Bengaluru: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗನ ದುರ್ಮರಣ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು

ಬೆಂಗಳೂರು ನಗರದ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣ ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

Bengaluru: ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗನ ದುರ್ಮರಣ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಸಿದ ಪೊಲೀಸರು
ಮೆಟ್ರೋ ಪಿಲ್ಲರ್ ಕುಸಿದು ತಾಯಿ, ಮಗನ ದುರ್ಮರಣ ಪ್ರಕರಣ ಸಂಬಂಧ ಚಾರ್ಜ್​ಶೀಟ್ ಸಲ್ಲಿಸಿದ ಗೋವಿಂದಪುರ ಠಾಣಾ ಪೊಲೀಸರು
Rakesh Nayak Manchi

Updated on: Jun 23, 2023 | 8:27 AM

ಬೆಂಗಳೂರು: ನಗರದ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಕುಸಿದು ತಾಯಿ ಮಗ ಸಾವನ್ನಪ್ಪಿದ ಪ್ರಕರಣ (Metro pillar collapse case) ಸಂಬಂಧ ಪೊಲೀಸರು ನ್ಯಾಯಾಲಯಕ್ಕೆ ಚಾರ್ಜ್ ಶೀಟ್(Chargesheet) ಸಲ್ಲಿಸಿದ್ದಾರೆ. ಘಟನೆ ನಡೆದು ಐದು ತಿಂಗಳ ನಂತರ ಪೊಲೀಸರು ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದು, ಸುಮಾರು 1100 ಪುಟಗಳ ದೋಷಾರೋಪಣೆ ಪಟ್ಟಿಯಲ್ಲಿ 11 ಅಧಿಕಾರಿಗಳ ಮೇಲೆ ದೋಷಾರೋಪ ಮಾಡಲಾಗಿದೆ.

ಬರೋಬ್ಬರಿ ಐದು ತಿಂಗಳು ತನಿಖೆ ನಡೆಸಿದ್ದ ಗೋವಿಂದಪುರ ಠಾಣಾ ಪೊಲೀಸರು ಕನ್ಸ್ಟ್ರಕ್ಷನ್ ಕಂಪನಿ ಇಂಜಿನಿಯರ್ಸ್ ಹಾಗೂ ಬಿಎಂಆರ್​ಸಿಎಲ್ ಇಂಜಿನಿಯರ್ಸ್ ಸೇರಿ 11 ಜನರ ಮೇಲೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಲಾಗಿದೆ. ತಜ್ಞರ ವರದಿಗಳು, ಪೊಲೀಸರ ತನಿಖೆ ಹಾಗೂ ಎಫ್ಎಸ್ಎಲ್ ರಿಪೋರ್ಟ್ ಆಧಾರದ ಮೇಲೆ ತನಿಖೆ ನಡೆಸಿದ್ದ ಪೊಲೀಸರು ಐಐಟಿ ರಿಪೋರ್ಟ್ ಮತ್ತು ಎಫ್ಎಸ್ಎಲ್ ರಿಪೋರ್ಟ್ ಚಾರ್ಜ್ ಶೀಟ್​ನಲ್ಲಿ ಅಟ್ಯಾಚ್ ಮಾಡಿದ್ದಾರೆ. ಅಲ್ಲದೆ, ಅಧಿಕಾರಿಗಳ ಲೋಪ, ಹಾಗೂ ಪಿಲ್ಲರ್ ನಿರ್ಮಾಣ ವೇಳೆ ಕೈಗೊಂಡ ಸುರಕ್ಷತಾ ಕ್ರಮಗಳ ವೈಫಲ್ಯದ ಬಗ್ಗೆ ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: ಕುಡಿದ ನಶೆಯಲ್ಲಿ ಅಪರಿಚಿತನಿಗೆ ಕಾರು ಕೊಟ್ಟು ಮೆಟ್ರೋ ಮೂಲಕ ಮನೆಗೆ ಬಂದ ಯುವಕ

