ರಸ್ತೆ ಫ್ಲೈಓವರ್ ನಿರ್ಮಾಣದ ಪ್ರಸ್ತಾವನೆಗೆ ಕೇಂದ್ರ ಸರ್ಕಾರದಿಂದ ತೀವ್ರ ಆಕ್ಷೇಪ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಸುಮಾರು 37 ಕಿಲೋಮೀಟರ್ ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮರುಪ್ರಸ್ತಾವನೆ ಸಲ್ಲಿಸಲು ಸಿದ್ಧತೆ ನಡೆಸಿದೆ.
ಜೆ.ಪಿ.ನಗರ ನಾಲ್ಕನೇ ಹಂತದಿಂದ ಕೆಂಪಾಪುರದವರೆಗೆ 32 ಕಿಲೋಮೀಟರ್ ಹಾಗೂ ಕಡಬಗೆರೆಯಿಂದ ಹೊಸಹಳ್ಳಿವರೆಗೆ 12.8 ಕಿಲೋಮೀಟರ್ ಸೇರಿದಂತೆ ಒಟ್ಟು 44.65 ಕಿಲೋಮೀಟರ್ ಉದ್ದದ ಮೆಟ್ರೋ ಮಾರ್ಗ ನಿರ್ಮಾಣದ ಯೋಜನೆ ಇದಾಗಿದೆ. ಕಳೆದ ಎರಡು ವರ್ಷಗಳಿಂದ ಈ ಯೋಜನೆಗೆ ಗ್ರೀನ್ ಸಿಗ್ನಲ್ ಸಿಕ್ಕಿರಲಿಲ್ಲ.
2022ರಲ್ಲಿ ರಾಜ್ಯ ಸರ್ಕಾರ ಅನುಮೋದಿಸಿ ಕಳುಹಿಸಿದ್ದ ಮೂರನೇ ಹಂತದ ಯೋಜನೆಗೆ 15,611 ಕೋಟಿ ರೂಪಾಯಿ ಅಂದಾಜು ವೆಚ್ಚವನ್ನು ಕೇಂದ್ರ ಸರ್ಕಾರ 2024ರಲ್ಲಿ ಒಪ್ಪಿಕೊಂಡಿತ್ತು. ಇದೀಗ ಈ ಎರಡು ಮಾರ್ಗಗಳಲ್ಲಿ ಸುಮಾರು 37 ಕಿಲೋಮೀಟರ್ ಉದ್ದದ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮರುಪ್ರಸ್ತಾವನೆ ಸಲ್ಲಿಸಿದೆ.
ಡಬಲ್ ಡೆಕ್ಕರ್ ನಿರ್ಮಾಣದ ಕುರಿತು ಮೆಟ್ರೋ ಪ್ರಯಾಣಿಕರು ಮಿಶ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅಗತ್ಯವಿರುವ ಕಡೆ ಮಾತ್ರ ಡಬಲ್ ಡೆಕ್ಕರ್ ನಿರ್ಮಿಸಬೇಕು. ಸಂಪೂರ್ಣ ಮಾರ್ಗದಲ್ಲಿ ಡಬಲ್ ಡೆಕ್ಕರ್ ನಿರ್ಮಿಸುವ ಅಗತ್ಯವಿಲ್ಲ. ಇದರಿಂದ ಮೆಟ್ರೋ ಪ್ರಯಾಣಿಕರಿಗೆ ತೊಂದರೆಯಾಗಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.
ಈಗಾಗಲೇ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) ನಡೆಸಿರುವ ಅಧ್ಯಯನದಲ್ಲೂ ಮೆಟ್ರೋ ಮಾರ್ಗದ ಜೊತೆಯಲ್ಲೇ ಫ್ಲೈಓವರ್ ನಿರ್ಮಿಸುವುದರಿಂದ ಜನರು ಖಾಸಗಿ ವಾಹನಗಳನ್ನೇ ಬಳಸಲು ಮುಂದಾಗಬಹುದು ಎಂದು ಎಚ್ಚರಿಸಲಾಗಿದೆ. ಇದರಿಂದ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗುವ ಸಾಧ್ಯತೆ ಇದ್ದು, ವಾಯುಮಾಲಿನ್ಯ ಮತ್ತು ಕಾರ್ಬನ್ ಹೊರಸೂಸುವಿಕೆ ಹೆಚ್ಚಾಗಬಹುದು ಎಂದು ಅಧ್ಯಯನ ತಿಳಿಸಿದೆ.
ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಸುಮಾರು 9,700 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಈ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದೆ. ಆದರೆ, ಈವರೆಗೆ ಕೇಂದ್ರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದಿಂದ ಡಬಲ್ ಡೆಕ್ಕರ್ಗೆ ಅನುಮೋದನೆ ದೊರೆತಿಲ್ಲ.
ಡಬಲ್ ಡೆಕ್ಕರ್ ನಿರ್ಮಾಣದಿಂದ ವಾಹನ ದಟ್ಟಣೆ ಹೆಚ್ಚಾಗಬಹುದು. ಇದರಿಂದ ಮೆಟ್ರೋದಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಕಡಿಮೆಯಾಗಬಹುದು ಎಂಬುದು ಕೇಂದ್ರ ಸರ್ಕಾರದ ಆಕ್ಷೇಪವಾಗಿದೆ. ಆದರೆ, ಡಬಲ್ ಡೆಕ್ಕರ್ ಫ್ಲೈಓವರ್ನಿಂದ ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ರಾಜ್ಯ ಸರ್ಕಾರ ಮತ್ತೊಮ್ಮೆ ವರದಿ ಸಲ್ಲಿಸಿದೆ.
ಇದನ್ನೂ ಓದಿ: ಫೇಸ್-3 ಮೆಟ್ರೋ ಮಾರ್ಗದಲ್ಲಿ 37ರ ಬದಲು 11 ಕಿ.ಮೀ. ಮಾತ್ರ ಡಬಲ್ ಡೆಕ್ಕರ್ ಫ್ಲೈಓವರ್?
ಒಟ್ಟಿನಲ್ಲಿ, ಬೆಂಗಳೂರಿನ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ಮೆಟ್ರೋ ಯೋಜನೆ ಕೈಗೆತ್ತಿಕೊಂಡಿದೆ. ಆದರೆ, ಸಂಪೂರ್ಣ ಮಾರ್ಗದಲ್ಲಿ ಡಬಲ್ ಡೆಕ್ಕರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ, ಮರುಪ್ರಸ್ತಾವನೆಗೆ ಅನುಮತಿ ಸಿಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