ಪ್ರಾಜೆಕ್ಟ್ ಡಾಕ್ಯುಮೆಂಟ್​ಗಳನ್ನ ಪರಿಶೀಲನೆ ನಡೆಸಿದ ಪೊಲೀಸರು, ಪಿಲ್ಲರ್ ಡಿಸೈನ್ ಹೇಗೆ ಮಾಡಲಾಗಿತ್ತು, ಸುರಕ್ಷತೆ ಏನೆಲ್ಲಾ ಕ್ರಮ ಕೈಗೊಳ್ಳಬೇಕಿತ್ತು, ಲೋಪ ಯಾರದ್ದು ಎಂಬಿತ್ಯಾದಿ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ. ಅಲ್ಲದೆ, ಘಟನೆ ಬಗ್ಗೆ ಐಐಟಿ ರಿಪೋರ್ಟ್ ಮತ್ತು ಬಳಕೆಯಾದ ಮೆಟಿರಿಯಲ್ಸ್ ಬಗ್ಗೆ ಎಫ್ಎಸ್ಎಲ್ ರಿಪೋರ್ಟ್ ಪಡೆದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

ಬೆಂಗಳೂರು ಮೆಟ್ರೋ ಪಿಲ್ಲರ್ ದುರಂತ ಪಕರಣದ ಹಿನ್ನೆಲೆ

ತನ್ನ ಇಬ್ಬರು ಮಕ್ಕಳೊಂದಿಗೆ ದಂಪತಿ ದ್ವಿಚಕ್ರ ವಾಹನದಲ್ಲಿ ಬೆಂಗಳೂರಿನ ನಾಗವಾರದಿಂದ ಹೋಗುತ್ತಿದ್ದಾಗ ಕಲ್ಯಾಣ್ ನಗರದಿಂದ ಹೆಚ್‌ಆರ್‌ಬಿಆರ್ ಲೇಔಟ್‌ಗೆ ಹೋಗುವ ರಸ್ತೆಯಲ್ಲಿ ನಿರ್ಮಿಸಲಾಗುತ್ತಿದ್ದ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್‌ನ ಕಬ್ಬಿಣದ ರಾಡ್‌ಗಳು ದ್ವಿಚಕ್ರ ವಾಹನದ ಮೇಲೆ ಕುಸಿದು ಬಿದ್ದಿತ್ತು. ಈ ದುರ್ಘಟನೆಯಲ್ಲಿ ಮಹಿಳೆ ತೇಜಸ್ವಿನಿ (28) ಮತ್ತು ಈಕೆಯ ಎರಡೂವರೆ ವರ್ಷದ ಮಗು ವಿಹಾನ್ ಸಾವನ್ನಪ್ಪಿದ್ದರು. ಮತ್ತೊಂದು ಮಗು ಮತ್ತು ಮೃತೆಯ ಪತಿ ಲೋಹಿತ್ ಕುಮಾರ್ ಗಂಭೀರವಾಗಿ ಗಾಯಗೊಂಡಿದ್ದರು.

ದುರ್ಘಟನೆ ಸಂಬಂಧ ಮೃತ ತೇಜಸ್ವಿನಿ ಪತಿ ಲೋಹಿತ್ ಕುಮಾರ್ ನೀಡಿದ ದೂರಿನ ಅನ್ವಯ ಸೈಟ್ ಇಂಜಿನಿಯರ್ಸ್‌, ಕಂಟ್ರ್ಯಾಕ್ಟರ್ಸ್‌, BMRCL ಆಫೀಸರ್ಸ್‌, ಸೈಟ್ ಇನ್‌ಚಾರ್ಜ್‌ ಆಫೀಸರ್ಸ್ ಸೇರಿದಂತೆ ಇತರರ ವಿರುದ್ಧ ಗೋವಿಂದಪುರ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us